ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ ; ಕುಖ್ಯಾತ ಅಂತರ್ ಜಿಲ್ಲಾ ಕಳ್ಳರ ಬಂಧನ, ದೈವದ ಆಭರಣ ಸೇರಿ ₹17 ಲಕ್ಷದ ಸ್ವತ್ತು ವಶಕ್ಕೆ, ಉಳ್ಳಾಲ, ಪಡುಬಿದ್ರೆ ದೈವಸ್ಥಾನ ಕಳವಿನಲ್ಲೂ ಭಾಗಿ

10-09-26 09:22 pm       HK News Staffer   ಕ್ರೈಂ

ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಬೀಗವನ್ನು ಒಡೆದು, ಬೆಲೆಬಾಳುವ ಕೊರ್ದಬ್ಬು ದೈವದ ಮೂರ್ತಿಗಳು ಹಾಗೂ ದೈವದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ನಾಲ್ವರು ಕುಖ್ಯಾತ ಕಳ್ಳರನ್ನು ಬಂಧಿಸಿದ್ದಾರೆ.

ಮಂಗಳೂರು, ಸೆ.10: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಬೀಗವನ್ನು ಒಡೆದು, ಬೆಲೆಬಾಳುವ ಕೊರ್ದಬ್ಬು ದೈವದ ಮೂರ್ತಿಗಳು ಹಾಗೂ ದೈವದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಪ್ರಕರಣದಲ್ಲಿ ಪೊಲೀಸರು ನಾಲ್ವರು ಕುಖ್ಯಾತ ಕಳ್ಳರನ್ನು ಬಂಧಿಸಿದ್ದಾರೆ. 

ಕಳವು ಬಗ್ಗೆ ಮುಲ್ಕಿ ಠಾಣೆಯಲ್ಲಿ ಅ.ಕ್ರ 65/2026 ಕಲಂ 331(3), 331(4), 305 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಪತ್ತೆಯ ಕುರಿತು ವಿಶೇಷ ಪೊಲೀಸ್ ತಂಡವನ್ನು ರಚಿಸಿದ್ದು, ಆರೋಪಿಗಳಾದ ಜಾಹೀದ್ ಸಿನಾನ್ ಮತ್ತು ಯಾಸೀನ್ ಎಂಬವರನ್ನು ಮುಲ್ಕಿ ಕಾರ್ನಾಡು ಎಂಬಲ್ಲಿ ಬಂಧಿಸಿದ್ದಾರೆ. ಮತ್ತಿಬ್ವರು ಆರೋಪಿಗಳಾದ ಮಹಮದ್ ಅಫ್ರಿದಿ ಮತ್ತು ಎಸ್.ಕೆ. ಅಬ್ದುಲ್ ಜುಮ್ಮಾನ್ ಎಂಬವರನ್ನು ದಾವಣಗೆರೆಯಲ್ಲಿ ಪತ್ತೆಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಜಾಹೀದ್ ಸಿನಾನ್ (36) ಪಡುಬಿದ್ರಿಯ ಹೆಜಮಾಡಿ ನಿವಾಸಿಯಾಗಿದ್ದು ಯಾಸೀನ್ (36) ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿ. ಮಹಮದ್ ಅಫ್ರಿದಿ (26) ದಾವಣಗೆರೆ ಜಿಲ್ಲೆಯ ಗೋಕುಲನಗರ ನಿವಾಸಿ. ಇನ್ನೊಬ್ಬ ಆರೋಪಿ ಎಸ್.ಕೆ. ಅಬ್ದುಲ್ ಜುಮ್ಮಾನ್ (26) ದಾವಣಗೆರೆಯ ಜಾಲಿನಗರ ನಿವಾಸಿ. ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದು ಕಳವು ಮಾಡಲಾದ ಸುಮಾರು 4 ಕೆ.ಜಿ. 521 ಗ್ರಾಂ ತೂಕದ ಬೆಳ್ಳಿ ಹಾಗೂ 34.820 ಗ್ರಾಂ ತೂಕದ ಚಿನ್ನ, ಒಟ್ಟು ಅಂದಾಜು ₹11,20,000/- ಮೌಲ್ಯದ ಚಿನ್ನಾಭರಣ/ಬೆಳ್ಳಿ ವಸ್ತುಗಳನ್ನು ವಶಪಡಿಸಲಾಗಿದೆ. ಕೃತ್ಯಕ್ಕೆ ಬಳಸಿದ ಬೈಕ್ ಮತ್ತು ಕಾರು ಸೇರಿದಂತೆ ಸುಮಾರು ₹6,00,000/- ಮೌಲ್ಯದ ವಾಹನಗಳನ್ನು ವಶಪಡಿಸಿದ್ದು ಒಟ್ಟು ₹17,20,000/- ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ವಿಚಾರಣೆಯಲ್ಲಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಶ್ರೀ ಮಹಾಲಕ್ಷ್ಮೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣ, ಅ.ಕ್ರ.154/2026, ಕಲಂ 331(1), 305 ಬಿಎನ್ಎಸ್ ಹಾಗೂ ಉಡುಪಿ ಜಿಲ್ಲೆಯ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನಾ ಗ್ರಾಮದ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣವನ್ನೂ (ಅ.ಕ್ರ.88/2026, ಕಲಂ 331(4), 305 ಬಿಎನ್ಎಸ್) ಇವರೇ ಮಾಡಿರುವುದು ಪತ್ತೆಯಾಗಿದೆ. ಪ್ರಮುಖ ಆರೋಪಿ ಜಾಹೀದ್ ಸಿನಾನ್ ವಿರುದ್ಧ ಈ ಹಿಂದೆ ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ದಾವಣಗೆರೆ ಹಾಗೂ ಮಂಗಳೂರು ನಗರ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 18 ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. 

ಮಂಗಳೂರು ಉತ್ತರ ಉಪ ವಿಭಾಗದ ಎ.ಸಿ.ಪಿ ಶೀಕಾಂತ್ ಕೆ. ನೇತೃತ್ವದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ್ ಕುಮಾರ್, ಮುಲ್ಕಿ ಠಾಣಾ ಪಿ.ಎಸ್.ಐ ರಾಘವೇಂದ್ರ ನಾಯಕ್ ಹಾಗೂ ಮುಲ್ಕಿ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರಕರಣವನ್ನು ಯಶಸ್ವಿಯಾಗಿ ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿ, ಕಳವು ಮಾಡಲಾದ ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸುವಲ್ಲಿ ಶ್ರಮಿಸಿದ್ದಾರೆ.