ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್‌ ಲಾರಿಗೆ ಬಸ್ ಡಿಕ್ಕಿ, 6 ಮಂದಿ ಪ್ರಯಾಣಿಕರ ಬಲಿ, 20ಕ್ಕೂ ಹೆಚ್ಚು ಮಂದಿಗೆ ಗಾಯ

26-08-26 11:26 am       HK News Staffer   ಕ್ರೈಂ

ಕಂಟೇನರ್ ಟ್ರಕ್‌ಗೆ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿದ್ದು, ಸುಮಾರು 20 ಮಂದಿ ಗಾಯಗೊಂಡಿರುವ ಘಟನೆ ಸೂರ್ಯಪೇಟೆ ಜಿಲ್ಲೆಯ ಕೋಡಾಡ್ ಬಳಿ ನಡೆದಿದೆ.

ತೆಲಂಗಾಣ , ಆಗಸ್ಟ್ 26:  ಕಂಟೇನರ್ ಟ್ರಕ್‌ಗೆ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿದ್ದು, ಸುಮಾರು 20 ಮಂದಿ ಗಾಯಗೊಂಡಿರುವ ಘಟನೆ ಸೂರ್ಯಪೇಟೆ ಜಿಲ್ಲೆಯ ಕೋಡಾಡ್ ಬಳಿ ನಡೆದಿದೆ.

ಕೋಡಾಡ್ ತಾಲೂಕಿನ ದೋರಕುಂಟಾದಲ್ಲಿ ಇಂದು ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಹೈದರಾಬಾದ್‌ನಿಂದ ಆಂಧ್ರಪ್ರದೇಶದ ಎಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಮುಂದೆ ಸಾಗುತ್ತಿದ್ದ ಕಂಟೇನರ್ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಐವರು ಮಹಿಳೆಯರು ಹಾಗೂ ಓರ್ವ ಪುರುಷ ಮೃತಪಟ್ಟಿದ್ದಾರೆ. ಮೃತರಲ್ಲಿ ಯಸರಪು ಚಿನ್ನಿ (32), ಬೊಳ್ಳಿಪೊಂಗು ಮೇರಿ ಜೋಶ್ನಾ (29) ಹಾಗೂ ಚೆನ್ನಕೇಶವುಲ ನಾಗೇಂದ್ರ ಬಾಬು (21) ಅವರ ಗುರುತು ಪತ್ತೆಯಾಗಿದ್ದು, ಇತರ ಮೂವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಗಾಯಾಳುಗಳನ್ನು ಪೊಲೀಸರು ಹಾಗೂ ಹೆದ್ದಾರಿ ಗಸ್ತು ಸಿಬ್ಬಂದಿ ತಕ್ಷಣ ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಸೂರ್ಯಪೇಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನರಸಿಂಹ ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಮತ್ತು ಹೆದ್ದಾರಿ ಗಸ್ತು ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದ್ದು, ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ. ಎಸ್‌ಪಿ ನರಸಿಂಹ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಂತಾಪ ;

ಭೀಕರ ಅಪಘಾತಕ್ಕೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಅಗತ್ಯವಿರುವ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.