ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆ ನಿಷೇಧ ; ಪ್ರಿಯಾಂಕ ಖರ್ಗೆ ಒತ್ತಾಯಕ್ಕೆ ಕ್ರಮ ಜರುಗಿಸಲು ಸೂಚಿಸಿದ ಸಿಎಂ ಸಿದ್ದರಾಮಯ್ಯ 

13-10-25 12:51 pm       Bangalore Correspondent   ಕರ್ನಾಟಕ

ಶಾಲಾ ಮೈದಾನ ಸೇರಿದಂತೆ ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್'ಎಸ್ಎಸ್) ಯಾವುದೇ ರೀತಿಯ ಚಟುವಟಿಕೆಗಳನ್ನು ನಡೆಸದಂತೆ ನಿಷೇಧ ಹೇರುವಂತೆ ಪತ್ರ ಬರೆದು ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಬೆಂಗಳೂರು, ಅ.13 : ಶಾಲಾ ಮೈದಾನ ಸೇರಿದಂತೆ ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್'ಎಸ್ಎಸ್) ಯಾವುದೇ ರೀತಿಯ ಚಟುವಟಿಕೆಗಳನ್ನು ನಡೆಸದಂತೆ ನಿಷೇಧ ಹೇರುವಂತೆ ಪತ್ರ ಬರೆದು ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರಾಜ್ಯದ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್'ಎಸ್ಎಸ್ ಸಂಘಟನೆ ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಿನಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಸಿದ್ದರಾಮಯ್ಯ ಅವರಿಗೆ ಪ್ರಿಯಾಂಕ್ ಖರ್ಗೆಯವರು ಅ.4ರಂದು ಪತ್ರ ಬರೆದಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಪತ್ರದಲ್ಲಿ ಸರ್ಕಾರಿ ಶಾಲೆ, ಅನುದಾನಿತ ಶಾಲೆ, ಮೈದಾನ, ಪಾರ್ಕ್, ಮುಜರಾಯಿ ದೇಗುಲ, ಪುರಾತತ್ವ ಇಲಾಖೆ ಸ್ಥಳ ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್'ಎಸ್ಎಸ್ ಶಾಖೆ, ಬೈಠಕ್ ಹೆಸರಿನಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಪತ್ರ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ನಾಯಕರನ್ನು ಕೆರಳಿಸಿದೆ.

ಮುಖ್ಯಮಂತ್ರಿಗಳಿಗೆ ತಾವು ಬರೆದಿರುವ ಪತ್ರದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಿಯಾಂಕ್ ಖರ್ಗೆ ಪೋಸ್ಟ್ ಮಾಡಿದ್ದು, ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಅಧಿಕಾರ ನೀಡುತ್ತದೆ. ಆರೆಸ್ಸೆಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ.

ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರೆಸ್ಸೆಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಲ್ಲಿಸಿದ್ದೇನೆಂದು ಹೇಳಿದ್ದಾರೆ. 

ಸಚಿವರ ಪತ್ರಕ್ಕೆ ಸಿದ್ದರಾಮಯ್ಯ ಸಹಿ ಮಾಡಿ, ಪರಿಶೀಲಿಸಿ ಮುಂದಿನ ಕ್ರಮ ಜರುಗಿಸುವುದು ಎಂದು ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿಗಳಿಗೆ ನೀಡಿದ್ದಾರೆ. ಆಮೂಲಕ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ನಾಯಕರು, ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

ಇದೇ ವೇಳೆ, ಬಿಕೆ.ಹರಿಪ್ರಸಾದ್ ಅವರು ಪ್ರಿಯಾಂಕ್ ಖರ್ಗೆಗೆ ಬೆಂಬಲ ನೀಡಿದ್ದಾರೆ. ಆರ್‌ಎಸ್‌ಎಸ್ ಭಾರತ ದೇಶದ ತಾಲಿಬಾನಿಗಳು. ಸರಕಾರದಲ್ಲಿ ನೋಂದಾಯಿಸದ ಸಂಘಟನೆ. ಅವರು ತಮ್ಮ ಸಂಸ್ಥೆ ರಿಜಿಸ್ಟರ್ ಆಗಿರುವುದನ್ನು ತೋರಿಸಲಿ. ಸರ್ಕಾರಿ ಜಾಗಗಳಲ್ಲಿ ಯಾವುದೇ ರೀತಿಯ ಕಾರ್ಯಕ್ರಮ ನಡೆಸುವ ಮೊದಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ. ನೋಂದಣಿ ಇಲ್ಲದೆ ಇಷ್ಟು ವರ್ಷಗಳಿಂದ ಸರ್ಕಾರಿ ಜಾಗಗಳಲ್ಲಿ ಚಟುವಟಿಕೆ ನಡೆಸುತ್ತಿದ್ದಾರೆ. 

ಪ್ಯಾಲೇಸ್ತೀನ್ ಪರವಾಗಿ ಪ್ರತಿಭಟನೆ ಮಾಡಿದರೆ ಪೊಲೀಸರಿಂದ ತಕ್ಷಣ ಬಂಧನವಾಗುತ್ತದೆ. ಆದರೆ ಆರ್‌ಎಸ್‌ಎಸ್ ಶಾಖೆಗಳನ್ನು ಸರ್ಕಾರಿ ಮೈದಾನಗಳಲ್ಲಿ ನಡೆಸಲು ಪೊಲೀಸರು ಅನುಮತಿ ನೀಡುತ್ತಾರೆ. ಇದೇಕೆ ಎಂಬುದನ್ನು ನಾನು ಪ್ರಶ್ನಿಸುತ್ತಿದ್ದೇನೆಂದು ಹರಿಪ್ರಸಾದ್ ಹೇಳಿದ್ದಾರೆ.

Karnataka Chief Minister Siddaramaiah has directed officials to examine and take action on a proposal by Minister Priyank Kharge to ban Rashtriya Swayamsevak Sangh (RSS) activities in all government-owned public spaces, including school grounds, parks, and temples under the Muzrai and Archaeology departments. Kharge, in his letter dated October 4, urged the government to prohibit RSS “shakhas” and meetings in such areas, arguing they promote divisive ideology and negatively influence youth.