ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ, ಹಾಕಿದರೆ ಕಾನೂನು ಕ್ರಮ ; ಸಚಿವ ಮಧು ಬಂಗಾರಪ್ಪ

23-05-26 10:40 pm       HK News Desk   ಕರ್ನಾಟಕ

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ. ಯಾರಾದರೂ ಶಾಲು ಹಾಕಿಕೊಂಡು ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು, ಮೇ 23: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ. ಯಾರಾದರೂ ಶಾಲು ಹಾಕಿಕೊಂಡು ಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.

ಜೂನ್ 1 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗಲಿದ್ದು, ಮತ್ತೆ ಹಿಜಾಬ್ ಹಾಗೂ ಕೇಸರಿ ಶಾಲು ಸದ್ದು ಮಾಡುತ್ತಿವೆ. ಈ ವಿಚಾರದಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹಿಜಾಬ್ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೆವು. ಜನರು ಮತ ಕೊಟ್ಟಿದ್ದಾರೆ, ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ‌ ಎಂದರು.

ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಅದು ಸಮಾನತೆಯ ಸಂಕೇತ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಹಾಗಂತ, ಸರ್ಕಾರದ ಯಾವುದೇ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಿಕೊಂಡು ಬರಲು ಅವಕಾಶ ಇಲ್ಲ. ಯಾರಾದರೂ ಶಾಲು ಹಾಕಿಕೊಂಡು ಬಂದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್​ ಇದೆ ಎಂಬುದನ್ನು ಬಿಜೆಪಿಯವರು ಮೊದಲು ನೋಡಿಕೊಂಡು ಬರಲಿ ಎಂದು ಕಿಡಿಕಾರಿದ್ದಾರೆ.

ಪ್ರಾಥಮಿಕ ತರಗತಿಯಿಂದ 12ನೇ ತರಗತಿಯ ವರೆಗೆ ಜನಿವಾರ, ಹಿಜಾಬ್, ಶಿವದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಆದರೆ ಹೊಸದಾಗಿ ಕೇಸರಿ ಶಾಲು ಧರಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.