ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್ಕಿ ಬದಲು ‘ಇಂದಿರಾ ಕಿಟ್’ ವಿತರಣೆ, ಬಡವರಿಗೆ ಅಕ್ಕಿ ಬದಲು ಪೌಷ್ಟಿಕ ಆಹಾರ !

06-03-26 03:50 pm       HK News Staffer   ಕರ್ನಾಟಕ

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುವ ವೇಳೆ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಪೌಷ್ಟಿಕಾಂಶಯುಕ್ತ ಆಹಾರ ಸಾಮಗ್ರಿಗಳನ್ನು ಒಳಗೊಂಡ ‘ಇಂದಿರಾ ಆಹಾರ ಕಿಟ್’ ವಿತರಿಸಲಾಗುವುದು ಎಂದು ಘೋಷಿಸಿದರು.

ಬೆಂಗಳೂರು, ಮಾರ್ಚ್ 06: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆ ಘೋಷಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುವ ವೇಳೆ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಪೌಷ್ಟಿಕಾಂಶಯುಕ್ತ ಆಹಾರ ಸಾಮಗ್ರಿಗಳನ್ನು ಒಳಗೊಂಡ ‘ಇಂದಿರಾ ಆಹಾರ ಕಿಟ್’ ವಿತರಿಸಲಾಗುವುದು ಎಂದು ಘೋಷಿಸಿದರು.

‘ಇಂದಿರಾ ಆಹಾರ ಕಿಟ್’ ಘೋಷಣೆ:
ರಾಜ್ಯದ ಬಡ ಜನರ ಪೌಷ್ಟಿಕಾಂಶವನ್ನು ಹೆಚ್ಚಿಸುವ ಉದ್ದೇಶದಿಂದ, ಪ್ರಸ್ತುತ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಪ್ರತಿ ತಿಂಗಳು ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಆಹಾರ ಕಿಟ್’ ವಿತರಿಸುವ ಯೋಜನೆಯನ್ನು ಸರ್ಕಾರ ಕೈಗೊಳ್ಳಲಿದೆ. ಈ ಯೋಜನೆ ಜಾರಿಗೆ ₹6,200 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

4.54 ಕೋಟಿ ಫಲಾನುಭವಿಗಳಿಗೆ ಅನ್ನಭಾಗ್ಯ ಲಾಭ:

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ರಾಜ್ಯದ 4.54 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಹೆಚ್ಚುವರಿ 5 ಕೆಜಿ ಅಕ್ಕಿ ವಿತರಣೆ ಯಶಸ್ವಿಯಾಗಿ ನಡೆಯುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗಾಗಿ ಸರ್ಕಾರ ₹17,167 ಕೋಟಿ ವೆಚ್ಚ ಮಾಡಿರುವುದಾಗಿ ಸಿಎಂ ತಿಳಿಸಿದ್ದಾರೆ.

ಡಿಜಿಟಲ್ ಪಾವತಿ ವ್ಯವಸ್ಥೆ:

ಆಹಾರ ಧಾನ್ಯಗಳ ವಿತರಣೆಯಲ್ಲಿ ಭಾಗವಹಿಸುವ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಲಾಭಾಂಶ ಪಾವತಿಯಲ್ಲಿ ಆಗುತ್ತಿದ್ದ ವಿಳಂಬವನ್ನು ನಿವಾರಿಸಲು FIST ಅಪ್ಲಿಕೇಶನ್ ಮೂಲಕ ಲಾಭಾಂಶವನ್ನು ನೇರವಾಗಿ ಪಾವತಿಸುವ ವ್ಯವಸ್ಥೆ ಜಾರಿಗೆ ತರಲಾಗುತ್ತದೆ.

ದಾಸೋಹ ಯೋಜನೆ ವಿಸ್ತರಣೆ:
ಇದಲ್ಲದೆ, ದಾಸೋಹ ಯೋಜನೆ ಅಡಿಯಲ್ಲಿ ರಾಜ್ಯದಾದ್ಯಂತ 274 ಕಲ್ಯಾಣ ಸಂಸ್ಥೆಗಳ 32,059 ಫಲಾನುಭವಿಗಳಿಗೆ ₹14 ಕೋಟಿ ವೆಚ್ಚದಲ್ಲಿ ಆಹಾರ ಭದ್ರತೆ ಒದಗಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಇನ್ನೂ 34 ಹೊಸ ಕಲ್ಯಾಣ ಸಂಸ್ಥೆಗಳ 6,701 ಫಲಾನುಭವಿಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಘೋಷಿಸಿದರು.
ಒಟ್ಟಾರೆ, ಬಡವರ ಆಹಾರ ಭದ್ರತೆ ಮತ್ತು ಪೌಷ್ಟಿಕಾಂಶವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೊಸ ರೂಪ ನೀಡಲು ಮುಂದಾಗಿದೆ ಎಂಬುದು ಸ್ಪಷ್ಟವಾಗಿದೆ.