Siddaramaiah, Amit Shah Karnataka: ಬರ ಪರಿಹಾರಕ್ಕೆ ಮನವಿ ಮಾಡಿ ನಾಲ್ಕು ತಿಂಗಳಾದ್ರು ನಯಾಪೈಸೆ ಕೊಟ್ಟಿಲ್ಲ ; ಕನ್ನಡಿಗರ ಬಗ್ಗೆ ಯಾಕೆ ನಿಮ್ಗೆ ಇಷ್ಟು ದ್ವೇಷ ? ಅಮಿತ್‌ ಶಾ ವಿರುದ್ಧ ಸಿದ್ದರಾಮಯ್ಯ ಕಿಡಿ

02-04-24 08:10 pm       Bangalore Correspondent   ಕರ್ನಾಟಕ

ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಪ್ರಶ್ನಿಸಿರುವ ಸಿದ್ದರಾಮಯ್ಯ, ಮಳೆ ಕೊರತೆಯಿಂದಾಗಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.

ಬೆಂಗಳೂರು, ಏ.02: ಗೃಹ ಸಚಿವ ಅಮಿತ್ ಶಾ ಅವರೇ, ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಪ್ರಶ್ನಿಸಿರುವ ಸಿದ್ದರಾಮಯ್ಯ, ಮಳೆ ಕೊರತೆಯಿಂದಾಗಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಅಂದಾಜು 33,770 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆಯೆಂದು ರಾಜ್ಯ ಸರ್ಕಾರ ಸಮೀಕ್ಷೆ ನಡೆಸಿ ಅಂದಾಜು ಮಾಡಿತ್ತು. ಇದರಲ್ಲಿ ಕನಿಷ್ಠ 17,901 ಕೋಟಿ ರೂಪಾಯಿ ಪರಿಹಾರವನ್ನಾದರೂ ನೀಡಬೇಕೆಂಬುದು ಕರ್ನಾಟಕದ ಬೇಡಿಕೆ. ಇದಕ್ಕಾಗಿ ಪತ್ರದ ಮೇಲೆ ಪತ್ರ ಬರೆದೆವು, ಪ್ರಧಾನಿಯವರ ಜೊತೆ ಬರ ಪರಿಹಾರ ನೀಡುವ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷರಾದ ನಿಮ್ಮನ್ನೂ ಭೇಟಿಯಾದೇವು. ಈ ವರೆಗೆ ಒಂದು ಪೈಸೆ ಪರಿಹಾರ ನೀಡಿಲ್ಲ. ಕರ್ನಾಟಕ-ಕನ್ನಡಿಗರ ಬಗ್ಗೆ ಯಾಕೆ ನಿಮಗೆ ಇಷ್ಟು ದ್ವೇಷ? ಎಂದು ಕೇಳಿದ್ದಾರೆ.

ಒಂದು ವಾರದೊಳಗೆ ಉನ್ನತಾಧಿಕಾರ ಸಮಿತಿಯ ಸಭೆ ಕರೆಯುತ್ತೇನೆ ಎಂದು ಕಳೆದ ಸೆಪ್ಟೆಂಬರ್‌ನಲ್ಲಿ ನೀವು ನನಗೆ ಆಶ್ವಾಸನೆ ಕೊಟ್ಟಿದ್ದೀರಿ. ವಾರ ಕಳೆದು ತಿಂಗಳುಗಳ ಮೇಲೆ ತಿಂಗಳುಗಳು ಕಳೆದು ಹೋಯಿತು. ಇಲ್ಲಿಯವರೆಗೆ ನೀವು ಸಭೆಯನ್ನೂ ಕರೆದಿಲ್ಲ, ಬರ ಪರಿಹಾರವನ್ನೂ ನೀಡಿಲ್ಲ. ಯಾಕೆ? ಈ ಅನ್ಯಾಯ ಇದೇ ಮೊದಲ ಸಲವೇನಲ್ಲ, 2017ರಲ್ಲಿಯೂ ಕರ್ನಾಟಕದಲ್ಲಿ ಬರಗಾಲ ಬಂದಿತ್ತು. ಇದರಿಂದಾಗಿ ಅಂದಾಜು 30,000 ಕೋಟಿ ರೂ.ನಷ್ಟು ನಷ್ಟ ಉಂಟಾಗಿತ್ತು. ಆಗ ಕೇಂದ್ರ ಸರ್ಕಾರ ನೀಡಿದ್ದು ಕೇವಲ 1,435 ಕೋಟಿ ರೂ. ಪರಿಹಾರ. ಅದೇ ವರ್ಷ ಮಹಾರಾಷ್ಟ್ರಕ್ಕೆ 8,195 ಕೋಟಿ ರೂ. ಮತ್ತು ಗುಜರಾತ್‌ಗೆ 3,894 ಕೋಟಿ ರೂ. ಪರಿಹಾರ ನೀಡಲಾಗಿತ್ತು ಎಂದು ಹೇಳಿದ್ದಾರೆ.

2019ರಲ್ಲಿ ರಾಜ್ಯದಲ್ಲಿ ಬಿಜೆಪಿಯದ್ದೇ ಸರ್ಕಾರವಿದ್ದಾಗಲೂ ಅತಿವೃಷ್ಟಿಯಿಂದಾಗಿರುವ ಹಾನಿಗೆ ಪರಿಹಾರ ನೀಡದೆ ಸತಾಯಿಸಿದ್ದೀರಿ. ಕನ್ನಡಿಗರು ನಿಮಗೆ ಏನು ಅನ್ಯಾಯ ಮಾಡಿದ್ದಾರೆ. ಬಿಜೆಪಿಯನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಅವಕಾಶ ನೀಡದಿರುವುದೇ ಅಪರಾಧವಾಗಿ ಹೋಯಿತೇ? ಕರಾವಳಿಯ ರೈತರೇ ಕಟ್ಟಿ ಬೆಳೆಸಿದ್ದ ವಿಜಯಾ ಬ್ಯಾಂಕನ್ನು ನುಂಗಿದ್ದು ಗುಜರಾತಿನ ಬರೋಡಾ ಬ್ಯಾಂಕ್. ಕಾಂಗ್ರೆಸ್ ನಾಯಕರ ಪ್ರಯತ್ನದಿಂದ ನಿರ್ಮಾಣಗೊಂಡಿದ್ದ ಬಂದರು ಮತ್ತು ವಿಮಾನ ನಿಲ್ದಾಣಗಳನ್ನು ನಮ್ಮಿಂದ ಕಿತ್ತುಕೊಂಡದ್ದು ಗುಜರಾತ್ ನ ಉದ್ಯಮಿ ಅದಾನಿ. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ? ಎಂದು ಕಿಡಿಕಾರಿದ್ದಾರೆ.

ನಮ್ಮ ರೈತರೇ ಕಟ್ಟಿರುವ ಕರ್ನಾಟಕದ ಹೆಮ್ಮೆಯ ಕೆಎಂಎಫ್ ಅನ್ನು ಗುಜರಾತ್ ನ ಅಮುಲ್ ಜೊತೆ ವಿಲೀನಗೊಳಿಸಲು ಹೂಡಿದ್ದ ಸಂಚನ್ನು ಕನ್ನಡಿಗರು ಮರೆತಿಲ್ಲ. ರಾಜ್ಯದಲ್ಲಿ ಆ ಕಾಲದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ನೆರವಿನಿಂದ ಒಂದಷ್ಟು ದಿನ ನಂದಿನಿ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಮಾಯಮಾಡಿ ಅಮುಲ್ ಉತ್ಪನ್ನಗಳು ಎಲ್ಲೆಲ್ಲೂ ರಾರಾಜಿಸುವಂತೆ ಮಾಡಿದ್ದು ನೀವೇ ಅಲ್ಲವೇ? ನಮ್ಮ ನಂದಿನಿಯನ್ನು ಉಳಿಸಲು ಕರ್ನಾಟಕದಾದ್ಯಂತ ಸ್ವಾಭಿಮಾನಿ ಕನ್ನಡಿಗರು ಎದ್ದು ನಿಂತಾಗ ಬೇರೆ ದಾರಿ ಕಾಣದೆ ನಿಮ್ಮ ದುರಾಲೋಚನೆಯನ್ನು ಕೈಬಿಟ್ಟದ್ದು ನಿಜ ಅಲ್ಲವೇ? ಎಂದು ಸಿಎಂ ಕೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರೇ, ಕರ್ನಾಟಕದಲ್ಲಿ ಮತಕೇಳುವ ಮೊದಲು ಕನ್ನಡಿಗ ಮತದಾರರ ಪ್ರಶ್ನೆಗಳಿಗೆ ಉತ್ತರಿಸಿ ಎಂದು ಆಗ್ರಹಿಸಿರುವ ಸಿದ್ದರಾಮಯ್ಯ, ಜಗತ್ತಿನ ಯಾವ ಭಾಷೆಗೂ ನಮ್ಮ ವಿರೋಧ ಇಲ್ಲ. ಆದರೆ, ಕನ್ನಡದ ನೆಲದಲ್ಲಿ ಕನ್ನಡ ಭಾಷೆಗೆ ಮೊದಲ ಪೂಜೆ ಸಲ್ಲಬೇಕೆನ್ನುವುದು ಮಾತ್ರ ಕನ್ನಡಿಗರ ನಿಲುವು. ಕನ್ನಡ ಧ್ವಜವನ್ನು ರೂಪಿಸಿ ಅಂಗೀಕಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಕಳಿಸಿ ಆರು ವರ್ಷಗಳಾಗುತ್ತಾ ಬಂದರೂ ಇಲ್ಲಿಯವರೆಗೆ ಅದಕ್ಕೆ ಅನುಮೋದನೆ ನೀಡಿಲ್ಲ. ಕನ್ನಡ ಧ್ವಜದ ಬಗ್ಗೆ ಯಾಕೆ ನಿಮ್ಮ ವಿರೋಧ? ಉತ್ತರ ಕೊಡಿ ಎಂದು ಒತ್ತಾಯಿಸಿದ್ದಾರೆ.

Siddaramaiah attacks amit Shah over non release of drought relief funds to Karnataka. Karnataka Chief Minister Siddaramaiah claimed on Tuesday Union Home Minister Amit Shah has no moral right to seek votes from the electorate, as he accused the BJP-led government at the Centre with betraying and doing justice to the people of the State over the issue of delay in release of drought relief funds in particular.