ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡ, ರಾಜೀನಾಮೆಗೆ ಹೈಕಮಾಂಡ್ ಸೂಚನೆ, ಸಿದ್ದರಾಮಯ್ಯ ಒಪ್ಪಿಗೆ

13-04-26 04:20 pm       HK News Staffer   ಕರ್ನಾಟಕ

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಸಿಗದ ಕಾರಣಕ್ಕೆ ಪ್ರಚಾರದಿಂದ ದೂರ ಉಳಿದಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರನ್ನು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಹೈಕಮಾಂಡ್ ಸೂಚನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಇನ್ನೂ ರಾಜೀನಾಮೆ ಕೊಟ್ಟಿಲ್ಲ. ಕೊಡಬಹುದು ಅಂದುಕೊಂಡಿದ್ದೇನೆ ಎಂದು ಹೇಳಿದ್ದಾರೆ.‌

ಬೆಂಗಳೂರು, ಎಪ್ರಿಲ್ 13: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ಸಿಗದ ಕಾರಣಕ್ಕೆ ಪ್ರಚಾರದಿಂದ ದೂರ ಉಳಿದಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರನ್ನು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಹೈಕಮಾಂಡ್ ಸೂಚನೆ ನೀಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನನ್ನ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಇನ್ನೂ ರಾಜೀನಾಮೆ ಕೊಟ್ಟಿಲ್ಲ. ಕೊಡಬಹುದು ಅಂದುಕೊಂಡಿದ್ದೇನೆ ಎಂದು  ಹೇಳಿದ್ದಾರೆ.‌

ಹೈಕಮಾಂಡ್‌ ತಾಕೀತು ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ದಾವಣಗೆರೆ ಉಪ ಚುನಾವಣೆಯ ಉಸ್ತುವಾರಿಗೆ ಹೈಕಮಾಂಡ್‌ ಎಐಸಿಸಿ ಕಾರ್ಯದರ್ಶಿಯನ್ನು ನೇಮಿಸಿತ್ತು. ಅವರು ನೀಡಿದ ವರದಿ ಮೇಲೆ ಹೈಕಮಾಂಡ್‌ ಕ್ರಮ ತೆಗೆದುಕೊಳ್ಳುತ್ತಿದೆ ಎಂದರು. ಕಾಂಗ್ರೆಸ್‌ನ ಅಲ್ಪಸಂಖ್ಯಾತ ನಾಯಕರ ನಡುವೆ ಹೊತ್ತಿಕೊಂಡ ‘ಹುನ್ನಾರದ ಕಿಡಿ’ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌ ಅವರ ಸ್ಥಾನಕ್ಕೂ ಸಂಚಕಾರ ತಂದೊಡ್ಡಿದೆ. ನಸೀರ್‌ಗೆ ರಾಜೀನಾಮೆ ನೀಡುವಂತೆ ಅಧಿಕಾರಿಗಳ ಮೂಲಕ ಸ್ವತಃ ಸಿಎಂ ಸೂಚಿಸಿದ್ದಾರೆ ಎನ್ನಲಾಗಿದೆ. ಇದನ್ನು ಖುದ್ದು ತಮ್ಮ ಆಪ್ತರ ಬಳಿ ನಸೀರ್‌ ಅಹಮದ್‌ ಹೇಳಿಕೊಂಡಿದ್ದಾರೆ. 

ಭಾನುವಾರ ಇಡೀ ದಿನ ನಸೀರ್‌ ಅಹಮದ್‌, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬೆಳವಣಿಗೆಗಳ ಬಗ್ಗೆ ಮನವರಿಕೆ ಮಾಡಲು ಯತ್ನಿಸಿದ್ದಾರೆ. ಆದರೆ, ಸಿಎಂ ಭೇಟಿ ಸಾಧ್ಯವಾಗಿಲ್ಲ. ಇದರಿಂದಾಗಿ ಬೇಸರದಿಂದ ಹಿಂತಿರುಗಿದ್ದಾರೆ. ಈ ಮಧ್ಯೆ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲ ಅವರು ಸಿಎಂ ಜತೆ ಮಾತುಕತೆ ನಡೆಸಿದ್ದು, ರಾಜೀನಾಮೆ ಪಡೆಯಲು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಸೀರ್‌ ಅಹಮದ್‌ ಅವರ ವಿಧಾನ ಪರಿಷತ್ತಿನ ಸದಸ್ಯತ್ವ ಅವಧಿ ಬರುವ ಮೇನಲ್ಲಿ ಪೂರ್ಣಗೊಳ್ಳಲಿದೆ. ಹಾಗಾಗಿ, ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಪಡೆಯುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ. ಒಂದು ದಿನದ ಹಿಂದಷ್ಟೇ ನಸೀರ್‌ ಅವರಿಗೆ ತಮ್ಮ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಪಕ್ಷವು ಕಾರಣ ಕೇಳಿ ನೋಟಿಸ್‌ ನೀಡಿತ್ತು.