ಹನೂರು ಎನ್‌ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ ಕೂಲಂಕುಷ ತನಿಖೆ ಎಂದ ಸಿಎಂ ಡಿಕೆಶಿ, ಸಿಬಿಐ ತನಿಖೆಗೆ ನಿರಾಕರಣೆ, ಕಳ್ಳಬೇಟೆ ಶಿಬಿರಗಳಿಗೆ ಜಿಲೆಟಿನ್ ಇಟ್ಟು ಸ್ಫೋಟ ಪತ್ತೆ

19-08-26 05:38 pm       HK News Staffer   ಕರ್ನಾಟಕ

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಬೆಂಗಳೂರು, ಆ.19: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಕಳ್ಳಬೇಟೆ ನಿಗ್ರಹ ಶಿಬಿರಗಳನ್ನು ಜಿಲೆಟಿನ್ ಬಳಸಿ ಸ್ಪೋಟಿಸಿರುವ ಘಟನೆಯಲ್ಲಿ ತಮಿಳುನಾಡು ಮೂಲದ ಕಳ್ಳರ ಕೈವಾಡದ ಶಂಕೆ ಬಗ್ಗೆ ಕೇಳಿದಾಗ, “ನನಗೂ ಕೆಲವು ಮಾಹಿತಿ ಬರುತ್ತಿದೆ. ಅರಣ್ಯ ಸಚಿವರು ತನಿಖೆ ಮಾಡಿಸುತ್ತಿದ್ದಾರೆ. ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ವರದಿ ಬಂದ ಬಳಿಕ ಮಾಹಿತಿ ನೀಡುತ್ತೇವೆ” ಎಂದರು. 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಪ್ರದೇಶದಲ್ಲಿ (ಕಾವೇರಿ ವನ್ಯಧಾಮ) ಇತ್ತೀಚೆಗೆ ನಡೆದ ಅರಣ್ಯ ಸಿಬ್ಬಂದಿ ಮತ್ತು ಬೇಟೆಗಾರರ ನಡುವಿನ ಶೂಟೌಟ್‌ನಲ್ಲಿ ಮೂವರು ಸಾವನ್ನಪ್ಪಿದ ಪ್ರಕರಣವು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ರಾಜ್ಯ ರಾಜಕಾರಣದಲ್ಲು ತೀವ್ರ ವಿವಾದ ಸೃಷ್ಟಿಸಿದೆ. 

ಘಟನೆಗೆ ಸಂಬಂಧಿಸಿ ಈಗಾಗಲೇ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಲಾಗಿದ್ದು, ಆಗಸ್ಟ್ 21ರೊಳಗೆ ವರದಿ ಸಲ್ಲಿಕೆಯಾಗುವ ಸಾಧ್ಯತೆಯಿದೆ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಕೇವಲ ಮ್ಯಾಜಿಸ್ಟ್ರೇಟ್ ತನಿಖೆಗೆ ಸೀಮಿತವಾಗದೆ ಸತ್ಯಾಸತ್ಯತೆ ಹೊರಬರಲು ಉನ್ನತ ಮಟ್ಟದ ನ್ಯಾಯಾಂಗ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ. 

ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಅರಣ್ಯ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಬೇಟೆಗೆ ಬಂದಿದ್ದ ತಂಡ ಹಾಗೂ ಅರಣ್ಯ ಇಲಾಖೆಯ ಗಸ್ತು ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಅರಣ್ಯ ಸಿಬ್ಬಂದಿ ನಡೆಸಿದ ಶೂಟೌಟ್‌ನಲ್ಲಿ ತಮಿಳುನಾಡು ಮೂಲದ ಮೂವರು ಬೇಟೆಗಾರರು ಮೃತಪಟ್ಟಿದ್ದರು. ಘಟನೆಯು ತಮಿಳುನಾಡಿನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು ಅಲ್ಲಿನ ಸರ್ಕಾರ ಮೃತಪಟ್ಟ ಮೂವರ ಕುಟುಂಬಕ್ಕೆ ತಲಾ ಹತ್ತು ಲಕ್ಷ ಪರಿಹಾರ ಘೋಷಿಸಿದೆ. 

ಘಟನಾ ಸ್ಥಳದಿಂದ ಎರಡು ನಾಡ ಬಂದೂಕುಗಳು, ಜಿಂಕೆ/ವನ್ಯಜೀವಿ ಮಾಂಸ, ಕತ್ತಿ, ಮಚ್ಚು, ಬ್ಯಾಟರಿ, ಮದ್ದಿನ ಪೌಡರ್ ಮತ್ತು ಜೀವಂತ ಗುಂಡುಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿದ್ದಾರೆ. ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಇದೇ ವಿಚಾರದಲ್ಲಿ ಭಾರಿ ಗದ್ದಲ ಸೃಷ್ಟಿಸಿದ್ದಾರೆ.