ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ; ಪ್ರಮುಖ ನಗರಗಳಲ್ಲಿ ತೆರಿಗೆ ವಂಚಕರಿಗೆ ಬಲೆ, 25 ವರ್ಷಗಳಿಂದ ರೆಡ್ ಕಾರ್ನರ್ ಇದ್ದರೂ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ಬಲೆಗೆ

01-09-26 07:30 pm       HK News Staffer   ಕ್ರೈಂ

ಸಿಬಿಐ ಅಧಿಕಾರಿಯೆಂದು ಹೇಳಿಕೊಂಡು ಹಣಕಾಸು ವಂಚನೆ ಪ್ರಕರಣಗಳಲ್ಲಿ ಸಿಕ್ಕಿಬೀಳುತ್ತಿದ್ದ ವ್ಯಕ್ತಿಗಳನ್ನೇ ಗುರಿಯಾಗಿಸಿ ಬೆದರಿಕೆಯೊಡ್ಡಿ ಹಣ ಸುಲಿಗೆ ನಡೆಸುತ್ತಿದ್ದ ನಟೋರಿಯಸ್ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು, ಸೆಪ್ಟೆಂಬರ್ 1:  ಸಿಬಿಐ ಅಧಿಕಾರಿಯೆಂದು ಹೇಳಿಕೊಂಡು ಹಣಕಾಸು ವಂಚನೆ ಪ್ರಕರಣಗಳಲ್ಲಿ ಸಿಕ್ಕಿಬೀಳುತ್ತಿದ್ದ ವ್ಯಕ್ತಿಗಳನ್ನೇ ಗುರಿಯಾಗಿಸಿ ಬೆದರಿಕೆಯೊಡ್ಡಿ ಹಣ ಸುಲಿಗೆ ನಡೆಸುತ್ತಿದ್ದ ನಟೋರಿಯಸ್ ಆರೋಪಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 

ಮೂಲತಃ ಕೇರಳದ ಆಲಪ್ಪುಝ- ಕೊಲ್ಲಂ ನಿವಾಸಿ, ಸದ್ಯ ಉತ್ತರ ಪ್ರದೇಶದ ಲಖನೌನಲ್ಲಿ ವಾಸವಿದ್ದ ಸ್ಯಾಮ್ ಪೀಟರ್ ಯಾನೆ ಡ್ಯಾನಿ ತಾರಕನ್ ಯಾನೆ ಆಂಟನಿ (64) ಬಂಧಿತ ವ್ಯಕ್ತಿ. ಈತನ ವಿರುದ್ಧ ದೇಶದ ವಿವಿಧ ರಾಜ್ಯಗಳಲ್ಲಿ 18ಕ್ಕೂ ಹೆಚ್ಚು ಪ್ರಕರಣಗಳಿರುವ ಬಗ್ಗೆ ಮಾಹಿತಿ ಲಭಿಸಿದೆ. 

ಸ್ವಂತ ಗ್ಯಾಂಗ್ ಕಟ್ಟಿಕೊಂಡಿದ್ದ ಆರೋಪಿ 

ಸ್ಯಾಮ್ ಪೀಟರ್ ತನ್ನದೇ ಗ್ಯಾಂಗ್ ಕಟ್ಟಿಕೊಂಡು ರಾಷ್ಟ್ರೀಯ ತನಿಖಾ ಏಜನ್ಸಿಗಳ ಅಧಿಕಾರಿಗಳಂತೆ ನಟಿಸುತ್ತ ಬೇರೆ ಬೇರೆ ನಗರಗಳಲ್ಲಿ ತನ್ನ ಹೆಸರನ್ನು ಬದಲಿಸಿ ವಂಚನೆಗೆ ಪ್ಲಾನ್ ಮಾಡುತ್ತಿದ್ದ. ಹಣಕಾಸು ವಿವಾದ, ಬ್ಯಾಂಕ್ ವಂಚನೆ ಹಾಗೂ ತೆರಿಗೆ ವಂಚನೆ ಪ್ರಕರಣಗಳಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಗುರಿಯಾಗಿಸಿ, ತಾನು ಅಧಿಕಾರ ಹೊಂದಿರುವ ತನಿಖಾಧಿಕಾರಿ ಎಂದು ನಂಬಿಸಿ ಅವರನ್ನು ಬೆದರಿಸಿ ಹಣ ಪಡೆದು ವಂಚನೆ ಮತ್ತು ಸುಲಿಗೆ ನಡೆಸುತ್ತಿದ್ದ. 

2019ರ ಆಗಸ್ಟ್ 16ರಂದು ಮಂಗಳೂರಿನ ಕದ್ರಿ ಪೊಲೀಸರು ಪಂಪ್‌ವೆಲ್‌ನ ಲಾಡ್ಜ್‌ ಒಂದರಲ್ಲಿ ಕಾರ್ಯಾಚರಣೆ ನಡೆಸಿ ಸ್ಯಾಮ್ ಪೀಟರ್ ಸೇರಿದಂತೆ ಆತನ ಗ್ಯಾಂಗ್‌ನ ಎಂಟು ಸದಸ್ಯರನ್ನು ಬಂಧಿಸಿದ್ದರು. ಬಳಿಕ ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು, ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. 

11 ಹೆಸರುಗಳಲ್ಲಿ ಗುರುತಿಸಿಕೊಂಡಿದ್ದ ಸ್ಯಾಮ್!

ತನ್ನ ನಿಜವಾದ ಗುರುತನ್ನು ಮರೆಮಾಚಲು ಆರೋಪಿ ವಿವಿಧ ಕಡೆಗಳಲ್ಲಿ ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ವಾಸಿಸುತ್ತಿದ್ದ. ತನಿಖೆಯ ವೇಳೆ ಒಂದೇ ವ್ಯಕ್ತಿ ತನ್ನ ಹೆಸರನ್ನು ಆಂಟನಿ, ರಾಹುಲ್ ಪೀಟರ್, ಸ್ಯಾಮ್ ಪೀಟರ್, ರಾಜೇಶ್ ರಾಬಿನ್ಸನ್, ರೀತು ರಿಚರ್ಡ್, ರಾಯ್ ಜೇಕಬ್, ರಾಬಿನ್ ರಿಚರ್ಡ್ಸನ್, ರಾಬಿನ್ ಸನ್, ಆಂಟೋನಿ ಪ್ರಾನ್ಸಿಸ್, ಶಾರೂನ್ ಪ್ರಾನ್ಸಿಸ್ ಹಾಗೂ ಡ್ಯಾನಿ ತಾರಕನ್ ಸೇರಿದಂತೆ ಒಟ್ಟು 11 ಹೆಸರುಗಳನ್ನು ಬಳಸಿರುವುದು ಬೆಳಕಿಗೆ ಬಂದಿದೆ.‌ ಒಂದು ಸ್ಥಳದಲ್ಲಿ ಅಪರಾಧ ಎಸಗಿ ಮತ್ತೊಂದು ಸ್ಥಳಕ್ಕೆ ತೆರಳಿ, ಹೆಸರು ಬದಲಿಸಿಕೊಂಡು ಅಲ್ಲಿನ ಸ್ಥಳೀಯವಾಗಿ ವ್ಯಕ್ತಿಗಳನ್ನು ವಂಚನೆಗೀಡು ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

2001ರಿಂದಲೂ ರೆಡ್ ಕಾರ್ನರ್ ನೋಟಿಸ್ 

ಪೊಲೀಸರ ಮಾಹಿತಿ ಪ್ರಕಾರ, ಸ್ಯಾಮ್ ಪೀಟರ್ ಕುಖ್ಯಾತ ವಂಚಕನಾಗಿದ್ದು, ‘ರಾಹುಲ್ ಪೀಟರ್’ ಎಂಬ ಹೆಸರಿನಲ್ಲಿ 2001ರಿಂದಲೂ ಇಂಟರ್‌ಪೋಲ್, ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿತ್ತು. ಇದಲ್ಲದೆ, ಆರೋಪಿ ವಿರುದ್ಧ ಮಂಗಳೂರು ಪೂರ್ವ, ಉಳ್ಳಾಲ, ಕೊಣಾಜೆ ಪೊಲೀಸ್ ಠಾಣೆಗಳು ಸೇರಿದಂತೆ ಚಿಕ್ಕಬಳ್ಳಾಪುರ, ಬೆಂಗಳೂರು, ಉಡುಪಿ ನಗರ ಹಾಗೂ ಕುಶಾಲನಗರದಲ್ಲಿ ಪ್ರಕರಣಗಳು ದಾಖಲಾಗಿವೆ. ಅಲ್ಲದೆ ಬಿಹಾರ, ತಮಿಳುನಾಡು, ಮಹಾರಾಷ್ಟ್ರ, ಉತ್ತರ ಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್ ಹಾಗೂ ಮಧ್ಯಪ್ರದೇಶ ರಾಜ್ಯಗಳಲ್ಲಿಯೂ ಮೋಸ ಮತ್ತು ವಂಚನೆ ಸೇರಿದಂತೆ ಸುಮಾರು 17 ಪ್ರಕರಣಗಳು ದಾಖಲಾಗಿರುವುದು ಸದ್ಯದ ತನಿಖೆಯಲ್ಲಿ ತಿಳಿದುಬಂದಿದೆ.

ಉಳ್ಳಾಲ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಆರೋಪಿ ವಿರುದ್ಧ 17 ಬಾರಿ ವಾರೆಂಟ್ ಹೊರಡಿಸಲಾಗಿತ್ತು. ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪ್ರಕರಣದಲ್ಲಿ 14 ಬಾರಿ ವಾರೆಂಟ್ ಜಾರಿಯಾದ ಬಳಿಕ ಪ್ರೊಕ್ಲಮೇಷನ್ ಕೂಡ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಈತನ‌ ಬಂಧನ ಕಾರ್ಯಾಚರಣೆಯಲ್ಲಿ ಮಂಗಳೂರಿನ ಸಿಸಿಬಿ ಪೊಲೀಸ್ ಸಿಬಂದಿ ಪಾಲ್ಗೊಂಡಿದ್ದರು.