ಕಂಡು ಕೇಳರಿಯದ ಮಳೆಗೆ ರಾಮನಗರ ತತ್ತರ ; ಮನೆಗಳು, ಆಸ್ಪತ್ರೆ ಮುಳುಗಡೆ, ರಸ್ತೆಗಳು ಮಂಗಮಾಯ, ಸಿಎಂ ಮಳೆಹಾನಿ ವೀಕ್ಷಣೆ ! 

29-08-22 06:18 pm       HK News Desk   ಕರ್ನಾಟಕ

ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ರಾಮನಗರ ಹಾಗೂ ಚನ್ನಪಟ್ಟಣ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಒಂದೇ ದಿನ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ರಜೆ ಘೋಷಿಸಿದ್ದಾರೆ. 

ರಾಮನಗರ, ಆಗಸ್ಟ್ 29: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ರಾಮನಗರ ಹಾಗೂ ಚನ್ನಪಟ್ಟಣ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಒಂದೇ ದಿನ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ರಜೆ ಘೋಷಿಸಿದ್ದಾರೆ. 

ಭಾರೀ ಮಳೆಯಿಂದಾಗಿ ರಾಮನಗರದಲ್ಲಿರುವ ಆರ್ಕೇಶ್ವರ ಕಾಲೋನಿ ಸಂಪೂರ್ಣ ಜಲಾವೃತವಾಗಿದ್ದು, ಕಾಲೋನಿಯಲ್ಲಿರುವ ಮುಕ್ಕಾಲು ಭಾಗ ಮಳೆಯಿಂದ ಮುಳುಗಡೆಯಾಗಿದೆ. ಮನೆಯಲ್ಲಿದ್ದ ದಿನ ಬಳಕೆ ವಸ್ತು, ಬೈಕ್, ಕಾರು ಸಂಪೂರ್ಣ ಜಲಾವೃತವಾಗಿದೆ. ಇದರಿಂದಾಗಿ ಅಲ್ಲಿನ ಜನರಲ್ಲಿ ಆತಂಕ ಮೂಡಿದೆ. ವರುಣನ ಆರ್ಭಟಕ್ಕೆ ಕನಕಪುರ ರಸ್ತೆಯಲ್ಲಿನ ಗೌಡಯನದೊಡ್ಡಿ ಬಳಿ ಇರುವ ಅರ್ಕಾವತಿ ನದಿಯಲ್ಲಿ ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ಹಸುವೊಂದು ಕೊಚ್ಚಿ ಹೋಗಿದೆ.

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ರಾಮಕೃಷ್ಣ ಆಸ್ಪತ್ರೆಯ ನೆಲಮಹಡಿ ಸಂಪೂರ್ಣ ಜಲಾವೃತವಾಗಿದ್ದು, ಹೊರರೋಗಿಗಳ ವಿಭಾಗ ಸಂಪೂರ್ಣ ಮುಳುಗಡೆಯಾಗಿದೆ. ಹೀಗಾಗಿ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಮಳೆಯಿಂದಾಗಿ ವೈದ್ಯಕೀಯ ಉಪಕರಣಗಳು ಸಂಪೂರ್ಣ ಹಾನಿಯಾಗಿದ್ದು, ಸದ್ಯ ಆಸ್ಪತ್ರೆಯ ಸಿಬ್ಬಂದಿ ವೈದ್ಯಕೀಯ ಸಲಕರಣೆಗಳನ್ನ ನೀರಿನಿಂದ ಹೊರತೆಗೆಯುತ್ತಿದ್ದಾರೆ.

ಮತ್ತೊಂದೆಡೆ ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ ನಡಸುತ್ತಿದ್ದು, ಕೆಲ ವಾಹನಗಳು ನೀರಿನಲ್ಲಿ ಮುಳುಗಡೆಯಾಗಿದೆ. ಅಲ್ಲದೇ ರಾಮನಗರ ಸಮೀಪದ ಸಂಗಬಸವನ ದೊಡ್ಡಿ ಬಳಿ ವಾಹನ ಮುಳುಗಡೆಯಾಗಿರುವ ಹಿನ್ನೆಲೆ ಹೆದ್ದಾರಿಯಲ್ಲಿ ಸಾಲುಗಟ್ಟಿ ವಾಹನಗಳು ನಿಂತಿದ್ದು, ಟ್ರಾಫಿಕ್ ಜಾಂ ಸಮಸ್ಯೆ ಎದುರಾಗಿದೆ.

ಧಾರಾಕಾರ ಮಳೆಗೆ ರಾಷ್ಟ್ರೀಯ ದಶಪಥ ಹೆದ್ದಾರಿಯಲ್ಲಿ ನೀರು ತುಂಬಿದ್ದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗುತ್ತಿಲ್ಲ, ಸಹಾಯವಾಣಿಯನ್ನೂ ತೆರೆದಿಲ್ಲ ಎಂದು ಕಿಡಿಕಾರಿದ್ದಾರೆ. ಸದ್ಯ ಜೆಸಿಬಿ ಮೂಲಕ ರಸ್ತೆ ಸರಿಪಡಿಸಿ ಸಂಚಾರಕ್ಕೆ ಪೊಲೀಸರು ಅವಕಾಶ ಮಾಡಿದ್ದಾರೆ.

ರಾಮನಗರ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಚನ್ನಪ್ಪಟ್ಟಣದ ರೇಷ್ಮೆ ಮಾರುಕಟ್ಟೆಯ ಮುಂಭಾಗದ ಬೆಂ-ಮೈ ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ನೀರು ನುಗ್ಗಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಚನ್ನಪಟ್ಟಣದ ತಟ್ಟಿಗೆರೆ ಬಡಾವಣೆಗೆ ನೀರು ನುಗ್ಗಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯವರೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡದ ಕಾರಣ ಇಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಿಎಂ ಬೊಮ್ಮಾಯಿ ಭೇಟಿ; ಪರಿಹಾರದ ಭರವಸೆ ; 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಮನಗರ ಜಿಲ್ಲೆಯ ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಾಮನಗರದ ಮಾರುತಿ ಬಡಾವಣೆಯಲ್ಲಿ ಭಕ್ಷಿಕೆರೆ ಒಡೆದು ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಯಾಗಿರುವುದನ್ನು ಪರಿಶೀಲಿಸಿದ ಮುಖ್ಯಮಂತ್ರಿ,  ಕೆರೆ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಭಕ್ಷಿಕೆರೆ ಒಡೆದು 100 ರಿಂದ 150 ಮನೆಗಳಿಗೆ ಹಾನಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು. ಭಕ್ಷಿಕೆರೆ ನಂತರ ರೈತರ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿ,  ಪರಿಹಾರದ ಭರವಸೆ ನೀಡಿದರು.  ಮಳೆಯಿಂದ ಕುಸಿದು ಬಿದ್ದಿರುವ ಮನೆಗಳಿಗೆ ತಕ್ಷಣ 1 ಲಕ್ಷ ರೂಪಾಯಿ ಹಾಗೂ ಒಟ್ಟಾರೇ 5 ಲಕ್ಷ ರೂ. ಪರಿಹಾರವನ್ನು ಹಂತ ಹಂತವಾಗಿ ನೀಡಲಾಗುವುದು ಎಂದು ಅವರು ತಿಳಿಸಿದರು.

ಮಳೆಯಿಂದ ಬೆಂಗಳೂರು- ಮೈಸೂರು ರಸ್ತೆಯಲ್ಲಿ ಸಮಸ್ಯೆಯಾಗಿದೆ. ಹೆದ್ದಾರಿಯ ಹಲವೆಡೆ ಕಾಲುವೆ ಮುಚ್ಚಿರುವುದರಿಂದ ಈ ಸಮಸ್ಯೆಯಾಗಿದೆ. ಕಾಲುವೆ ತೆರವುಗೊಳಿಸುವಂತೆ ಭಾರತೀಯ  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ. ಅವರು ಕಾಲುವೆ ತೆರವುಗೊಳಿಸುವವರೆಗೂ ನಾವು ಕಾಯುವುದಿಲ್ಲ, ರಾಜ್ಯ ಸರ್ಕಾರವೇ ತೆರವುಗೊಳಿಸಲಿದ್ದು, ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು. 

ಮಳೆಯಿಂದ ರೇಷ್ಮೆ ರೀಲರ್ಸ್ ಗೆ ಆಗಿರುವ ನಷ್ಟವನ್ನು ಸರ್ಕಾರವೇ ಭರಿಸಲಿದೆ. ಸಂಕಷ್ಟದಲ್ಲಿರುವವರಿಗೆ ಶೀಘ್ರದಲ್ಲೇ ತಾತ್ಕಾಲಿಕ ಪರಿಹಾರ ಒದಗಿಸಲಾಗುವುದು, ರಾಜ್ಯ ಸರ್ಕಾರದ ವತಿಯಿಂದ ಪಡಿತರ ಕಿಟ್ ವಿತರಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ತಿಳಿಸಿದರು.

In Channapatna taluk, after Malluru lake breached its bound, flood water entered agricultural and residential areas damaging properties Parts of Ramanagara district were severely flooded following heavy rains that lashed the district on the intervening night of August 28-29, 2022.