Bangalore, Sadananda Gowda: ಬಿಜೆಪಿ- ಜೆಡಿಎಸ್ ಮೈತ್ರಿಗೆ ಸದಾನಂದ ಗೌಡ ವಿರೋಧ ; ಶೆ.75 ರಷ್ಟು ಮಂದಿಗೆ ಮೈತ್ರಿ ಇಷ್ಟವಿಲ್ಲ, ರಾಜ್ಯ ಘಟಕವಿನ್ನೂ ಸೋಲಿನಿಂದ ಹೊರಬಂದಿಲ್ಲ, ರಾಜ್ಯಾಧ್ಯಕ್ಷ ಸಂಪೂರ್ಣ ನಿಷ್ಕ್ರಿಯರಾಗಿದ್ದಾರೆ..

08-10-23 01:26 pm       Bangalore Correspondent   ಕರ್ನಾಟಕ

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಅ.8: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ ವರಿಷ್ಠರು ಪಕ್ಷದ ರಾಜ್ಯ ನಾಯಕರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿಯ ಶೇಕಡ 75ರಷ್ಟು ಮಂದಿಗೆ ಈ ಮೈತ್ರಿ ಇಷ್ಟವಿಲ್ಲ ಎಂದು ಡಿ.ವಿ. ಸದಾನಂದ ಗೌಡ ಹೇಳಿಕೆ ನೀಡಿದ್ದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. 

ಜೆಡಿಎಸ್‌ ಪಕ್ಷವು ಎನ್‌ಡಿಎ ಮೈತ್ರಿಕೂಟ ಸೇರಿದ ಬಳಿಕ ಬಿಜೆಪಿಯ ಹಲವರು ಅಸಮಾಧಾನ ಹೊರಹಾಕಿದ್ದಾರೆ. ಶಾಸಕ ಎಸ್‌.ಟಿ. ಸೋಮಶೇಖರ್‌ ಮೈತ್ರಿಯನ್ನು ಬಹಿರಂಗವಾಗಿ ವಿರೋಧಿಸಿದ ಬೆನ್ನಲ್ಲೇ ಸದಾನಂದ ಗೌಡ ಹೇಳಿಕೆ ನೀಡಿದ್ದಾರೆ.

Hamas Attack on Israel: PM Modi says India stands in solidarity with Israel  at this difficult hour | India News - Times of India

ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಎನ್‌ಡಿಎ ಮೈತ್ರಿಕೂಟವನ್ನು ಬಲಪಡಿಸಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ರಾಜ್ಯದ ನಾಯಕರ ಜೊತೆ ಚರ್ಚೆಯನ್ನೇ ನಡೆಸದೆ ಏಕಪಕ್ಷೀಯವಾಗಿ ಮೈತ್ರಿ ಮಾಡಿಕೊಂಡರೆ ಯಾವ ಅನುಕೂಲ ಆಗಲು ಸಾಧ್ಯ ಎಂದು‌ ಡೀವಿ ಪ್ರಶ್ನಿಸಿದ್ದಾರೆ. ‌

ವಿಧಾನಸಭಾ ಚುನಾವಣೆಯಲ್ಲಿ ನಾವು ಸೋತು ಸುಣ್ಣವಾಗಿದ್ದೇವೆ. ಚುನಾವಣೆ ಮುಗಿದು ನಾಲ್ಕು ತಿಂಗಳು ಕಳೆದರೂ ಪರಿಸ್ಥಿತಿ ಬದಲಾಗಿಲ್ಲ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಪ್ರಬಲವಾಗಿ ಬೆಳೆಯುತ್ತಿತ್ತು. ಈಗ ಜೆಡಿಎಸ್‌ ಜತೆ ಮೈತ್ರಿಯಿಂದಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಎರಡನೇ ದರ್ಜೆ ನಾಗರಿಕರಂತೆ ಆಗುತ್ತಾರೆ. ಪಕ್ಷದಲ್ಲಿ ಒಕ್ಕಲಿಗ ನಾಯಕರ ಮಾತುಗಳಿಗೆ ಬೆಲೆಯೇ ಇಲ್ಲದ ಸ್ಥಿತಿ ನಿರ್ಮಾಣ ಆಗಲಿದೆ ಎಂದರು.

ನಾಲ್ಕು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿಲ್ಲ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಸಂಪೂರ್ಣ ನಿಷ್ಕ್ರಿಯರಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಜನರು ತಿರಸ್ಕರಿಸಿದ್ದ ಕಾರ್ಯಸೂಚಿಯನ್ನೇ ನಮ್ಮ ಪಕ್ಷ ಮುಂದುವರಿಸುತ್ತಿದೆ. ಮೊದಲು ನಮ್ಮ ನಾಯಕತ್ವವನ್ನು ಗುರುತಿಸಬೇಕು ಮತ್ತು ಕಾರ್ಯಸೂಚಿಯನ್ನು ಬದಲಿಸಿಕೊಳ್ಳಬೇಕು. ಪಕ್ಷದ ಪ್ರಮುಖರ ಸಮಿತಿಯ ಸಭೆಯಲ್ಲೇ ಈ ವಿಚಾರವನ್ನು ಸ್ಪಷ್ಟವಾಗಿ ಹೇಳಿದ್ದೇನೆ ಎಂದು ಸದಾನಂದ ಗೌಡ ಹೇಳಿದ್ದಾರೆ. 

ಮೈತ್ರಿಯಾದಲ್ಲಿ ಸಂಸದ ಸ್ಥಾನ ನಷ್ಟಗೊಳ್ಳುವ ಆತಂಕ  

ಬಿಜೆಪಿ ಜೆಡಿಎಸ್ ಮೈತ್ರಿಯಾದಲ್ಲಿ ಮಂಡ್ಯ ಕ್ಷೇತ್ರಕ್ಕಾಗಿ ಜೆಡಿಎಸ್ ಪಟ್ಟು ಹಿಡಿಯುವ ಸಾಧ್ಯತೆ ಇದೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಲ್ಲಿ ಸಂಸದೆ ಸುಮಲತಾ ಅಂಬರೀಶ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಕುತೂಹಲ ಇದೆ. ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಹಾಗಾದಲ್ಲಿ ಸಹಜವಾಗಿ ಡಿವಿ ಸದಾನಂದ ಗೌಡ ಅವರ ಟಿಕೆಟ್ ಕೈತಪ್ಪಲಿದೆ. ಈ ಹಿಂದೆ ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಗಳ ಪಟ್ಟಿಯಲ್ಲಿ ಡಿವಿ ಸದಾನಂದ ಗೌಡ ಹೆಸರೂ ಕೇಳಿಬಂದಿತ್ತು. ಆದರೆ ಇದಕ್ಕೆ ಡಿವಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ನಡುವೆ ಮೈತ್ರಿಯ ಬಗ್ಗೆಯೇ ಬಹಿರಂಗ ಅಸಮಾಧಾನ ಹೊರಹಾಕಿದ್ದು ತನ್ನ ಸ್ಥಾನ ನಷ್ಟಗೊಳ್ಳುವ ಆತಂಕದಿಂದಲೇ ಎನ್ನುವ ಮಾತು ಕೇಳಿಬಂದಿದೆ.

Mincing no words, former BJP chief minister D V Sadananda Gowda called out the saffron party for not consulting state functionaries before forging an alliance with JD(S) while also lamenting the delay in appointing a Leader of Opposition.