3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ ವಿಂಗಡಣೆ ಬೆನ್ನಲ್ಲೇ ಚುನಾವಣಾ ಆಯೋಗಕ್ಕೆ ವರದಿ, ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

13-07-26 10:32 am       HK News Staffer   ಕರ್ನಾಟಕ

ರಾಜ್ಯದಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳ ಆಡಳಿತಾವಧಿ ಮುಕ್ತಾಯವಾಗಿದ್ದು, ಮುಂದಿನ 3-4 ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಜುಲೈ 13: ರಾಜ್ಯದಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳ ಆಡಳಿತಾವಧಿ ಮುಕ್ತಾಯವಾಗಿದ್ದು, ಮುಂದಿನ 3-4 ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. 

ಕೆಲವು ಗ್ರಾಮ ಪಂಚಾಯತಿಗಳ ಮೇಲ್ದರ್ಜೆ ಮತ್ತು ವಿಲೀನದ ಕಾರಣಗಳಿಂದಾಗಿ ಕ್ಷೇತ್ರ ಪುನರ್‌ ವಿಂಗಡಣೆ ಪ್ರಕ್ರಿಯೆಯೂ ನಡೆಯುತ್ತಿದೆ. ಇನ್ನೆರಡು ತಿಂಗಳಲ್ಲಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಮೀಸಲಾತಿ ಪಟ್ಟಿಯೊಂದಿಗೆ ರಾಜ್ಯ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗುವುದು. ವರದಿ ಸಲ್ಲಿಕೆಯಾದ 45 ದಿನಗಳೊಳಗೆ ಚುನಾವಣೆ ನಡೆಸಲು ಆಯೋಗ ಸಿದ್ಧತೆ ನಡೆಸಲಿದೆ ಎಂದು ಸಚಿವ ಖಂಡ್ರೆ ತಿಳಿಸಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಸರ್ಕಾರಿ ಸಿಬ್ಬಂದಿ ಬಹುತೇಕ ಅದರ ಕೆಲಸದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಚುನಾವಣೆ ತಯಾರಿಗೆ ಹೆಚ್ಚಿನ ಕಾಲಾವಕಾಶದ ಅಗತ್ಯವಿದೆ. ಆದರೂ ಅಕ್ಟೋಬರ್- ನವೆಂಬರ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ ಎಂದವರು ವಿವರಿಸಿದರು. 

ಗ್ರಾಮೀಣ ಭಾಗದಲ್ಲಿ 'ಇ-ಸ್ವತ್ತು' ಕುರಿತಾಗಿ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಎಸ್‌ಐಆರ್ ಪ್ರಕ್ರಿಯೆ ಮುಗಿದ ತಕ್ಷಣ ಮನೆ ಬಾಗಿಲಿಗೆ ಹೋಗಿ ಇ-ಸ್ವತ್ತು ನೀಡುವ ಕಾರ್ಯಕ್ರಮ ಜಾರಿಗೆ ತರಲಾಗುವುದು. ಆದರೆ, ಬಿ ಖರಾಬು ಜಮೀನುಗಳಲ್ಲಿ ನಿರ್ಮಿಸಿರುವ ಲೇಔಟ್‌ಗಳಿಗೆ ಇ-ಸ್ವತ್ತು ನೀಡಲು ಸಾಧ್ಯವಿಲ್ಲ. ಈ ಬಗ್ಗೆ ಕಂದಾಯ ಇಲಾಖೆಯ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು. 

ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಬರಬೇಕಿದ್ದ 2,186.20 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ. ತಾಂತ್ರಿಕ ಸಮಸ್ಯೆ ನೆಪವೊಡ್ಡಿ ಹಣ ತಡೆಹಿಡಿಯುವುದು ಸರಿಯಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದ ಸಂಸದರೆಲ್ಲರೂ ಒಗ್ಗೂಡಿ ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಅವರು ಮನವಿ ಮಾಡಿದರು.

ಸರ್ಕಾರವು ಪಂಚಾಯತಿ ಚುನಾವಣೆಗೆ ಸಿದ್ಧತೆಗಳನ್ನು ನಡೆಸುತ್ತಿದ್ದು, ಕ್ಷೇತ್ರಗಳ ವಿಂಗಡಣೆ ಪೂರ್ಣಗೊಂಡ ನಂತರ ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಇದರೊಂದಿಗೆ, ಕೇಂದ್ರದಿಂದ ಬಾಕಿ ಇರುವ ಅನುದಾನ ಬಿಡುಗಡೆಗೂ ರಾಜ್ಯ ಸರ್ಕಾರ ಪ್ರಯತ್ನಿಸಲಾಗುವುದು ಎಂದು ಖಂಡ್ರೆ ತಿಳಿಸಿದ್ದಾರೆ.