Chikmagaluru news lawyer, Police: ಹೆಲ್ಮೆಟ್ ಹಾಕದ ಕಾರಣಕ್ಕೆ ಚಿಕ್ಕಮಗಳೂರಿನಲ್ಲಿ ವಕೀಲನಿಗೆ ಪೊಲೀಸರ ಹಲ್ಲೆ ; ರಾತ್ರಿಯಿಡೀ ಪ್ರತಿಭಟನೆ, ಪಿಎಸ್ಐ ಸೇರಿ ಆರು ಪೊಲೀಸರ ಅಮಾನತು 

01-12-23 06:08 pm       HK News Desk   ಕರ್ನಾಟಕ

ಹೆಲ್ಮೆಟ್ ಹಾಕದ ಕಾರಣಕ್ಕೆ ವಕೀಲನ ಮೇಲೆ ಪೋಲಿಸರು ಠಾಣೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಚಿಕ್ಕಮಗಳೂರಿನಲ್ಲಿ ಘಟನೆ ನಡೆದಿದೆ. ಇದರ ಬೆನ್ನಲ್ಲೇ ವಕೀಲರು ಭಾರೀ ಪ್ರತಿಭಟನೆ ನಡೆಸಿದ್ದು, ಘಟನೆ ಹಿನ್ನೆಲೆಯಲ್ಲಿ ಪಿಎಸ್ ಐ 6 ಮಂದಿ ಪೊಲೀಸರನ್ನು ಎಸ್ಪಿ ಅಮಾನತು ಮಾಡಿದ್ದಾರೆ.

ಚಿಕ್ಕಮಗಳೂರು, ಡಿ.1: ಹೆಲ್ಮೆಟ್ ಹಾಕದ ಕಾರಣಕ್ಕೆ ವಕೀಲನ ಮೇಲೆ ಪೋಲಿಸರು ಠಾಣೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಚಿಕ್ಕಮಗಳೂರಿನಲ್ಲಿ ಘಟನೆ ನಡೆದಿದೆ. ಇದರ ಬೆನ್ನಲ್ಲೇ ವಕೀಲರು ಭಾರೀ ಪ್ರತಿಭಟನೆ ನಡೆಸಿದ್ದು, ಘಟನೆ ಹಿನ್ನೆಲೆಯಲ್ಲಿ ಪಿಎಸ್ ಐ 6 ಮಂದಿ ಪೊಲೀಸರನ್ನು ಎಸ್ಪಿ ಅಮಾನತು ಮಾಡಿದ್ದಾರೆ. 

ವಕೀಲ ಪ್ರೀತಂ ಎಂಬವರು ಗುರುವಾರ ರಾತ್ರಿ ಹೆಲ್ಮೆಟ್‌ ಇಲ್ಲದೆ ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಠಾಣೆಯ ಎದುರು ಅಡ್ಡಗಟ್ಟಿದ ಪೊಲೀಸರು ಬೈಕ್‌ನಿಂದ ಕೀ ಕಸಿದುಕೊಂಡಿದ್ದರು. ‘ಹೆಲ್ಮೆಟ್ ಹಾಕದಿರುವುದಕ್ಕೆ ದಂಡ ಕಟ್ಟುತ್ತೇನೆ, ಕೀ ಕಸಿದುಕೊಳ್ಳಲು ನಿಮಗೆ ಅಧಿಕಾರ ಕೊಟ್ಟಿದ್ದು ಯಾರು’ ಎಂದು ಪ್ರೀತಂ ಪ್ರಶ್ನಿಸಿದ್ದಾರೆ. ಅಲ್ಲದೇ ಅದನ್ನು ವಿಡಿಯೋ ಮಾಡಿದ್ದಾರೆ.

ಇದರಿಂದ ಕೆರಳಿದ ಪೊಲೀಸರು ಪ್ರೀತಂ ಅವರನ್ನು ಠಾಣೆಯ ಒಳಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಕಂಪ್ಯೂಟರ್ ಕೊಠಡಿಯಲ್ಲಿ ಕೂಡಿ ಹಾಕಿ ದೊಣ್ಣೆ, ಲಾಠಿ, ಪೈಪ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಪ್ರೀತಂ ತಿಳಿಸಿದ್ದಾರೆ. ಅಷ್ಟರಲ್ಲಿ ವಿಷಯ ತಿಳಿದ ಹಲವು ವಕೀಲರು ಠಾಣೆಯ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಪ್ರೀತಂ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 

ನಿನ್ನೆ ರಾತ್ರಿಯಿಡೀ ಠಾಣೆಯ ಎದುರು ಧರಣಿ ನಡೆಸಿದ ವಕೀಲರು, ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದ ಪೊಲೀಸ್ ಹಿರಿಯ ಅಧಿಕಾರಿಗಳು ವಕೀಲರನ್ನು ಸಮಾಧಾನಪಡಿಸಲು ಯತ್ನಿಸಿದರು.‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್, ಸಹಾಯಕ ಸಬ್ ಇನ್‌ಸ್ಪೆಕ್ಟರ್‌ ಸೇರಿ ಆರು ಪೊಲೀಸರ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ. ಅಷ್ಟೂ ಜನರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಇಡೀ ಪ್ರಕರಣದಲ್ಲಿ ತನಿಖೆ ನಡೆಸಿ ವರದಿ ನೀಡಲು ಡಿವೈಎಸ್‌ಪಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ತಿಳಿಸಿದ್ದಾರೆ.

Chikmagaluru lawyer beaten up over helmet issue, 6 including Police Inspector suspended.