ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್‌ ಗೆ ಸಿಸಿಬಿ ದಾಳಿ ; ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ, ಜೈಲಧಿಕಾರಿ ಅಮಾನತು, ಎಸ್‌ಪಿಗೆ ಶೋಕಾಸ್ ನೋಟಿಸ್

12-08-26 11:37 am       HK News Staffer   ಕರ್ನಾಟಕ

ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಅಂಡ್ರಾಯ್ಡ್ ಮೊಬೈಲ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಜೈಲಿನ ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣ ರಂಗಾಪುರರನ್ನು ಅಮಾನತುಗೊಳಿಸಿ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕ (ಎಸ್‌ಪಿ) ಅನ್ಶುಕುಮಾರ್ ಅವರಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.

ಬೆಂಗಳೂರು, ಆ 12: ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಅಂಡ್ರಾಯ್ಡ್ ಮೊಬೈಲ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಜೈಲಿನ ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣ ರಂಗಾಪುರರನ್ನು ಅಮಾನತುಗೊಳಿಸಿ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕ (ಎಸ್‌ಪಿ) ಅನ್ಶುಕುಮಾರ್ ಅವರಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.

ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಇತರ ಖೈದಿಗಳಂತೆ ಕಡ್ಡಾಯವಾಗಿ ಧರಿಸಬೇಕಾದ ಬಿಳಿ ಸಮವಸ್ತ್ರವನ್ನು ಧರಿಸುತ್ತಿರಲಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಇದೀಗ ಅವರ ಸೆಲ್‌ನಲ್ಲೇ ಅಂಡ್ರಾಯ್ಡ್ ಮೊಬೈಲ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಜೈಲು ಆಡಳಿತದ ಕಾರ್ಯವೈಖರಿ ಪ್ರಶ್ನೆಗೆ ಗುರಿಯಾಗಿದೆ.

ಇದಕ್ಕೂ ಮುನ್ನ ಆಗಸ್ಟ್‌ 6ರಂದು ಜೈಲಿನ ಬ್ಯಾರಕ್‌ಗಳಲ್ಲಿ ಅಧಿಕಾರಿಗಳು ನಡೆಸಿದ್ದ ತಪಾಸಣೆ ವೇಳೆ ಪ್ರಜ್ವಲ್ ರೇವಣ್ಣ ಬಳಿ ಯಾವುದೇ ಮೊಬೈಲ್ ಪತ್ತೆಯಾಗಿರಲಿಲ್ಲ. ಹೀಗಾಗಿ ಮೊಬೈಲ್ ಜೈಲಿನೊಳಗೆ ಹೇಗೆ ಬಂತು, ಯಾರು ನೀಡಿದರು ಎಂಬ ಬಗ್ಗೆ ತಕ್ಷಣ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಈ ಕುರಿತು ಸ್ಪಷ್ಟನೆ ದೊರೆಯದಿದ್ದರೆ ಅವರನ್ನು ಬೇರೆ ಬ್ಯಾರಕ್‌ಗೆ ಸ್ಥಳಾಂತರಿಸಲಾಗುವುದು ಎಂಬ ಕಟ್ಟುನಿಟ್ಟಿನ ಎಚ್ಚರಿಕೆಯನ್ನೂ ನೀಡಲಾಗಿದೆ.

ಇದೇ ವೇಳೆ ಸಿಸಿಬಿ ಅಧಿಕಾರಿಗಳು ಸುಮಾರು ಆರು ಗಂಟೆಗಳ ಕಾಲ ದರ್ಶನ್, ಪವಿತ್ರಗೌಡ, ಪ್ರಜ್ವಲ್ ರೇವಣ್ಣ ಸೇರಿದಂತೆ ವಿಐಪಿ ಖೈದಿಗಳ ಬ್ಯಾರಕ್‌ಗಳಲ್ಲಿ ತೀವ್ರ ಶೋಧ ಕಾರ್ಯ ನಡೆಸಿದರು. ಈ ಕಾರ್ಯಾಚರಣೆ ವೇಳೆ ಪ್ರಜ್ವಲ್ ರೇವಣ್ಣ ಅವರ ಹಾಸಿಗೆಯ ಕೆಳಗೆ ಬಚ್ಚಿಟ್ಟಿದ್ದ ಅಂಡ್ರಾಯ್ಡ್ ಮೊಬೈಲ್ ಪತ್ತೆಯಾಗಿದೆ.
ಮೊಬೈಲ್ ಜೈಲಿನೊಳಗೆ ಹೇಗೆ ತಲುಪಿತು, ಇದರ ಹಿಂದೆ ಯಾರ ಕೈವಾಡವಿದೆ ಹಾಗೂ ಭದ್ರತಾ ಲೋಪ ಎಲ್ಲಿ ಸಂಭವಿಸಿದೆ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.