ಹುಲಿ ಉಗುರಿನ ಲಾಕೆಟ್ ಧರಿಸಿರುವವರ ವಿರುದ್ಧ ನಿತ್ಯ ದೂರುಗಳು ಬರುತ್ತಿದ್ದು ; ಕಾನೂನಿಗೆ ಮೀರಿದವರು ಯಾರೂ ಇಲ್ಲ, ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಎಂದ ಖಂಡ್ರೆ

26-10-23 06:07 pm       Bangalore Correspondent   ಕರ್ನಾಟಕ

ಹುಲಿ ಉಗುರಿನ ಲಾಕೆಟ್ ಧರಿಸಿರುವವರ ವಿರುದ್ಧ ನಿತ್ಯ ದೂರುಗಳು ಬರುತ್ತಿದ್ದು, ಬಹುತೇಕರಿಗೆ ಇದು ಅಪರಾಧ ಎಂಬ ಅರಿವೇ ಇಲ್ಲ ಎಂಬುದು ಗೋಚರವಾಗುತ್ತಿದೆ.

ಬೆಂಗಳೂರು, ಅ 26: ಹುಲಿ ಉಗುರಿನ ಲಾಕೆಟ್ ಧರಿಸಿರುವವರ ವಿರುದ್ಧ ನಿತ್ಯ ದೂರುಗಳು ಬರುತ್ತಿದ್ದು, ಬಹುತೇಕರಿಗೆ ಇದು ಅಪರಾಧ ಎಂಬ ಅರಿವೇ ಇಲ್ಲ ಎಂಬುದು ಗೋಚರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶ ನೀಡುವ ಕಾನೂನು ಸಾಧ್ಯತೆಗಳನ್ನು ಪರಾಮರ್ಶಿಸಲಾಗುತ್ತಿದೆ ಎಂದು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗುರುವಾರ ಸಚಿವರು, ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು. ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ತಮ್ಮ ಪೂರ್ವಜರು ಹೊಂದಿದ್ದ ವನ್ಯಜೀವಿ ಅಂಗಾಂಗದಿಂದ ಮಾಡಿದ ಟ್ರೋಫಿ, ಫಲಕ, ಪೆಂಡೆಂಟ್ ಸೇರಿದಂತೆ ಯಾವುದೇ ಉತ್ಪನ್ನಗಳನ್ನು ಅರಣ್ಯ ಇಲಾಖೆಯಿಂದ ದೃಢೀಕರಿಸಿಕೊಂಡು ಮಾಲೀಕತ್ವದ ಹಕ್ಕು ಪಡೆದುಕೊಳ್ಳಲು 2003ರ ವರೆಗೆ ಹಲವು ಅವಕಾಶ ನೀಡಲಾಗಿತ್ತು. ಹಲವರು ತಮ್ಮ ಬಳಿ ಇದ್ದ ವನ್ಯಜೀವಿ ಉತ್ಪನ್ನಗಳಿಗೆ ಮಾಲೀಕತ್ವದ ಹಕ್ಕು ಪಡೆದಿದ್ದಾರೆ. ಇನ್ನೂ ಅನೇಕರು ದೃಢೀಕರಣ ಮತ್ತು ಪ್ರಮಾಣಪತ್ರ ಪಡೆದಿಲ್ಲ ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ಕೆಲವರ ಮನೆಗಳಲ್ಲಿ ಜಿಂಕೆ ಚರ್ಮ, ಆನೆ ದಂತದಿಂದ ಮಾಡಿದ ಕಲಾಕೃತಿಗಳು, ಜಿಂಕೆ ಮತ್ತು ಸಾರಂಗದ ಕೊಂಬು ಇತ್ಯಾದಿಗಳನ್ನು ಇಟ್ಟುಕೊಂಡಿರುತ್ತಾರೆ. ಇದು ಅಪರಾಧ ಎಂಬುದೂ ಅವರಿಗೆ ತಿಳಿದಿಲ್ಲ. ವರ್ತೂರು ಸಂತೋಷ ಪ್ರಕರಣ ವರದಿಯಾದ ಬಳಿಕ, ವನ್ಯಜೀವಿ ಉತ್ಪನ್ನಗಳ ಅಕ್ರಮ ದಾಸ್ತಾನಿನ ಬಗ್ಗೆ ಹೆಚ್ಚಾಗಿ ದೂರುಗಳು ಬರುತ್ತಿವೆ. ಕಾನೂನಿನ ಅರಿವಿಲ್ಲದ ಶ್ರೀಸಾಮಾನ್ಯರಿಗೆ ಆಗುವ ತೊಂದರೆ ತಪ್ಪಿಸಲು ಒಂದು ಬಾರಿ ಕೊನೆಯದಾಗಿ ಇಂತಹ ಅಕ್ರಮ ಸಂಗ್ರಹಣೆ/ದಾಸ್ತಾನಿನ ಬಗ್ಗೆ ಘೋಷಣೆ ಮಾಡಿಕೊಳ್ಳಲು ಮತ್ತು ಸರ್ಕಾರಕ್ಕೆ ಮರಳಿಸಲು ಅವಕಾಶ ನೀಡುವ ಬಗ್ಗೆ ಪರಾಮರ್ಶಿಸಿ, ಇದಕ್ಕೆ ಇತಿಶ್ರೀ ಹಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ವಿವರಿಸಿದರು

ಅಳಿವಿನಂಚಿನಲ್ಲಿರುವ, ಅಮೂಲ್ಯ ಮತ್ತು ಅಪರೂಪದ ವನ್ಯ ಜೀವಿಗಳಾದ ಹುಲಿ, ಚಿರತೆ, ಚಿಂಕಾರ, ಕೃಷ್ಣಮೃಗ, ಸಾಂಬಾರ್, ಕರಡಿ ಸೇರಿದಂತೆ ಹಲವು ಕಾಡು ಪ್ರಾಣಿಗಳನ್ನು ಪರಿಶಿಷ್ಟ 1ರಲ್ಲಿ ಪಟ್ಟಿ ಮಾಡಲಾಗಿದ್ದು, ಇಂತಹ ಪ್ರಾಣಿಗಳನ್ನು ಕೊಲ್ಲುವುದು, ಬೇಟೆ ಆಡುವುದು, ಅಂತಹ ಪ್ರಾಣಿಗಳ ದೇಹದ ಯಾವುದೇ ಭಾಗದಿಂದ ತಯಾರಿಸಿದ ವಸ್ತುವನ್ನು ಅಲಂಕಾರಿಕವಾಗಿ ಮನೆಯಲ್ಲಿಡುವುದು, ಧರಿಸುವುದು ಕೂಡ ಅಪರಾಧವಾಗಿರುತ್ತದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.Tiger claw locket case: Searches at celebrities' residences; BJP MP Jaggesh  under scanner - Daijiworld.com

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ: 

ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರಿಗೂ ಕಾನೂನು ಸಮಾನವಾಗಿರುತ್ತದೆ. ಗಣ್ಯಮಾನ್ಯರು, ಸೆಲಿಬ್ರಿಟಿಗಳ ಮನೆಗೆ ಹೋಗಿದ್ದಾರೆ. ನಟ ಜಗ್ಗೇಶ್ 20, 30 ವರ್ಷದ ಹಿಂದೆ ನಮ್ಮ ತಾಯಿ ಕೊಟ್ಟಿದ್ದರು ಎಂದಿದ್ದಾರೆ. ಈಗ ಅದನ್ನು ಎಫ್ಎಸ್ ಎಲ್ ಗೆ ಕಳುಹಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗಣ್ಯರೂ ಸೇರಿದಂತೆ ಹಲವರಿಗೆ ನೋಟಿಸ್ ನೀಡಲಾಗಿದೆ. ಅಧಿಕಾರಿಗಳು ಕಾನೂನು ರೀತ್ಯ ಮತ್ತು ಆಯಾ ಸಂದರ್ಭಕ್ಕೆ ಅನುಗುಣವಾಗಿ ತಮ್ಮ ವಿವೇಚನಾಧಿಕಾರ ಬಳಸಿ ಕ್ರಮ ಜರುಗಿಸಲಿದ್ದಾರೆ ಎಂದರು.

ಅರಣ್ಯ ಇಲಾಖೆಗೆ 1926 ಎಂಬ ಸಹಾಯವಾಣಿ ಇದ್ದು ಸಾರ್ವಜನಿಕರು ಈ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಲು, ಅರಣ್ಯ ಇಲಾಖೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಅವಕಾಶವಿದೆ.

Minister Eshwar Kandre says warns all those wearing Tiger claw, says return back. No one is bigger than the government he added.