ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ; ಸತೀಶ್ ಜಾರಕಿಹೊಳಿ ನಡುವೆ ರೇಸ್ ನಲ್ಲಿ ಬಿ.ಕೆ. ಹರಿಪ್ರಸಾದ್ ಹೆಸರು ಮುನ್ನೆಲೆಗೆ ! ಓಬಿಸಿ ಕೋಟಾದಲ್ಲಿ ಚಾನ್ಸ್ ಸಾಧ್ಯತೆ

30-05-26 01:14 pm       HK News Staffer   ಕರ್ನಾಟಕ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತ ತಲುಪಿರುವ ಬೆನ್ನಲ್ಲೇ, ಇದೀಗ ಕಾಂಗ್ರೆಸ್ ಪಾಳಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವುದು ಖಚಿತವಾದ ಹಿನ್ನೆಲೆಯಲ್ಲಿ ಅವರು ನಿರ್ವಹಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸ ನಾಯಕನ ಆಯ್ಕೆ ಕುರಿತ ಚರ್ಚೆ ತೀವ್ರಗೊಂಡಿದೆ.

ಬೆಂಗಳೂರು, ಮೇ 30: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತ ತಲುಪಿರುವ ಬೆನ್ನಲ್ಲೇ, ಇದೀಗ ಕಾಂಗ್ರೆಸ್ ಪಾಳಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವುದು ಖಚಿತವಾದ ಹಿನ್ನೆಲೆಯಲ್ಲಿ ಅವರು ನಿರ್ವಹಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸ ನಾಯಕನ ಆಯ್ಕೆ ಕುರಿತ ಚರ್ಚೆ ತೀವ್ರಗೊಂಡಿದೆ.

ಈವರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿ ಸತೀಶ್ ಜಾರಕಿಹೊಳಿ ಹೆಸರು ಮುಂಚೂಣಿಯಲ್ಲಿದ್ದರೂ, ಇದೀಗ ಬಿ.ಕೆ. ಹರಿಪ್ರಸಾದ್ ಹೆಸರು ದಿಢೀರಾಗಿ ರೇಸ್‌ಗೆ ಎಂಟ್ರಿ ಕೊಟ್ಟಿರುವುದು ಕಾಂಗ್ರೆಸ್ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಒಬಿಸಿ ಕೋಟಾದಡಿ ಹರಿಪ್ರಸಾದ್‌ಗೆ ಅವಕಾಶ?

ಮೂಲಗಳ ಪ್ರಕಾರ, ಒಬಿಸಿ ಸಮುದಾಯದ ಪ್ರತಿನಿಧಿತ್ವದ ಆಧಾರದಲ್ಲಿ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಗಂಭೀರ ಚರ್ಚೆಗಳು ನಡೆಯುತ್ತಿವೆ. ಸತೀಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ಹೆಚ್ಚು ಒತ್ತು ನೀಡಿದರೆ, ಅಧ್ಯಕ್ಷ ಸ್ಥಾನಕ್ಕೆ ಹರಿಪ್ರಸಾದ್ ಹೆಸರು ಹೈಕಮಾಂಡ್ ಮುಂದೆ ಪ್ರಸ್ತಾಪವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೈಕಮಾಂಡ್‌ಗೆ ಸತೀಶ್ ಬೇಡಿಕೆಯೇ ಸವಾಲು 

ಸತೀಶ್ ಜಾರಕಿಹೊಳಿ ಅವರು ಸಚಿವ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡನ್ನೂ ಬಯಸಿದ್ದಾರೆ ಎನ್ನಲಾಗುತ್ತಿದೆ. ಆದರೆ "ಒಬ್ಬ ವ್ಯಕ್ತಿಗೆ ಒಂದು ಹುದ್ದೆ" ಎಂಬ ಕಾಂಗ್ರೆಸ್ ಹೈಕಮಾಂಡ್‌ನ ನೀತಿ ಈ ಬೇಡಿಕೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಇದೇ ವಿಚಾರ ಇದೀಗ ಪಕ್ಷದ ಉನ್ನತ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಮಾತ್ರ ಒಪ್ಪಿಕೊಂಡರೆ ಬೆಳಗಾವಿ ಜಿಲ್ಲೆಯಲ್ಲಿ ತಮ್ಮ ರಾಜಕೀಯ ಪ್ರಭಾವ ಕುಗ್ಗಬಹುದು ಎಂಬ ಆತಂಕ ಸತೀಶ್ ಜಾರಕಿಹೊಳಿ ಅವರಿಗೆ ಇದೆ ಎನ್ನಲಾಗಿದೆ. ಜಿಲ್ಲೆಯ ಉಸ್ತುವಾರಿ ಸಚಿವ ಸ್ಥಾನ ಮತ್ತೊಬ್ಬ ನಾಯಕರ ಪಾಲಾದರೆ ಸ್ಥಳೀಯ ರಾಜಕೀಯ ಸಮೀಕರಣಗಳ ಮೇಲೆ ಪರಿಣಾಮ ಬೀಳಬಹುದು ಎಂಬ ಲೆಕ್ಕಾಚಾರ ಅವರದ್ದಾಗಿದೆ.

ಸಿಎಲ್ಪಿ ಸಭೆಯಲ್ಲಿ ಚರ್ಚೆ ಸಾಧ್ಯತೆ 

ಇಂದು ಸಂಜೆ ನಾಲ್ಕು ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರವೂ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಹೊಸ ಸರ್ಕಾರದ ರಚನೆ ಜತೆಗೆ ಪಕ್ಷದ ಸಂಘಟನಾ ಪುನರ್‌ವ್ಯವಸ್ಥೆಯೂ ಕಾಂಗ್ರೆಸ್ ಹೈಕಮಾಂಡ್‌ಗೆ ಮಹತ್ವದ ಸವಾಲಾಗಿ ಪರಿಣಮಿಸಿದೆ.