Congress, Chakravarti Sulibele speech in Chikkamagaluru: ಚಕ್ರವರ್ತಿ ಸೂಲಿಬೆಲೆ ಭಾಷಣದ ನಡುವೆ ಕಾಂಗ್ರೆಸ್ ಕಾರ್ಯಕರ್ತರ ಎಂಟ್ರಿ , ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ, ಚಿಕ್ಕಮಗಳೂರು ನಮೋಭಾರತ್ ಕಾರ್ಯಕ್ರಮದಲ್ಲಿ ಹೈಡ್ರಾಮ

08-02-24 09:34 pm       HK News Desk   ಕರ್ನಾಟಕ

ನಮೋ ಬ್ರೀಗೆಡ್ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ನಮೋಭಾರತ್ 2.0 ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ತಮ್ಮ ಭಾಷಣ ಪ್ರಾರಂಭಿಸುತ್ತಿದ್ದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕಪ್ಪುಬಾವುಟ ಪ್ರದರ್ಶಿಸಿ ವಿರೋಧ ವ್ಯಕ್ತ ಪಡಿಸಿದರು.

ಚಿಕ್ಕಮಗಳೂರು, ಫೆ 08: ನಮೋ ಬ್ರೀಗೆಡ್ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ನಮೋಭಾರತ್ 2.0 ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ತಮ್ಮ ಭಾಷಣ ಪ್ರಾರಂಭಿಸುತ್ತಿದ್ದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕಪ್ಪುಬಾವುಟ ಪ್ರದರ್ಶಿಸಿ ವಿರೋಧ ವ್ಯಕ್ತ ಪಡಿಸಿದರು. ಏಕಾಏಕಿ ಕಪ್ಪುಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದರಿಂದ ಸಮಾರಂಭದಲ್ಲಿ ಗೊಂದಲದ ವಾತವಾರಣ ನಿರ್ಮಾಣವಾಗಿತ್ತು. ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ ದರು.

ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕಾಂಗ್ರೆಸ್ ಮುಖಂಡರು ಸೂಲಿಬೆಲೆ ವಿರುದ್ಧ ಘೋಷಣೆ ಕೂಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಭಾರತ ಮಾತಾ ಕೀ ಜೈಕಾರ ಮೊಳಗಿಸಿದರು. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಕಪ್ಪುಬಾವುಟ ಪ್ರದರ್ಶಿಸಿ ಪ್ರತಿಭಟನೆ ಮುಂದಾದ 10 ರಿಂದ 15 ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸರ ಮಧ್ಯ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ ನಂತರ ಚಕ್ರವತಿ ಸೂಲಿಬೆಲೆ ತಮ್ಮ ಭಾಷಣವನ್ನು ಮತ್ತೆ ಆರಂಭಿಸಿದರು.

ಏಕಾಏಕಿ ಕಪ್ಪುಬಾವುಟ ಪ್ರದರ್ಶನ ಮತ್ತು ಪ್ರತಿಭಟನೆಗೆ ಮುಂದಾಗಿದ್ದರಿಂದ ಸಭೆಯಲ್ಲಿದ್ದ ಸಭಿಕರು ಚದುರಿದ್ದರಿಂದ ಚಕ್ರವರ್ತಿ ಸೂಲಿಬೆಲೆ ಅವರು ತಮ್ಮ ಭಾಷಣವನ್ನು ಮಧ್ಯದಲ್ಲೇ ಸ್ಥಗಿತಗೊಳಿಸಿದರು. ಪರಿಸ್ಥಿತಿ ತಿಳಿಗೊಂಡ ನಂತರ ಮತ್ತೇ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಖಂಡಿಸಿದ ಚಕ್ರವರ್ತಿ ಸೂಲಿಬೆಲೆ ರಾಜ್ಯ ಸರ್ಕಾರ ನನ್ನನ್ನು ಜೈಲಿಗೆ ಕಳಿಸಬೇಕೆಂದು ಹರಸಾಹಸ ಮಾಡುತ್ತಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಬಗ್ಗೆ ಉದ್ದೇಶಪೂರ್ವಕವಲ್ಲದ ಹೇಳಿಕೆ ನೀಡಿದ್ದಾಗ ನನ್ನ ಮೇಲೆ ಜಾತಿನಿಂದನೆ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಾಲಯ ಕಾಂಗ್ರೆಸ್‌ನವರಿಗೆ ಛೀಮಾರಿ ಹಾಕಿತು ಎಂದು ಸರಕಾರವನ್ನು ತರಾಟೆಗೆ ತಗೆದುಕೊಂಡರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಬಂಧ ಶುಕ್ರವಾರ ಪರೀಕ್ಷಾ ಅವಧಿಯನ್ನು ಬದಲಾವಣೆ ಮಾಡಲಾಗಿದೆ ಯಾಕೆ, ಕೆಲವರು ಪ್ರಾರ್ಥನೆ ಸಲ್ಲಿಸಲು ಬದಲಾವಣೆ ಮಾಡಲಾಗಿದೆ ಎಂದಿದ್ದಕ್ಕೆ ಸಚಿವ ಮಧು ಬಂಗಾರಪ್ಪ ನನ್ನ ಮೇಲೆ ಹರಿಹಾಯ್ದರು. ನನ್ನನ್ನು ಒಳಗೆ ಹಾಕಿಸುತ್ತೇನೆ ಎಂದರು. ನಮೋ ಬ್ರೀಗೆಡ್ ಮುಂದಿನ 30 ದಿನಗಳಲ್ಲಿ 50 ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಹೇಗಾದರೂ ಮಾಡಿ ಗಲಾಟೆ ಸೃಷ್ಟಿಸಿ ಕಾರ್ಯಕ್ರಮ ವನ್ನು ರದ್ದುಪಡಿಸಬೇಕೆಂಬುದು ಸರಕಾರದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

Congress members display black flag during Chakravarti Sulibele speech in Chikkamagaluru. Police have taken 15 members into custody.