ಪುತ್ರನ ಲಂಚ ಪ್ರಕರಣ ; ಶಾಸಕ ಮಾಡಾಳು ವಿರೂಪಾಕ್ಷಪ್ಪ ಕಡೆಗೂ ಅರೆಸ್ಟ್  

27-03-23 07:55 pm       Bangalore Correspondent   ಕರ್ನಾಟಕ

ಶಾಸಕ ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟಿನಲ್ಲಿ ವಜಾಗೊಂಡ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಅವರನ್ನು ಬಂಧಿಸಿದ್ದಾರೆ. 

ಬೆಂಗಳೂರು, ಮಾ.27 : ಶಾಸಕ ಮಾಡಾಳು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟಿನಲ್ಲಿ ವಜಾಗೊಂಡ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಅವರನ್ನು ಬಂಧಿಸಿದ್ದಾರೆ. 

ಬೆಂಗಳೂರಿಗೆ ಬರುವ ಹಾದಿಯಲ್ಲಿ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಹೈಕೋರ್ಟ್‌ ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಮಾರ್ಚ್‌ 7 ರಂದು ಹೈಕೋರ್ಟ್‌ ಮಧ್ಯಂತರ ಜಾಮೀನು ಮಜೂರು ಮಾಡಿತ್ತು. ಪುತ್ರ ಪ್ರಶಾಂತ್‌ ಮಾಡಾಳ್‌ ಹಣದೊಂದಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಬಳಿಕ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್‌ ಆಗಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅಭಿಮಾನಿಗಳು ಜಯಘೋಷ ಹಾಕಿ ಸ್ವಾಗತಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.

ಇದಲ್ಲದೆ, ಬಂಧನ ಭೀತಿ ಎದುರಿಸುತ್ತಿದ್ದ ಮಾಡಾಳುಗೆ ಮಧ್ಯಂತರ ಜಾಮೀನು ನೀಡಿದ್ದ ಹೈಕೋರ್ಟ್ ನಡೆಯ ಬಗ್ಗೆಯೂ ಟೀಕೆ ಕೇಳಿಬಂದಿತ್ತು. ಈ ಬಗ್ಗೆ ವಕೀಲರ ನಿಯೋಗ ಸುಪ್ರೀಂ ಕೋರ್ಟಿಗೂ ದೂರು ಬರೆದಿತ್ತು.

Bharatiya Janata Party MLA Madal Virupakshappa was arrested on Monday, hours after the Karnataka high court dismissed his bail application in a bribery case relating to Karnataka Soaps and Detergents Limited (KSDL).