Belekeri Scam, MLA Satish Sail Jail: ಬೇಲೆಕೇರಿ ಬಂದರಿನಿಂದ 7 ಲಕ್ಷ ಮೆಟ್ರಿಕ್ ಟನ್ ಅದಿರು ಕಳವು ; ಕಾರವಾರ ಶಾಸಕ ಸತೀಶ್ ಸೈಲ್ ಗೆ ಏಳು ವರ್ಷ ಶಿಕ್ಷೆ, ಶಾಸಕ ಸ್ಥಾನ ಅನರ್ಹ ಸಾಧ್ಯತೆ 

26-10-24 05:54 pm       Bangalore Correspondent   ಕರ್ನಾಟಕ

ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್​ ಸೈಲ್​​ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಒಟ್ಟಾರೆಯಾಗಿ ಒಳಸಂಚಿಗೆ 5 ವರ್ಷ, ವಂಚನೆಗೆ 7 ವರ್ಷ, ಕಳ್ಳತನಕ್ಕೆ 3 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ.

ಬೆಂಗಳೂರು, ಅ.26: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್​ ಸೈಲ್​​ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಒಟ್ಟಾರೆಯಾಗಿ ಒಳಸಂಚಿಗೆ 5 ವರ್ಷ, ವಂಚನೆಗೆ 7 ವರ್ಷ, ಕಳ್ಳತನಕ್ಕೆ 3 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಪ್ರಕರಣದಲ್ಲಿ ಸಿಬಿಐ ಮತ್ತು ಲೋಕಾಯುಕ್ತ ಅಧಿಕಾರಿಗಳ ತನಿಖೆ ಬಳಿಕ ವಾದ, ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ಟೋಬರ್​ 24 ರಂದು ಶಾಸಕ ಸತೀಶ್​ ಸೈಲ್​ ದೋಷಿ ಎಂದು ತೀರ್ಪು ನೀಡಿತ್ತು. 

ಬರೋಬ್ಬರಿ 44 ಕೋಟಿ ರೂ. ದಂಡ 

ಒಟ್ಟು ಆರು ಪ್ರಕರಣಗಳಲ್ಲಿ ಈವರೆಗೆ 44 ಕೋಟಿ ರೂ.ಗೂ ಹೆಚ್ಚು ಮೊತ್ತವನ್ನು ದಂಡ ವಿಧಿಸಲಾಗಿದೆ. ಈಗಾಗಲೇ ಅನುಭವಿಸಿರುವ ಶಿಕ್ಷೆ ಪ್ರಮಾಣ ಹೊರತುಪಡಿಸಿ ಉಳಿದ ಶಿಕ್ಷೆಯನ್ನು ಅನುಭವಿಸಬೇಕಿದೆ. ಸತೀಶ್ ಸೈಲ್‌ ಜತೆ ಮಹೇಶ್ ಬಿಳಿಯೆ, ಲಕ್ಷ್ಮೀ ವೆಂಕಟೇಶ್ವರ ಮಿನರಲ್ಸ್ ಖಾರದಪುಡಿ ಮಹೇಶ್‌, ಮಲ್ಲಿಕಾರ್ಜುನ ಶಿಪ್ಪಿಂಗ್‌ಗೂ ಜೈಲು ಶಿಕ್ಷೆ ವಿಧಿಸಲಾಗಿದೆ. 

ನಿಯಮ ಪ್ರಕಾರ, ಎರಡು ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದ ಕಾರಣ ಸತೀಶ್ ಸೈಲ್ ಶಾಸಕ ಸ್ಥಾನವೂ ಅನರ್ಹಗೊಳ್ಳಲಿದೆ. ಸತೀಶ್ ಸೈಲ್​ಗೆ 7 ವರ್ಷದಷ್ಟು ಜೈಲು ಶಿಕ್ಷೆಯಾಗಿದ್ದರಿಂದ ಸಹಜವಾಗಿಯೇ ಶಾಸಕ ಸ್ಥಾನ ಅನರ್ಹಗೊಳ್ಳಲಿದೆ. ಒಂದು ವೇಳೆ ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿ ಅಲ್ಲಿ ಶಿಕ್ಷೆಗೆ ತಡೆ ಸಿಕ್ಕರೆ ಅನರ್ಹತೆಯಿಂದ ಬಚಾವಾಗಬಹುದು.

ಬಳ್ಳಾರಿ, ಹೊಸಪೇಟೆ, ಸಂಡೂರು, ಚಿತ್ರದುರ್ಗದ ಅರಣ್ಯ ಪ್ರದೇಶಗಳಿಂದ ಭಾರೀ ಪ್ರಮಾಣದ ಕಬ್ಬಿಣದ ಅದಿರನ್ನು ವಿದೇಶಕ್ಕೆ ರಫ್ತು ಮಾಡಲಾಗುತ್ತಿತ್ತು. 2010ರ ಮಾ.20ರಂದು ಅರಣ್ಯ ಇಲಾಖೆ 350 ಕೋಟಿ ರೂ. ಮೌಲ್ಯದ ಬರೋಬ್ಬರಿ 8.5 ಲಕ್ಷ ಮೆಟ್ರಿಕ್ ಟನ್‌ ಅದಿರನ್ನು ಮುಟ್ಟುಗೋಲು ಹಾಕಿ, ಬೇಲೆಕೇರಿ ಬಂದರಿನಲ್ಲಿ ದಾಸ್ತಾನು ಇರಿಸಿತ್ತು. ಕೆಲವು ತಿಂಗಳ ಬಳಿಕ ಅರಣ್ಯ ಇಲಾಖೆ ತಂಡ ಪರಿಶೀಲಿಸಿದಾಗ ಬಂದರಿನಲ್ಲಿ ಕೇವಲ 2 ಲಕ್ಷ ಮೆಟ್ರಿಕ್ ಟನ್ ಅದಿರು ಮಾತ್ರ ಇತ್ತು. 250 ಕೋಟಿ ರೂ. ಮೌಲ್ಯದ ಅದಿರು ನಾಪತ್ತೆಯಾಗಿದ್ದ ಬಗ್ಗೆ ಬಂದರು ಅಧಿಕಾರಿ, ಅದಿರು ಸಾಗಣೆ ಕಂಪನಿಗಳ ವಿರುದ್ಧ ಅರಣ್ಯ ಇಲಾಖೆ ದೂರು ನೀಡಿತ್ತು.

ಅಕ್ರಮದ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತವು ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆದರೆ ಸರ್ಕಾರವು 2010ರ ಜೂ.23ರಂದು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿತ್ತು. 2011ರಲ್ಲಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ವಹಿಸಿದ್ದಲ್ಲದೆ, 2009 ರಿಂದ ಮೇ 2010ರ ನಡುವೆ ರಾಜ್ಯದಲ್ಲಿನ ನಡೆದ ಅಕ್ರಮ ಗಣಿಗಾರಿಕೆ, ಸಾಗಣೆ ಕುರಿತು ತನಿಖೆ ನಡೆಸಲು ಸೂಚಿಸಿತ್ತು. ಅದರಂತೆ ಸಿಬಿಐ 2013ರ ಸೆ.13 ರಂದು ಕೇಸ್‌ ದಾಖಲಿಸಿ ತನಿಖೆ ಕೈಗೊಂಡಿತ್ತು. ಬೇಲೆಕೇರಿ ಬಂದರಿನ ಮೂಲಕ ಸುಮಾರು 88.06 ಲಕ್ಷ ಮೆಟ್ರಿಕ್ ಟನ್‌ ಅದಿರನ್ನು 73 ರಫ್ತು ಕಂಪನಿಗಳ ಮೂಲಕ ವಿದೇಶಕ್ಕೆ ರವಾನೆ ಮಾಡಲಾಗಿತ್ತು ಎಂಬುದನ್ನ ಪತ್ತೆ ಮಾಡಲಾಗಿತ್ತು. ಈ ಪೈಕಿ ಸತೀಶ್ ಮಾಲಿಕತ್ವದ ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಸುಮಾರು 7.23 ಲಕ್ಷ ಟನ್‌ ಮೆಟ್ರಿಕ್ ಅದಿರನ್ನು ಬೇಲೆಕೇರಿ ಮೂಲಕ ವಿದೇಶಕ್ಕೆ ರಫ್ತು ಮಾಡಿರುವುದು ತನಿಖೆಯಲ್ಲಿ ಕಂಡುಬಂದಿತ್ತು. ಈ ಬಗ್ಗೆ ಜನಪ್ರತಿನಿಧಿಗಳ ಕೋರ್ಟಿಗೆ ಸಲ್ಲಿಸಿದ ವರದಿ ಆಧರಿಸಿ ಕೋರ್ಟ್ ಶಿಕ್ಷೆ ಜಾರಿ ಮಾಡಿದೆ.

On Saturday, October 26, the Special Court for People’s Representatives pronounced the punishment for MLA Satish Sail and others involved in the Belekeri iron ore theft case.