ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ; ಪೇಪರ್ ಲೀಕ್ ಮಾಡಿದ್ರೆ 10 ವರ್ಷ ಜೈಲು, 10 ಕೋಟಿ ರೂ. ದಂಡ ; ರಾಜ್ಯಸಭೆಯಲ್ಲಿ ಐತಿಹಾಸಿಕ ಮಸೂದೆ ಅಂಗೀಕಾರ

31-07-26 01:22 pm       HK News Staffer   ಕರ್ನಾಟಕ

ದೇಶಾದ್ಯಂತ ಆತಂಕಕ್ಕೆ ಕಾರಣವಾಗಿದ್ದ ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಂಡಿಸಿದ್ದ ಪರೀಕ್ಷಾ ಅಕ್ರಮ ತಡೆ (ಆ್ಯಂಟಿ ಪೇಪರ್ ಲೀಕ್) ಮಸೂದೆಗೆ ಗುರುವಾರ ರಾಜ್ಯಸಭೆ ಅನುಮೋದನೆ ನೀಡಿದೆ. ಬುಧವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದ ಮಸೂದೆ ಇದೀಗ ಸಂಸತ್ತಿನ ಎರಡೂ ಸದನಗಳ ಒಪ್ಪಿಗೆ ಪಡೆದಿದ್ದು, ರಾಷ್ಟ್ರಪತಿಗಳ ಅಂಕಿತದ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ.

ನವದೆಹಲಿ, ಜು.31: ದೇಶಾದ್ಯಂತ ಆತಂಕಕ್ಕೆ ಕಾರಣವಾಗಿದ್ದ ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಂಡಿಸಿದ್ದ ಪರೀಕ್ಷಾ ಅಕ್ರಮ ತಡೆ (ಆ್ಯಂಟಿ ಪೇಪರ್ ಲೀಕ್) ಮಸೂದೆಗೆ ಗುರುವಾರ ರಾಜ್ಯಸಭೆ ಅನುಮೋದನೆ ನೀಡಿದೆ. ಬುಧವಾರ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದ ಮಸೂದೆ ಇದೀಗ ಸಂಸತ್ತಿನ ಎರಡೂ ಸದನಗಳ ಒಪ್ಪಿಗೆ ಪಡೆದಿದ್ದು, ರಾಷ್ಟ್ರಪತಿಗಳ ಅಂಕಿತದ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ.

ಹೊಸ ಕಾನೂನಿನ ಪ್ರಕಾರ, ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಸಂಘಟಿತ ವಂಚನೆಯಲ್ಲಿ ಭಾಗಿಯಾಗುವವರಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹10 ಕೋಟಿ ವರೆಗೆ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಕಾಪಾಡಲು ಇದು ಅತ್ಯಂತ ಕಠಿಣ ಕಾನೂನುಗಳಲ್ಲಿ ಒಂದಾಗಿದೆ.

ರಾಜ್ಯಸಭೆಯಲ್ಲಿ ಆಡಳಿತ–ವಿಪಕ್ಷಗಳ ನಡುವೆ ತೀವ್ರ ವಾಕ್ಸಮರ;

ಮಸೂದೆ ಕುರಿತ ಚರ್ಚೆ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯಿತು. ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮವನ್ನು ಪ್ರಸ್ತಾಪಿಸಿ, ಅದರ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ತಿರುಗೇಟು ನೀಡಿದ ಕೇಂದ್ರ ಸಚಿವ ಹಾಗೂ ಆಡಳಿತ ಪಕ್ಷದ ನಾಯಕ ಜೆ.ಪಿ. ನಡ್ಡಾ, ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ನಿಜವಾದ ಕಾಳಜಿ ಇದ್ದರೆ ಪ್ರತಿಪಕ್ಷಗಳು ಪರೀಕ್ಷಾ ಅಕ್ರಮ ತಡೆ ಮಸೂದೆಗೆ ಸಂಪೂರ್ಣ ಬೆಂಬಲ ನೀಡಬೇಕು ಎಂದು ಸವಾಲು ಹಾಕಿದರು.

ಚರ್ಚೆಯ ವೇಳೆ ಪ್ರತಿಪಕ್ಷ ಸದಸ್ಯರು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಪೊಲೀಸ್ ಕ್ರಮವನ್ನು ಪ್ರಮುಖ ವಿಷಯವನ್ನಾಗಿ ಪ್ರಸ್ತಾಪಿಸಿದರು. ಮತ್ತೊಂದೆಡೆ, ಆಡಳಿತ ಪಕ್ಷ ಪರೀಕ್ಷಾ ಅಕ್ರಮವನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಉದ್ದೇಶದಿಂದ ಮಸೂದೆಗೆ ಆದ್ಯತೆ ನೀಡಿತು. ಸುದೀರ್ಘ ಚರ್ಚೆಯ ಬಳಿಕ ಮಸೂದೆಗೆ ರಾಜ್ಯಸಭೆಯ ಅನುಮೋದನೆ ದೊರಕಿತು.

ವಿದ್ಯಾರ್ಥಿಗಳಿಗೆ ಮೋದಿ ಸಂದೇಶ

ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರಗೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳಿಗೆ ಉದ್ದೇಶಿಸಿ ಬಿಡುಗಡೆ ಮಾಡಿದ ವಿಡಿಯೋ ಸಂದೇಶದಲ್ಲಿ, "ನಮ್ಮ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ಮಾಡುವ ಗ್ಯಾಂಗ್‌ಗಳು ಹಾಗೂ ವಿದ್ಯಾರ್ಥಿಗಳ ಕನಸುಗಳೊಂದಿಗೆ ಆಟವಾಡುವವರು ಇನ್ನು ಮುಂದೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ" ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.