ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ನಿರಾಣಿ, ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಶನ್ ; ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರಿಗೆ ತಾಕೀತು! 

23-08-24 01:04 pm       Bangalore Correspondent   ಕರ್ನಾಟಕ

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಇತರ ಮೂವರು ಬಿಜೆಪಿಯ ಮಾಜಿ ಸಚಿವರ ವಿರುದ್ಧದ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ತಾಕೀತು ಮಾಡಿ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ.

ಬೆಂಗಳೂರು, ಆಗಸ್ಟ್ 23: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಇತರ ಮೂವರು ಬಿಜೆಪಿಯ ಮಾಜಿ ಸಚಿವರ ವಿರುದ್ಧದ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ತಾಕೀತು ಮಾಡಿ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್. ಕೆ.ಪಾಟೀಲ್, ಸಂವಿಧಾನದ ಆರ್ಟಿಕಲ್ 163 ರ ಅನ್ವಯ ಸಂಪುಟದ ಅಧಿಕಾರವನ್ನು ಬಳಸಿಕೊಂಡು ಸಂಪುಟ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.

ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಹಾಗೂ ಎಚ್.ಡಿ ಕುಮಾರಸ್ವಾಮಿ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಅನುಮತಿ ಕೋರಲಾಗಿತ್ತು. ನಾಲ್ಕು ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಕುಮಾರಸ್ವಾಮಿ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಕೆ ಆಗಿದೆ. ಈ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಆಗ್ರಹ ಮಾಡಲಾಗುವುದು ಎಂದರು.

ರಾಜ್ಯಪಾಲರು ಸಲಹೆಯನ್ನು ನಿರಾಕರಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಎಚ್.ಕೆ. ಪಾಟೀಲ್, ರಾಜ್ಯಪಾಲರ ವಿವೇಚನಾ ಅಧಿಕಾರ ಸೀಮಿತವಾಗಿದ್ದು, ನಮ್ಮ ತೀರ್ಮಾನಕ್ಕೆ ಬದ್ಧವಾಗಿರಬೇಕು. ಅವರು ತಮ್ಮ ಅಧಿಕಾರವನ್ನು ಬಹಳ ವಿವೇಚನೆಯಿಂದ ಚಲಾಯಿಸುವ ಖಾತ್ರಿಯಿದೆ. ರಾಜ್ಯಪಾಲರ ಮುಂದೆ ಭ್ರಷ್ಟಾಚಾರ ತಡೆ ಕಾಯ್ದೆ 1980 ಅಡಿಯಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿದ್ದ ಪ್ರಾಸಿಕ್ಯೂಷನ್ ಅನುಮತಿ ಅರ್ಜಿ ಬಾಕಿ ಇದೆ. "ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 19, 17ಎ ಮತ್ತು ಈಗ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 197 ಮತ್ತು 218 ಅಪರಾಧ ಪ್ರಕ್ರಿಯೆ ಸಂಹಿತೆಯಡಿ ಅನುಮತಿ ಕೋರಲಾಗಿದೆ ಎಂದು ತಿಳಿಸಿದ್ದಾರೆ.

ಶಶಿಕಲಾ ಜೊಲ್ಲೆ ವಿರುದ್ಧ 2021ರ ಡಿಸೆಂಬರ್ 9 ರಂದು ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಫೆಬ್ರವರಿ 26, 2024 ರಂದು ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17ಎ ಅಡಿಯಲ್ಲಿ ಲೋಕಾಯುಕ್ತರು ಪೂರ್ವಾನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಮೂರನೆಯದು ಕುಮಾರಸ್ವಾಮಿ ಅವರ ವಿರುದ್ಧ ನವೆಂಬರ್ 21, 2023 ರಂದು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 19 ರ ಅಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಲಾಗಿದ್ದು, ಎಸ್ ಐಟಿ ಆರೋಪ ಪಟ್ಟಿ ಸಲ್ಲಿಸಿದೆ. ರಾಜ್ಯಪಾಲರು ಕೋರಿದ್ದ ಸ್ಪಷ್ಟನೆಗೆ ಆಗಸ್ಟ್ 16, 2024ರಂದು ಎಸ್ ಐಟಿ ಅಗತ್ಯ ಸ್ಪಷ್ಟನೆ ನೀಡಿದೆ ಎಂದು ತಿಳಿಸಿದರು.

ನಾಲ್ಕನೆಯದು ಜನಾರ್ದನ ರೆಡ್ಡಿಗೆ ಸಂಬಂಧಿಸಿದ್ದು, ಅವರ ವಿರುದ್ಧ ಮೇ 13, 2024 ರಂದು ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 19 ಮತ್ತು ಬಿಎನ್‌ಎಸ್‌ಎಸ್‌ನ ನಿಬಂಧನೆಗಳ ಅಡಿಯಲ್ಲಿ ಪ್ಯಾಸಿಕ್ಯೂಷನ್ ಗೆ ಅನುಮತಿ ಕೋರಲಾಗಿದ್ದು,ಈ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

The Karnataka Cabinet on Thursday recommended Governor Thawar Chand Gehlot to take action on pending prosecution sanctions against several prominent political leaders, including Union minister for heavy industry and steel HD Kumaraswamy.