ತಾವರೆಕೆರೆಯ ಕಲ್ಲು ಕ್ವಾರಿಯಲ್ಲಿ ಘೋರ ದುರಂತ ; ಬೃಹತ್ ಬಂಡೆ ಕುಸಿದು 7 ಕಾರ್ಮಿಕರ ಬಲಿ

02-07-26 12:10 pm       HK News Staffer   ಕ್ರೈಂ

ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕರೆ ಸಮೀಪದ ಮಾದಪಟ್ಟಣ ಗ್ರಾಮದ ಕಲ್ಲು ಕ್ವಾರಿಯಲ್ಲಿ ಗುರುವಾರ ಬೆಳಗ್ಗೆ ಭೀಕರ ದುರಂತ ಸಂಭವಿಸಿದೆ. ಕಾವೇರಿ ಕಂಪನಿಗೆ ಸೇರಿದ ಕ್ರಷರ್ ಕ್ವಾರಿಯಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಬೃಹತ್ ಬಂಡೆ ಕುಸಿದು ಏಳು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಇನ್ನೂ ಹಲವು ಕಾರ್ಮಿಕರು ಬಂಡೆಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ.

ರಾಮನಗರ, ಜು.2: ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕರೆ ಸಮೀಪದ ಮಾದಪಟ್ಟಣ ಗ್ರಾಮದ ಕಲ್ಲು ಕ್ವಾರಿಯಲ್ಲಿ ಗುರುವಾರ ಬೆಳಗ್ಗೆ ಭೀಕರ ದುರಂತ ಸಂಭವಿಸಿದೆ. ಕಾವೇರಿ ಕಂಪನಿಗೆ ಸೇರಿದ ಕ್ರಷರ್ ಕ್ವಾರಿಯಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಬೃಹತ್ ಬಂಡೆ ಕುಸಿದು ಏಳು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಇನ್ನೂ ಹಲವು ಕಾರ್ಮಿಕರು ಬಂಡೆಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ.

ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಕಾರ್ಮಿಕರು ಎಂದಿನಂತೆ ಇಟಾಚಿ ಯಂತ್ರದ ಸಹಾಯದಿಂದ ಕಲ್ಲು ತೆಗೆಯುವ ಕಾಮಗಾರಿ ನಡೆಸುತ್ತಿದ್ದರು. ಇದೇ ವೇಳೆ ಮೇಲ್ಭಾಗದಲ್ಲಿದ್ದ ಬೃಹತ್ ಬಂಡೆ ದಿಢೀರ್ ಕುಸಿದು ಬಿದ್ದಿದೆ. ಬಂಡೆಗಳು ಗಾಳಿಯಲ್ಲಿ ತೂರಿಬಂದು ನೇರವಾಗಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಘಟನೆಯ ತೀವ್ರತೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ದುರಂತದ ಸುದ್ದಿ ತಿಳಿಯುತ್ತಿದ್ದಂತೆ ತಾವರೆಕರೆ ಪೊಲೀಸರು, ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಸದ್ಯ ಸಾವನ್ನಪ್ಪಿರುವ ಏಳು ಕಾರ್ಮಿಕರ ಪೈಕಿ ನಾಲ್ವರು ಮೃತದೇಹಗಳನ್ನು ಹೊರತೆಗೆದು ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಉಳಿದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯವೂ ಮುಂದುವರಿದಿದೆ. ಇದೇ ವೇಳೆ ಬಂಡೆಗಳಡಿ ಇನ್ನೂ ಐದು ಮಂದಿ ಕಾರ್ಮಿಕರು ಸಿಲುಕಿರುವ ಸಾಧ್ಯತೆ ವ್ಯಕ್ತವಾಗಿದ್ದು, ಅವರನ್ನು ರಕ್ಷಿಸಲು ಜೆಸಿಬಿ ಹಾಗೂ ಇತರ ಯಂತ್ರಗಳ ಸಹಾಯದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ದುರ್ಘಟನೆ ತಾವರೆಕರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕ್ವಾರಿಯಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗಿತ್ತೇ ಎಂಬ ವಿಚಾರವೂ ತನಿಖೆಯ ಭಾಗವಾಗಿದೆ. ಘಟನೆಯ ಕುರಿತು ಅಧಿಕಾರಿಗಳಿಂದ ಅಧಿಕೃತ ವರದಿ ಇನ್ನಷ್ಟೇ ಹೊರಬರಬೇಕಿದ್ದು, ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.