ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣ ; ಸೋನಿಯಾ, ರಾಹುಲ್‌, ಖರ್ಗೆ ಭಾವಚಿತ್ರ ಸುಟ್ಟು ಹೈಕಮಾಂಡ್‌ ವಿರುದ್ಧ ಆಕ್ರೋಶ, ಕಲಬುರಗಿಯಲ್ಲಿ ಕುರುಬ ಸಮಾಜ ಪ್ರತಿಭಟನೆ

28-05-26 06:18 pm       HK News Staffer   ಕರ್ನಾಟಕ

ಸಿಎಂ ಸಿದ್ದರಾಮಯ್ಯನವರಿಗೆ ರಾಜೀನಾಮೆ ನೀಡಲು ಒತ್ತಡ ಹಾಕಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಕರ್ನಾಟಕ ಪ್ರದೇಶ ಕುರುಬ ಸಂಘ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಕಲಬುರಗಿ, ಮೇ 28: ಸಿಎಂ ಸಿದ್ದರಾಮಯ್ಯನವರಿಗೆ ರಾಜೀನಾಮೆ ನೀಡಲು ಒತ್ತಡ ಹಾಕಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಕರ್ನಾಟಕ ಪ್ರದೇಶ ಕುರುಬ ಸಂಘ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಸರ್ದಾರ ವಲ್ಲಭಭಾಯಿ ಪಟೇಲ್‌ ವೃತ್ತದಲ್ಲಿ ಸುಡುವ ಬಿಸಿಲಿನಲ್ಲಿ ಜಮಾಯಿಸಿದ್ದ ಸಮುದಾಯದ ಜನರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಮೊಳಗಿಸಿದರು. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರಹಾಕಿದರು. ನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಪೊಲೀಸರು ಹಾಗೂ ಪ್ರತಿಭಟನಕಾರರ ನಡುವೆ ಕೆಲಹೊತ್ತು ವಾಗ್ವಾದ ಜರುಗಿತು. ಕಾಂಗ್ರೆಸ್‌ ಹೈಕಮಾಂಡ್‌ ನಾಯಕರಾದ ಸೋನಿಯಾಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ಭಾವಚಿತ್ರಗಳನ್ನು ಸುಟ್ಟು ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು. 

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಹಾಗೂ ಅವರ ಅಹಿಂದ ಬೆಂಬಲವೇ ಕಾರಣ. ಸಿದ್ದರಾಮಯ್ಯ ರಾಜೀನಾಮೆ ನೀಡಿದರೇ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಹಿನ್ನಡೆ ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಪ್ರದೇಶ ಕುರುಬ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಗುರುನಾಥ್‌ ಎಸ್‌ ಪೂಜಾರಿ ಮಾತನಾಡಿ, ‘ರಾಜ್ಯಕ್ಕೆ ಗ್ಯಾರಂಟಿ ನೀಡಿ, ಅದನ್ನು ವ್ಯವಸ್ಥಿತವಾಗಿ ನಿಭಾಯಿಸಿದ್ದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಉದ್ದೇಶ ಏನು?. 2028ರವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರಲಿದ್ದಾರೆ ಎನ್ನುವ ಕಾರಣಕ್ಕೆ ಅಹಿಂದ ಸಮಾಜ ಶೇ 90ರಷ್ಟು ಮತ ಹಾಕಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದಿದೆ’ ಎಂದರು.

ಸಿದ್ದರಾಮಯ್ಯ 2004ರಲ್ಲಿ ಜೆಡಿಎಸ್‌ ಅಧ್ಯಕ್ಷರಾಗಿದ್ದಾಗ 58 ಶಾಸಕರು ಆಯ್ಕೆಯಾಗಿದ್ದರು. ಅದೇ ಸಿದ್ದರಾಮಯ್ಯ ಜೆಡಿಎಸ್‌ ಬಿಟ್ಟು ಹೊರ ಬಂದ ನಂತರ, ಈಗ ಕೇವಲ 18 ಶಾಸಕರಿಗೆ ಇಳಿದಿದೆ. ಕಾಂಗ್ರೆಸ್‌ ಸರ್ಕಾರ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೇ 136 ಶಾಸಕರಿರುವ ಕಾಂಗ್ರೆಸ್‌ 2028ರಲ್ಲಿ ಕೇವಲ 36ಕ್ಕೆ ಇಳಿಯಲಿದೆ’ ಎಂದು ಆಕ್ರೋಶ ಹೊರಹಾಕಿದರು.