ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸಾವು ? ವೈರಲ್ ಆರೋಪಕ್ಕೆ ನಿರ್ದೇಶಕ, ಸಚಿವರಿಂದ ಸ್ಪಷ್ಟನೆ 

18-06-26 01:17 pm       HK News Staffer   ಕರ್ನಾಟಕ

ರಾಜ್ಯದ ಪ್ರತಿಷ್ಠಿತ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ 11 ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಮೃತರ ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯ ಆರೋಪ ಮಾಡಿದ್ದಾರೆ. ಈ ಬೆನ್ನಲ್ಲೇ ಆಸ್ಪತ್ರೆ ನಿರ್ದೇಶಕ ಡಾ. ದಿನೇಶ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

ಮೈಸೂರು, ಜೂನ್ 18: ರಾಜ್ಯದ ಪ್ರತಿಷ್ಠಿತ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ 11 ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಮೃತರ ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯ ಆರೋಪ ಮಾಡಿದ್ದಾರೆ. ಈ ಬೆನ್ನಲ್ಲೇ ಆಸ್ಪತ್ರೆ ನಿರ್ದೇಶಕ ಡಾ. ದಿನೇಶ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

24 ಗಂಟೆಯಲ್ಲಿ 11 ಸಾವು;

ಕುಟುಂಬಸ್ಥರ ಆಕ್ರೋಶ
ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಸರಣಿ ಸಾವಿನ ಪ್ರಕರಣಗಳು ನಡೆದಿವೆ ಎಂಬ ಮಾಹಿತಿ ಹರಿದಾಡುತ್ತಿದ್ದಂತೆ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಆಸ್ಪತ್ರೆಯಲ್ಲಿ ಸಮರ್ಪಕ ವೈದ್ಯಕೀಯ ಸೇವೆ ಲಭ್ಯವಾಗಿರಲಿಲ್ಲ ಎಂಬ ಆರೋಪಗಳನ್ನು ಕೆಲ ಕುಟುಂಬಸ್ಥರು ಮಾಡಿದ್ದು, ಸಂಬಂಧಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಸಾವನ್ನಪ್ಪಿದವರು ಗಂಭೀರ ಹೃದಯ ರೋಗಿಗಳು’ – ಡಾ. ದಿನೇಶ್ ; 

ವಿಷಯ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿದ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ದಿನೇಶ್, ಆರೋಪಗಳಿಗೆ ಸ್ಪಷ್ಟನೆ ನೀಡಿದ್ದು, “ಪ್ರತಿದಿನ 600 ರಿಂದ 800 ಹೊರರೋಗಿಗಳು ಆಸ್ಪತ್ರೆಗೆ ಬರುತ್ತಾರೆ. ಸುಮಾರು 100 ಮಂದಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಾರೆ. ಇವರಲ್ಲಿ ಹೆಚ್ಚಿನವರು ತೀವ್ರ ಹೃದಯಾಘಾತ ಮತ್ತು ಗಂಭೀರ ಹೃದಯ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಾಗಿರುತ್ತಾರೆ. ಸಾವನ್ನಪ್ಪಿದ ರೋಗಿಗಳು ಒಂದೇ ದಿನ ದಾಖಲಾದವರಲ್ಲ. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದವರು. ಎಲ್ಲರೂ 60 ವರ್ಷ ಮೇಲ್ಪಟ್ಟವರಾಗಿದ್ದರು” ಎಂದು ಹೇಳಿದರು.

ವೈದ್ಯರ ಕೊರತೆ ಮತ್ತು ವೈದ್ಯರು ಆಸ್ಪತ್ರೆಯಲ್ಲಿ ಇರಲಿಲ್ಲ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, “ರಾತ್ರಿ ಪಾಳಿಯಲ್ಲಿ ನಾಲ್ವರು ವೈದ್ಯರು ಕರ್ತವ್ಯ ನಿರ್ವಹಿಸುತ್ತಾರೆ. ವೈದ್ಯರು ಇರಲಿಲ್ಲ ಎಂಬ ಸುದ್ದಿ ಸತ್ಯಕ್ಕೆ ದೂರವಾದದ್ದು. ಜಯದೇವ ಆಸ್ಪತ್ರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆದ ಸಂಸ್ಥೆಯಾಗಿದ್ದು, ಅದರ ಬಗ್ಗೆ ತಪ್ಪು ಮಾಹಿತಿ ಹರಡುವುದು ಸರಿಯಲ್ಲ” ಎಂದರು.

25 ಖಾಯಂ ವೈದ್ಯರ ನೇಮಕಾತಿ;

“ನಮ್ಮಲ್ಲಿ 5 ರಿಂದ 7 ಶೇಕಡಾ ವೈದ್ಯರ ಕೊರತೆ ಇದೆ. ಈ ಸಮಸ್ಯೆ ಪರಿಹರಿಸಲು ಬೆಂಗಳೂರು ಮತ್ತು ಮೈಸೂರು ಜಯದೇವ ಆಸ್ಪತ್ರೆಗಳಿಗಾಗಿ 25 ಖಾಯಂ ವೈದ್ಯರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ” ಎಂದು ಡಾ. ದಿನೇಶ್ ಮಾಹಿತಿ ನೀಡಿದರು.

ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಶರಣ ಪ್ರಕಾಶ್ ಪಾಟೀಲ್;

ಇದೇ ವೇಳೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳು ಹಾಗೂ ವೈದ್ಯರಿಂದ ಮಾಹಿತಿ ಪಡೆದರು.
“ಒಂದೇ ದಿನ 11 ಜನರ ಸಾವಿನ ಬಗ್ಗೆ ಸಂಪೂರ್ಣ ಮಾಹಿತಿ ಕೇಳಿದ್ದೇನೆ. ಕಳೆದ ಹಲವು ವರ್ಷಗಳ ಅಂಕಿ-ಅಂಶಗಳ ಪ್ರಕಾರ ಜಯದೇವ ಆಸ್ಪತ್ರೆಯಲ್ಲಿ ಸಾವಿನ ಪ್ರಮಾಣ ಶೇ.4 ರಿಂದ 5ರಷ್ಟಿದೆ. ಜಯದೇವ ಆಸ್ಪತ್ರೆ ರಾಜ್ಯಕ್ಕಷ್ಟೇ ಅಲ್ಲ, ದೇಶಕ್ಕೂ ಮಾದರಿಯಾಗಿದೆ” ಎಂದು ಸಚಿವರು ಹೇಳಿದರು.

ಲೋಪ ಕಂಡುಬಂದರೆ ಕ್ರಮ;

“ಸಾವಿನ ಪ್ರಕರಣಗಳಲ್ಲಿ ಯಾವುದೇ ಲೋಪ ಅಥವಾ ನಿರ್ಲಕ್ಷ್ಯ ಕಂಡುಬಂದರೆ ವೈದ್ಯರಿಂದ ಮಾಹಿತಿ ಪಡೆದು ಸಾರ್ವಜನಿಕರಿಗೆ ತಿಳಿಸಲಾಗುವುದು. ಈ ಬಗ್ಗೆ ಸಮಗ್ರ ಅವಲೋಕನ ನಡೆಸುವಂತೆ ವೈದ್ಯರಿಗೆ ಸೂಚಿಸಿದ್ದೇನೆ” ಎಂದು ಸಚಿವರು ತಿಳಿಸಿದರು

‘ತಪ್ಪು ಮಾಹಿತಿ ಖಾಸಗಿ ಆಸ್ಪತ್ರೆಗಳಿಗೆ ಲಾಭ’;

ಜಯದೇವ ಆಸ್ಪತ್ರೆ ವಿರುದ್ಧ ತಪ್ಪು ಮಾಹಿತಿ ಹರಡಿದರೆ ಅದರ ಲಾಭ ಖಾಸಗಿ ಆಸ್ಪತ್ರೆಗಳಿಗೆ ಆಗುತ್ತದೆ. ಕಡಿಮೆ ವೆಚ್ಚದಲ್ಲಿ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆ ನೀಡುತ್ತಿರುವ ಸಂಸ್ಥೆಯ ಬಗ್ಗೆ ಆಧಾರರಹಿತ ಆರೋಪ ಮಾಡಬಾರದು ಎಂದು ಸಚಿವರು ಮನವಿ ಮಾಡಿದರು.

ಮೈಸೂರು, ಕಲಬುರಗಿ ಜಯದೇವ ಆಸ್ಪತ್ರೆಗಳಿಗೆ ಹೆಚ್ಚಿನ ಸ್ವಾಯತ್ತತೆ
ಕಲಬುರಗಿ ಹಾಗೂ ಮೈಸೂರು ಜಯದೇವ ಆಸ್ಪತ್ರೆಗಳಿಗೆ ಆಡಳಿತಾತ್ಮಕವಾಗಿ ಹೆಚ್ಚಿನ ಸ್ವಾಯತ್ತತೆ ನೀಡಲು ಸರ್ಕಾರ ನಿರ್ಧರಿಸಿದ್ದು, ಕೆಲವು ನಿರ್ಧಾರಗಳನ್ನು ಸ್ಥಳೀಯ ಮಟ್ಟದಲ್ಲೇ ಕೈಗೊಳ್ಳುವ ಅಧಿಕಾರ ನೀಡಲಾಗುತ್ತದೆ. ಇದರಿಂದ ಆಡಳಿತ ಮತ್ತು ಚಿಕಿತ್ಸಾ ಸೇವೆಗಳು ಮತ್ತಷ್ಟು ವೇಗವಾಗಿ ನಡೆಯಲಿವೆ ಎಂದು ಸಚಿವರು ಹೇಳಿದರು.

ಇನ್ನೆರಡು ತಿಂಗಳೊಳಗೆ ಸಿಬ್ಬಂದಿ ಕೊರತೆಯನ್ನೂ ನಿವಾರಿಸಲಾಗುವುದು ಎಂದು ಅವರು ಭರವಸೆ ನೀಡಿದರು.