ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏರ್‌ಪೋರ್ಟ್‌ಗೆ ತೆರಳಿ ಮೊಬೈಲ್‌ ಸ್ವಿಚ್‌ಆಫ್‌, KPSC ಅಕ್ರಮದ ಬೆನ್ನಲ್ಲೇ ಅಧಿಕಾರಿ ಮಿಸ್ಸಿಂಗ್

22-08-26 03:01 pm       HK News Staffer   ಕರ್ನಾಟಕ

ಕರ್ನಾಟಕದ ಹಿರಿಯ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಅವರು ಗುರುವಾರ ಬೆಳಗ್ಗೆ ಮೊಬೈಲ್‌ ಫೋನ್‌ ಸ್ವಿಚ್‌ಆಫ್‌ ಮಾಡಿಕೊಂಡಿದ್ದು, ಬಳಿಕ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಬೆಂಗಳೂರು, ಆಗಸ್ಟ್‌ 22: ಕರ್ನಾಟಕದ ಹಿರಿಯ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಅವರು ಗುರುವಾರ ಬೆಳಗ್ಗೆ ಮೊಬೈಲ್‌ ಫೋನ್‌ ಸ್ವಿಚ್‌ಆಫ್‌ ಮಾಡಿಕೊಂಡಿದ್ದು, ಬಳಿಕ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ.

ಜ್ಞಾನೇಂದ್ರ ಕುಮಾರ್ ಅವರು ದೆಹಲಿಗೆ ತೆರಳಲು ವಿಮಾನದ ಟಿಕೆಟ್‌ ಬುಕ್‌ ಮಾಡಿದ್ದರು ಎನ್ನಲಾಗಿದೆ. ದೆಹಲಿಗೆ ಹೋಗುವುದಾಗಿ ತಿಳಿಸಿ ವಿಮಾನ ನಿಲ್ದಾಣಕ್ಕೆ ತೆರಳಿದ್ದರೂ, ಅವರು ವಿಮಾನ ಹತ್ತಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವಿಮಾನ ನಿಲ್ದಾಣದವರೆಗೆ ಅವರ ಚಲನವಲನವನ್ನು ಪೊಲೀಸರು ಪರಿಶೀಲಿಸಿದ್ದು, ಬಳಿಕ ಅವರ ಮೊಬೈಲ್‌ ಸಂಪರ್ಕ ಕಡಿತಗೊಂಡಿದೆ ಎನ್ನಲಾಗಿದೆ.

ಮೊಬೈಲ್‌ ಸ್ವಿಚ್‌ಆಫ್‌ ಆಗಿರುವ ಹಿನ್ನೆಲೆಯಲ್ಲಿ ಅವರು ದೆಹಲಿ ಕಡೆಗೆ ತೆರಳಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಆದರೆ, ಕುಟುಂಬಸ್ಥರ ಸಂಪರ್ಕಕ್ಕೂ ಸಿಗದೇ ಇರುವುದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ. ಜ್ಞಾನೇಂದ್ರ ಕುಮಾರ್ ಅವರಿಗೆ ಈ ಹಿಂದೆ ಆರೋಗ್ಯ ಸಮಸ್ಯೆಯೂ ಇತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಸದ್ಯ ಅವರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಅವರು ಕರ್ನಾಟಕ ಲೋಕಸೇವಾ ಆಯೋಗ ದಲ್ಲಿಯೂ ಸೇವೆ ಸಲ್ಲಿಸಿದ್ದರು.

ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ಬಗ್ಗೆ ಹಿರಿಯ ಐಎಎಸ್‌ ಅಧಿಕಾರಿಯೊಬ್ಬರು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್ ಅವರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಅಧಿಕಾರಿಯ ಚಲನವಲನದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ. ವಿಮಾನ ನಿಲ್ದಾಣದಿಂದ ಅವರು ಎಲ್ಲಿಗೆ ತೆರಳಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದು, ಏರ್‌ಪೋರ್ಟ್‌ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಗಳು ಸೇರಿದಂತೆ ಲಭ್ಯವಿರುವ ಮಾಹಿತಿಯನ್ನು ಪರಿಶೀಲಿಸುತ್ತಿದ್ದಾರೆ.

ಇನ್ನು ಜ್ಞಾನೇಂದ್ರ ಕುಮಾರ್ ಅವರ ನಾಪತ್ತೆ ಪ್ರಕರಣವು ಇತ್ತೀಚೆಗೆ ಬೆಳಕಿಗೆ ಬಂದಿರುವ KPSC ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ. ಈ ಅಕ್ರಮದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದರು.

ಜ್ಞಾನೇಂದ್ರ ಕುಮಾರ್ ಅವರು ಈ ಹಿಂದೆ KPSCಯಲ್ಲಿ ಕಾರ್ಯನಿರ್ವಹಿಸಿದ್ದ ಅವಧಿಯಲ್ಲಿನ ಪಾತ್ರ ಸೇರಿದಂತೆ ಹಲವು ಅಂಶಗಳನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ ಎನ್ನಲಾಗಿದೆ. ED ದಾಳಿ ನಡೆದ ಮರುದಿನವೇ ಅವರು ನಾಪತ್ತೆಯಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ, ನಾಪತ್ತೆ ಹಾಗೂ KPSC ಅಕ್ರಮದ ನಡುವೆ ನೇರ ಸಂಬಂಧವಿದೆ ಎಂಬುದು ಇನ್ನೂ ತನಿಖೆಯಿಂದ ದೃಢಪಟ್ಟಿಲ್ಲ.

ಅಧಿಕಾರಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದು, ಅವರು ಎಲ್ಲಿದ್ದಾರೆ ಹಾಗೂ ನಾಪತ್ತೆಯಾಗಿರುವುದಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯ ಬಳಿಕವಷ್ಟೇ ಸ್ಪಷ್ಟವಾಗಬೇಕಿದೆ.