ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿದೆ ; ವೈಯಕ್ತಿಕ ದ್ವೇಷ ಸಾಧಿಸಿ ಸಚಿವ ಸ್ಥಾನ ತಪ್ಪಿಸಿದ್ದಾರೆ, ಡಿ.ಕೆ - ಹೈಕಮಾಂಡ್ ವಿರುದ್ಧ ಸಿಡಿದ ಎಂಸಿ ಸುಧಾಕರ್

04-08-26 09:10 pm       HK News Staffer   ಕರ್ನಾಟಕ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಮತ್ತಷ್ಟು ದಟ್ಟವಾಗಿದೆ. ಸಚಿವ ಸ್ಥಾನ ಕೈತಪ್ಪಿದ ಮಾಜಿ ಸಚಿವ ಎಂಸಿ ಸುಧಾಕರ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದು, "ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ಕಠಿಣ ನಿರ್ಧಾರ ಕೈಗೊಳ್ಳುತ್ತೇನೆ" ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು,  ಆ 04: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಮತ್ತಷ್ಟು ದಟ್ಟವಾಗಿದೆ. ಸಚಿವ ಸ್ಥಾನ ಕೈತಪ್ಪಿದ ಮಾಜಿ ಸಚಿವ ಎಂಸಿ ಸುಧಾಕರ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದು, "ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ಕಠಿಣ ನಿರ್ಧಾರ ಕೈಗೊಳ್ಳುತ್ತೇನೆ" ಎಂದು ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮುಖ್ಯಮಂತ್ರಿ ಹೆಸರನ್ನು ನೇರವಾಗಿ ಉಲ್ಲೇಖಿಸದೇ "ಸರ್ಕಾರದ ಮುಖ್ಯಸ್ಥರು" ಎಂದು ವಾಗ್ದಾಳಿ ನಡೆಸಿದ ಸುಧಾಕರ್, ಸಚಿವ ಸ್ಥಾನ ಹಂಚಿಕೆಯಲ್ಲಿ ಯಾವುದೇ ಸ್ಪಷ್ಟ ಮಾನದಂಡ ಪಾಲಿಸಲಾಗಿಲ್ಲ ಎಂದು ಆರೋಪಿಸಿದರು.

"ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ಅನ್ಯಾಯ"

"ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯವೈಖರಿ ಮೆಚ್ಚಿ ನಾನು ಅವರಿಗೆ ಆತ್ಮೀಯನಾದೆ. ನಾನು ಜಾತಿ ನೋಡಿ ನಾಯಕತ್ವ ಬೆಂಬಲಿಸಿದವನಲ್ಲ. ಆದರೆ ಸಿದ್ದರಾಮಯ್ಯ ಅವರ ಆಪ್ತ ಎನ್ನುವ ಒಂದೇ ಕಾರಣಕ್ಕೆ ವೈಯಕ್ತಿಕ ದ್ವೇಷ ಸಾಧಿಸಿ ನನಗೆ ಸಚಿವ ಸ್ಥಾನ ಕೈತಪ್ಪುವಂತೆ ಮಾಡಲಾಗಿದೆ" ಎಂದು ಸುಧಾಕರ್ ಬೇಸರ ವ್ಯಕ್ತಪಡಿಸಿದರು. "ಸಿದ್ದರಾಮಯ್ಯ ಸರ್ಕಾರದಲ್ಲಿ ಕೆಲಸ ಮಾಡಿದ ಹಲವರಿಗೆ ಮತ್ತೆ ಅವಕಾಶ ಸಿಕ್ಕಿದೆ. ಆದರೆ ಯಾವ ಮಾನದಂಡದ ಮೇಲೆ ಸಚಿವ ಸ್ಥಾನ ನೀಡಲಾಗಿದೆ ಎಂಬುದು ಅರ್ಥವಾಗುತ್ತಿಲ್ಲ" ಎಂದು ಪ್ರಶ್ನಿಸಿದರು.

"ಸಿಎಂ ಆಶಯದಂತೆ ನಡೆಯದಿದ್ದದ್ದೇ ಕಾರಣ?"

ಸಚಿವ ಸ್ಥಾನ ತಪ್ಪಿದ ಹಿನ್ನೆಲೆ ಅಸಮಾಧಾನ ಹೊರಹಾಕಿದ ಅವರು, "ಸಿಎಂ ಆಶಯದಂತೆ ನಾನು ನಡೆದುಕೊಳ್ಳದ ಕಾರಣಕ್ಕೆ ಈ ರೀತಿಯ ನಿರ್ಧಾರ ತೆಗೆದುಕೊಂಡಿರಬಹುದು. ಕೆಲವರ ನಡವಳಿಕೆ ಮತ್ತು ಮಾತುಗಳು ನನಗೆ ಇಷ್ಟವಿರಲಿಲ್ಲ. ಬಹುಶಃ ನನ್ನ ಕಾರ್ಯವೈಖರಿ ಅವರ ನಿರೀಕ್ಷೆಯ ಮಟ್ಟದಲ್ಲಿ ಇರಲಿಲ್ಲವೇನೋ" ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

"ಸಿದ್ದರಾಮಯ್ಯ ಮಾತಿಗೆ ಬೆಲೆ ಇಲ್ಲದಂತಾಗಿದೆ"

ಸಂಪುಟ ವಿಸ್ತರಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸಮರ್ಪಕ ಗೌರವ ಸಿಕ್ಕಿಲ್ಲ ಎಂದು ಆರೋಪಿಸಿದ ಸುಧಾಕರ್, "ನಿನ್ನೆ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿದ್ದರಾಮಯ್ಯ ಅವರ ಮಾತಿಗೆ ಯಾವುದೇ ಮನ್ನಣೆ ಸಿಕ್ಕಿಲ್ಲ. ಅವರ ತ್ಯಾಗಕ್ಕೂ ಬೆಲೆ ಇಲ್ಲದಂತಾಗಿದೆ. ಮುಂದಿನ ದಿನಗಳಲ್ಲಿ ಪಕ್ಷ ಸಿದ್ದರಾಮಯ್ಯ ಅವರನ್ನು ಹೇಗೆ ನಡೆಸಿಕೊಳ್ಳುತ್ತದೆ, ಅವರಿಗೆ ಯಾವ ಪರಿಸ್ಥಿತಿ ಬರುತ್ತದೆ ಎಂಬುದನ್ನು ಕಾದು ನೋಡಿ" ಎಂದು ಹೇಳಿದರು.

"ಸಣ್ಣ ಸಂಪುಟಕ್ಕೆ ಎರಡು ತಿಂಗಳು ಬೇಕಿತ್ತಾ?"

ಹೈಕಮಾಂಡ್‌ನ ಕಾರ್ಯವೈಖರಿಯನ್ನೂ ಟೀಕಿಸಿದ ಅವರು, "ಇಷ್ಟು ಸಣ್ಣ ಪ್ರಮಾಣದ ಸಚಿವ ಸಂಪುಟ ವಿಸ್ತರಣೆ ಮಾಡಲು ಎರಡು ತಿಂಗಳು ಬೇಕಿತ್ತಾ? ಹೈಕಮಾಂಡ್ ನಾಯಕರು ಈ ಸಂಪೂರ್ಣ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಚಿವ ಸಂಪುಟ ವಿಸ್ತರಣೆ ಬಳಿಕ ಸಚಿವ ಸ್ಥಾನ ವಂಚಿತರ ಅಸಮಾಧಾನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈಗ ಮಾಜಿ ಸಚಿವ ಎಂಸಿ ಸುಧಾಕರ್ ಕೂಡ ಬಹಿರಂಗವಾಗಿ ನಾಯಕತ್ವದ ವಿರುದ್ಧ ಧ್ವನಿ ಎತ್ತಿರುವುದು ಕಾಂಗ್ರೆಸ್‌ನಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಅಸಮಾಧಾನಿತ ಶಾಸಕರ ನಡೆ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.