CM Siddaramaiah, Budget: ಸಿಎಂ ಸಿದ್ದರಾಮಯ್ಯ ಜನಪರ ಬಜೆಟ್ ಮಂಡನೆ ; ಮೀನುಗಾರಿಕೆಗೆ ಭರಪೂರ ಕೊಡುಗೆ, ಮೂರು ಸಾವಿರ ಕೋಟಿ ವೆಚ್ಚದ ಯೋಜನೆ, 'ಸಮುದ್ರ ಆಂಬುಲೆನ್ಸ್' ಘೋಷಣೆ 

16-02-24 01:05 pm       Bangalore Correspondent   ಕರ್ನಾಟಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದಲ್ಲಿ 15ನೇ ಬಜೆಟ್ ಮಂಡಿಸಿದ್ದು, 3,71,383 ಕೋಟಿ ರೂಪಾಯಿ ಗಾತ್ರ ಹೊಂದಿದೆ. ಕರಾವಳಿಯ ಮೀನುಗಾರಿಕೆಗೆ ಮೂರು ಸಾವಿರ ಕೋಟಿ ವೆಚ್ಚದ ವಿವಿಧ ಯೋಜನೆಗಳನ್ನು ಪ್ರಕಟಿಸಿದ್ದಾರೆ. 

ಬೆಂಗಳೂರು, ಫೆ.16: ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದಲ್ಲಿ 15ನೇ ಬಜೆಟ್ ಮಂಡಿಸಿದ್ದು, 3,71,383 ಕೋಟಿ ರೂಪಾಯಿ ಗಾತ್ರ ಹೊಂದಿದೆ. ಕರಾವಳಿಯ ಮೀನುಗಾರಿಕೆಗೆ ಮೂರು ಸಾವಿರ ಕೋಟಿ ವೆಚ್ಚದ ವಿವಿಧ ಯೋಜನೆಗಳನ್ನು ಪ್ರಕಟಿಸಿದ್ದಾರೆ. 

ಕರ್ನಾಟಕದಲ್ಲಿ ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಗೆ 2024-25ನೇ ಸಾಲಿನ ಬಜೆಟ್‌ನಲ್ಲಿ ಬಲ ತುಂಬಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಈ ಬಾರಿ ಬಜೆಟ್‌ನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.15 ರಷ್ಟು ಅನುದಾನವನ್ನು ಸಿದ್ದರಾಮಯ್ಯ ಇದಕ್ಕೆ ನೀಡಿದ್ದಾರೆ. 

ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು. ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗೆ ಹೆಚ್ಚಿಸಲಾಗುವುದು. ಅವರಿಗೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್ ನೀಡಲಾಗುವುದು. ನಿವೇಶನ ಹೊಂದಿರುವ ವಸತಿ ರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಮರುಸಮೀಕ್ಷೆ ನಡೆಸಲಾಗುವುದು.‌

ತೃತೀಯ ಲಿಂಗಿ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಿಸಲಾಗುವುದು. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆಯ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗುವುದು. 

ಸಮುದ್ರ ಮೀನುಗಾರಿಕೆಗೆ ಹೋಗುವ ಮೀನುಗಾರರು ಅಪಾಯಕ್ಕೆ ಸಿಲುಕಿದಾಗ ಅವರನ್ನು ರಕ್ಷಿಸಲು ವಿಶೇಷ "ಸಮುದ್ರ ಆಂಬುಲೆನ್ಸ್" ಯೋಜನೆಯನ್ನು ರಾಜ್ಯ ಬಜೆಟ್ ನಲ್ಲಿ ಪ್ರಕಟಿಸಲಾಗಿದೆ. ಇದಕ್ಕಾಗಿ ಏಳು ಕೋಟಿ ರೂ. ತೆಗೆದಿಡಲಾಗಿದೆ. ಮೀನುಗಾರಿಕೆಗೆ ಸಂಬಂಧಿಸಿ ಸಂಶೋಧನೆ ಅಗತ್ಯವಾಗಿದ್ದು, ಇದಕ್ಕಾಗಿ ಹೊನ್ನಾವರ ಅಥವಾ ಕಾಸರಕೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುತ್ತದೆ. ಹಾಗೆಯೇ, ಭದ್ರಾವತಿಯಲ್ಲಿ ಹೈಟೆಕ್​ ಮೀನು ಮಾರುಕಟ್ಟೆ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಲಾಗುವುದು. 

ಮೀನುಗಾರಿಕೆ ಕ್ಷೇತ್ರಕ್ಕೆ ಮತ್ತೇನು ಕೊಡುಗೆ 

1) ಆಕ್ವಾ ಪಾರ್ಕ್‌ಗಳ ಸ್ಥಾಪನೆ 

2) ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ ಸುಸಜ್ಜಿತ ಮೀನುಗಾರಿಕೆ ಹೊರ ಬಂದರು ನಿರ್ಮಾಣ 

3) ವಿಜಯಪುರದ ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ. 

4) ಮತ್ಸ್ಯ ಆಶಾಕಿರಣ ಯೋಜನೆಯಡಿ ಮೀನುಗಾರಿಕೆ ನಿಷೇಧ ಅವಧಿಯಲ್ಲಿ ಕರಾವಳಿಯ ಮೀನುಗಾರರಿಗೆ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲನ್ನು 1,500 ರೂ.ಗಳಿಂದ 3,000 ರೂ.ಗಳಿಗೆ ಹೆಚ್ಚಿಸಲಾಗುವುದು.

5) 2024-25ನೇ ಸಾಲಿನಲ್ಲಿ 10,000 ವಸತಿ ರಹಿತ ಮೀನುಗಾರರಿಗೆ ಕರ್ನಾಟಕ ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುವುದು.

6) ಕರ್ನಾಟಕ ರಾಜ್ಯದಲ್ಲಿನ 16 ಮೀನು ಮರಿ ಉತ್ಪಾದನಾ ಕೇಂದ್ರಗಳ ಉನ್ನತೀಕರಣವನ್ನು ನಬಾರ್ಡ್‌ ಸಹಯೋಗದೊಂದಿಗೆ 20 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು.

7) ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು 6 ಕೋಟಿ ರೂ. ವೆಚ್ಚ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

Karnataka Chief Minister Siddaramaiah will present the 2024-25 Budget, which will be his record 15th as finance minister, on Friday. The budget size is likely to touch Rs 3.80 lakh crore, up from Rs 3.27 lakh crore in 2023-24, with tremendous pressure on Siddaramaiah to look beyond the five guarantees for infrastructure development and asset creation.