ತಲೆ ಮೇಲೆ ಸಿಲಿಂಡರ್ ಎತ್ತಿ ಹಾಕಿ‌ ಕೊಲೆ; ಆರೋಪಿಗೆ 7 ವರ್ಷ ಶಿಕ್ಷೆ

19-08-21 02:48 pm       Headline Karnataka News Network   ಕ್ರೈಂ

ವ್ಯಕ್ತಿಯ ತಲೆ ಮೇಲೆ ಸಿಲಿಂಡರ್ ಎತ್ತಿ ಹಾಕಿ‌ ಕೊಲೆ ಮಾಡಿದ್ದ ಆರೋಪಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಕಲಬುರಗಿ, ಆಗಸ್ಟ್ 19: ವ್ಯಕ್ತಿಯ ತಲೆ ಮೇಲೆ ಸಿಲಿಂಡರ್ ಎತ್ತಿ ಹಾಕಿ‌ ಕೊಲೆ ಮಾಡಿದ್ದ ಆರೋಪಿಗೆ ಇಲ್ಲಿನ ಜಿಲ್ಲಾ 3ನೇ ಸತ್ರ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ನಿಲೇಶ ಖರತ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. 2017ರಲ್ಲಿ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿಯ ಹೋಟೆಲ್​ವೊಂದರಲ್ಲಿ ರಾತ್ರಿ ವೇಳೆ ಮಲಗಿದ್ದ ಎಂಎಸ್‌ಕೆ ಮಿಲ್ ನಿವಾಸಿ ಶರೀಫ್ ಎನ್ನುವ ವ್ಯಕ್ತಿ ಮೇಲೆ ಖಾಲಿ ಸಿಲಿಂಡರ್ ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದ. ಗಂಭೀರವಾಗಿ ಗಾಯಗೊಂಡ ಶರೀಫ್‌ನನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಹೈದರಾಬಾದ್​ನ​ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತಾದರೂ ಆತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ.

ಈ ಕುರಿತು ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮಗ್ರ ತನಿಖೆ ನಡೆಸಿದ ಅಂದಿನ ಸರ್ಕಲ್ ಇನ್ಸ್​ಪೆಕ್ಟರ್, ನಿಲೇಶ ವಿರುದ್ಧ ನ್ಯಾಯಾಲಯಕ್ಕೆ‌ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಜಗದೀಶ ವಿ.ಎನ್, ನಿಲೇಶ ಖರತ್​ಗೆ 7 ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.