ಮೇ 1ರ ಬಳಿಕ ಪೌರ ಕಾರ್ಮಿಕರ ಸೇವೆ ಖಾಯಂ, ಗುತ್ತಿಗೆ ವಾಹನ ಚಾಲಕರಿಗೂ ಖಾಯಮಾತಿ ; ಸಿಎಂ ಸಿದ್ದರಾಮಯ್ಯ ಘೋಷಣೆ 

07-04-25 11:04 pm       Bangalore Correspondent   ಕರ್ನಾಟಕ

ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕರ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರು, ಎ.7 : ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆಯನ್ನು ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕರ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದು ತಿಳಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು ಎಂದು ಹೇಳಿದರು.

ಪೌರ ಕಾರ್ಮಿಕರ ಜತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ‌ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದ್ದಾರೆ. ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು‌. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು.

ಸಮುದಾಯಕ್ಕೆ ನಾರಾಯಣ್ ಅವರ ಕೊಡುಗೆ ದೊಡ್ಡದು
ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ‌ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ನಾರಾಯಣ್ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ. ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸುವಲ್ಲಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡ್ತಾ ಇರುವುದು ನಮ್ಮ ಸರ್ಕಾರ ಮಾತ್ರ ಎಂದರು. ಪೌರ ಕಾರ್ಮಿಕರ ಸಂಬಳವನ್ನು 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದು ಇದೇ ಸಿದ್ದರಾಮಯ್ಯ ಎಂದು ತಿಳಿಸಿದರು. ‌

Chief Minister Siddaramaiah on Monday announced that the government would regularise the services of pourakarmikas (municipal workers) on May 1, which is observed as International Workers’ Day.