ಗಣಿ ಧಣಿ ಜನಾರ್ದನ ರೆಡ್ಡಿ ಹೊಸ ಪಕ್ಷ ಕಟ್ಟಲು ರೆಡಿ ; ಉತ್ತರ ಕರ್ನಾಟಕ, ಬೆಂಗಳೂರಿನಲ್ಲಿ ಅಭ್ಯರ್ಥಿ ಕಣಕ್ಕಿಳಿಸಲು ಸಿದ್ಧತೆ ! 

12-12-22 12:52 pm       Bangalore Correspondent   ಕರ್ನಾಟಕ

ಬಿಜೆಪಿಯಿಂದ ದೂರ ನಿಂತಿರುವ ಗಾಲಿ ಜನಾರ್ದನ ರೆಡ್ಡಿ ಇದೀಗ ತಮ್ಮದೇ ಹೊಸ ಪಕ್ಷ ಕಟ್ಟಲು ಮುಂದಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ರಾಜಕೀಯ ನೆಲೆ ಕಂಡುಕೊಳ್ಳಲು ಮುಂದಾಗಿದ್ದಾರೆ.

ಬೆಂಗಳೂರು, ಡಿ.12: ಬಿಜೆಪಿಯಿಂದ ದೂರ ನಿಂತಿರುವ ಗಾಲಿ ಜನಾರ್ದನ ರೆಡ್ಡಿ ಇದೀಗ ತಮ್ಮದೇ ಹೊಸ ಪಕ್ಷ ಕಟ್ಟಲು ಮುಂದಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ರಾಜಕೀಯ ನೆಲೆ ಕಂಡುಕೊಳ್ಳಲು ಮುಂದಾಗಿದ್ದಾರೆ. ಈ ಬಗ್ಗೆ ರೆಡ್ಡಿ ಆಪ್ತರ ಬಳಗ ಚುನಾವಣಾ ಆಯೋಗಕ್ಕೆ ತೆರಳಿ ಚರ್ಚೆ ನಡೆಸಿರುವ ಮಾಹಿತಿಗಳಿವೆ. 

ಮತ್ತೆ ರಾಜಕೀಯ ನೆಲೆ ಕಂಡುಕೊಳ್ಳಲು ಚಿಂತನೆ ನಡೆಸಿರುವ ಗಾಲಿ ಜನಾರ್ದನ ರೆಡ್ಡಿ, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ಪಕ್ಷವನ್ನು ಕಟ್ಟಲು ಮುಂದಾಗಿದ್ದಾರೆ. ಈಗಾಗಲೇ  ರೆಡ್ಡಿ ಆಪ್ತರು ದೆಹಲಿಗೆ ತೆರಳಿದ್ದು ಚುನಾವಣಾ ಆಯೋಗಕ್ಕೆ ಹೊಸ ಪಕ್ಷದ ಹೆಸರು ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.

ಒಂದೆಡೆ ಹೊಸ ಪಕ್ಷ ಸ್ಥಾಪನೆಗೆ ಚುರುಕಿನ ಚಟುವಟಿಕೆ ನಡೆಯುತ್ತಿದ್ದರೆ, ಇನ್ನೊಂದೆಡೆ ರೆಡ್ಡಿ ಪತ್ನಿ ಅರುಣಾ ಡಿ.14ರಂದು ಗಂಗಾವತಿಯಲ್ಲಿ ನೂತನ ಗೃಹ ಪ್ರವೇಶ ಮಾಡಲಿದ್ದಾರೆ. ಎಲ್ಲವೂ ಅಂದುಕೊಂಡಂತೆಯೇ ಆದಲ್ಲಿ ರೆಡ್ಡಿ ಗಂಗಾವತಿಯಿಂದ ಹಾಗೂ ಅವರ ಪತ್ನಿ ಗದಗದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಮಾತ್ರವಲ್ಲ, ರೆಡ್ಡಿ ತಮ್ಮ ಹೊಸ ಪಕ್ಷದ ಮೂಲಕ ರಾಜ್ಯದ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ ಎಂದೂ ಹೇಳಲಾಗಿದೆ.

ಬೆಂಗಳೂರಿನಲ್ಲಿಯೇ ಇರುವ ರೆಡ್ಡಿಯನ್ನು ಬೇರೆ ಪಕ್ಷದವರು ಸಂಪರ್ಕಿಸಲು ಯತ್ನಿಸುತ್ತಿದ್ದು, ಬೇರೆ ಬೇರೆ ಜಿಲ್ಲೆಯ ಟಿಕೆಟ್ ಆಕಾಂಕ್ಷಿಗಳಿಂದಲೂ ರೆಡ್ಡಿಯೊಂದಿಗೆ ಮಾತುಕತೆ ನಡೆಯುತ್ತಿದೆ.

Former Karnataka minister and mining tycoon Gali Janardhana Reddy is now all set to establish his own political party in state.