ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ; 5 ಸಾವಿರ ಕೋಟಿ ಆರೋಪಕ್ಕೆ ದಾಖಲೆ ತೋರಿಸಿ ಎಂದ ಲಕ್ಷ್ಮೀ

28-08-26 12:13 pm       HK News Staffer   ಕರ್ನಾಟಕ

ಸಚಿವ ಸ್ಥಾನಕ್ಕೆ ತಾವು ಯಾರ ಮೇಲೂ ಒತ್ತಡ ಹೇರಿಲ್ಲ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ರಾಜಕಾರಣದಲ್ಲಿ ಯಾರು ಯಾವ ಸ್ಥಾನಕ್ಕೆ ಹೋಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ನಿರ್ಧಾರವನ್ನು ಪ್ರಶ್ನಿಸುವುದು ತಮ್ಮ ಕೆಲಸವಲ್ಲ ಎಂದು ಅವರು ಹೇಳಿದ್ದಾರೆ.

ಬೆಳಗಾವಿ, ಆ.28:  ಸಚಿವ ಸ್ಥಾನಕ್ಕೆ ತಾವು ಯಾರ ಮೇಲೂ ಒತ್ತಡ ಹೇರಿಲ್ಲ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ರಾಜಕಾರಣದಲ್ಲಿ ಯಾರು ಯಾವ ಸ್ಥಾನಕ್ಕೆ ಹೋಗಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ನಿರ್ಧಾರವನ್ನು ಪ್ರಶ್ನಿಸುವುದು ತಮ್ಮ ಕೆಲಸವಲ್ಲ ಎಂದು ಅವರು ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯ ಮುಖ್ಯಮಂತ್ರಿಗಳಿದ್ದಾರೆ. ಅವರ ನಾಯಕತ್ವದಲ್ಲಿ ತಮ್ಮಿಂದಾಗುವ ಕೆಲಸವನ್ನು ಮಾಡುತ್ತೇನೆ. ಸಚಿವ ಸ್ಥಾನಕ್ಕಾಗಿ ಯಾರನ್ನೂ ಕೇಳಿಲ್ಲ ಅಥವಾ ಯಾವುದೇ ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

‘ಮಹಿಳೆಯರಿಲ್ಲದ ಸಂಪುಟ ಅಪೂರ್ಣ’;

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಇರಬೇಕು ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ಹೆಬ್ಬಾಳ್ಕರ್ ಹೇಳಿದರು. ಮೂರು ವರ್ಷಗಳ ಕಾಲ ಸಚಿವೆಯಾಗಿ ಕೆಲಸ ಮಾಡುವಾಗ ಮಹಿಳೆಯರ ಸಮಸ್ಯೆ ಹಾಗೂ ಅವರ ನೋವು-ನಲಿವುಗಳನ್ನು ಹತ್ತಿರದಿಂದ ನೋಡಿದ್ದೇನೆ. ಮಹಿಳೆಯರ ಧ್ವನಿ ಸರ್ಕಾರದಲ್ಲಿ ಇರಬೇಕು, ಅವರಿಗೆ ನ್ಯಾಯ ಸಿಗಬೇಕು ಎಂದರು.
ಜಾರ್ಖಂಡ್, ಹಿಮಾಚಲ ಪ್ರದೇಶ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳ ಕಾಂಗ್ರೆಸ್ ಸರ್ಕಾರಗಳಲ್ಲಿ ಮಹಿಳೆಯರಿಗೆ ಸಚಿವ ಸ್ಥಾನ ನೀಡಲಾಗಿದೆ. ಕರ್ನಾಟಕದಲ್ಲಿಯೂ ಮಹಿಳೆಯರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗಬೇಕು ಎಂದು ಹೇಳಿದರು. ಕರ್ನಾಟಕದಲ್ಲಿ ಈ ಬಾರಿ ಬೇರೆಯ ರೀತಿಯ ಲೆಕ್ಕಾಚಾರ ನಡೆದಿದೆ. ಅದನ್ನು ತಾವು ಒಪ್ಪಿಕೊಳ್ಳುತ್ತೇನೆ. ಈ ವಿಚಾರದಲ್ಲಿ ಯಾವುದೇ ತೀಕ್ಷ್ಣ ಹೇಳಿಕೆ ನೀಡುವುದಿಲ್ಲ. ಮುಖ್ಯಮಂತ್ರಿಗಳೂ ಶೀಘ್ರದಲ್ಲೇ ಮಹಿಳೆಯರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಹೇಳಿದ್ದಾರೆ. ಆ ನಿರ್ಧಾರವನ್ನು ಕಾದು ನೋಡೋಣ ಎಂದರು.

‘ಮೂರು ವರ್ಷ ಅವಕಾಶ ಸಿಕ್ಕಿದ್ದಕ್ಕೆ ತೃಪ್ತಿ’

ಸಾಮಾನ್ಯ ಕಾರ್ಯಕರ್ತೆಯಿಂದ ಆರಂಭಿಸಿ ಜಿಲ್ಲಾಧ್ಯಕ್ಷೆ, ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ, ಶಾಸಕಿ ಹಾಗೂ ಸಚಿವೆಯಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ಪಕ್ಷದಲ್ಲಿ ಜವಾಬ್ದಾರಿ ನೀಡುವಾಗ ಪ್ರಾದೇಶಿಕತೆ, ಸಾಮಾಜಿಕ ಸಮೀಕರಣ, ಅನುಭವ ಹಾಗೂ ಪಕ್ಷಕ್ಕೆ ಸಲ್ಲಿಸಿದ ಸೇವೆ ಸೇರಿದಂತೆ ಹಲವು ಮಾನದಂಡಗಳನ್ನು ಪರಿಗಣಿಸಲಾಗುತ್ತದೆ. ಯಾರಿಗೆ ಯಾವ ಮಾನದಂಡದಲ್ಲಿ ಅವಕಾಶ ನೀಡಬೇಕು ಎಂಬುದು ಪಕ್ಷದ ನಿರ್ಧಾರ ಎಂದು ಹೇಳಿದರು.

ತಮಗೆ ಮೂರು ವರ್ಷಗಳ ಕಾಲ ಸಚಿವೆಯಾಗಿ ಅವಕಾಶ ನೀಡಿದ್ದಕ್ಕೆ ಹೈಕಮಾಂಡ್‌ಗೆ ಧನ್ಯವಾದ ಸಲ್ಲಿಸಿದ ಅವರು, ಆ ಅವಧಿಯಲ್ಲಿ ತಮ್ಮ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿದ್ದೇನೆ ಎಂಬ ತೃಪ್ತಿ ಇದೆ ಎಂದರು. ಹೈಕಮಾಂಡ್‌ ಈಗ ಬೇರೆಯವರಿಗೆ ಅವಕಾಶ ನೀಡಲು ನಿರ್ಧರಿಸಿದ್ದರೆ ಅದನ್ನೂ ಸ್ವಾಗತಿಸುತ್ತೇನೆ ಎಂದು ತಿಳಿಸಿದರು.

‘ಇನ್ನು ರಾಜ್ಯಾದ್ಯಂತ ಪಕ್ಷ ಸಂಘಟನೆ’

ಮುಂದಿನ ದಿನಗಳಲ್ಲಿ ತಮ್ಮ ರಾಜಕೀಯ ಚಟುವಟಿಕೆಗಳು ಕೇವಲ ಬೆಳಗಾವಿ ಗ್ರಾಮೀಣ ಅಥವಾ ಬೆಳಗಾವಿ ಜಿಲ್ಲೆಗೆ ಸೀಮಿತವಾಗುವುದಿಲ್ಲ ಎಂದು ಹೆಬ್ಬಾಳ್ಕರ್ ಹೇಳಿದರು. ರಾಜ್ಯಾದ್ಯಂತ ಪಕ್ಷ ಸಂಘಟಿಸುವ ಕೆಲಸ ಮಾಡುತ್ತೇನೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅಚ್ಚುಕಟ್ಟಾಗಿ ನಿರ್ವಹಿಸುತ್ತೇನೆ. ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂದು ಅವರು ಹೇಳಿದರು.

‘₹5 ಸಾವಿರ ಕೋಟಿ ಆರೋಪಕ್ಕೆ ದಾಖಲೆ ತೋರಿಸಿ’

ತಮ್ಮ ವಿರುದ್ಧ ಕೇಳಿಬಂದಿರುವ ₹5 ಸಾವಿರ ಕೋಟಿ ಆರೋಪದ ಬಗ್ಗೆಯೂ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್, ಈ ವಿಚಾರದಲ್ಲಿ ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿಲ್ಲ ಎಂಬುದನ್ನು ತಾವು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ಈ ವಿಚಾರವನ್ನು ತಂದಿದ್ದೇನೆ ಎಂದರು. ತಮ್ಮ ವಿರುದ್ಧ ಆರೋಪ ಮಾಡುವವರು ದಾಖಲೆಗಳೊಂದಿಗೆ ಮಾತನಾಡಬೇಕು. ಸುಳ್ಳು ಆರೋಪ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ, ದಾಖಲೆಗಳೊಂದಿಗೆ ಮಾತನಾಡೋಣ ಎಂದು ವಿರೋಧಿಗಳಿಗೆ ಸವಾಲು ಹಾಕಿದರು.

ಯಾರ ಮೇಲೂ ವೈಯಕ್ತಿಕ ಆರೋಪ ಮಾಡಲು ತಾವು ಬಯಸುವುದಿಲ್ಲ. ಆದರೆ ತಮ್ಮ ಮೇಲೆ ಆರೋಪ ಬಂದಾಗ ಸತ್ಯವನ್ನು ಜನರ ಮುಂದೆ ಹೇಳುವುದು ತಮ್ಮ ಕರ್ತವ್ಯ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.