ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ! ಡಿಕೆ ಸರ್ಕಾರದ ಮೊದಲ ವಿಕೆಟ್ ಪತನ

28-08-26 12:41 pm       HK News Staffer   ಕರ್ನಾಟಕ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪ್ರತಿಪಕ್ಷಗಳ ನಿರಂತರ ಪ್ರತಿಭಟನೆ ಹಾಗೂ ರಾಜಕೀಯ ಒತ್ತಡಕ್ಕೆ ಕೊನೆಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಮಣಿದಿದೆ. ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಾಗೇಂದ್ರ ರಾಜೀನಾಮೆ ಪತ್ರ ನೀಡಿರುವುದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಈ ಮೂಲಕ ಹಲವು ದಿನಗಳಿಂದ ರಾಜೀನಾಮೆ ನೀಡುವುದಿಲ್ಲ ಎಂದು ಹೇಳುತ್ತಿದ್ದ ನಾಗೇಂದ್ರ ಕೊನೆಗೂ ಪದತ್ಯಾಗ ಮಾಡಿದ್ದಾರೆ.

ಬೆಂಗಳೂರು, ಆ.28: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪ್ರತಿಪಕ್ಷಗಳ ನಿರಂತರ ಪ್ರತಿಭಟನೆ ಹಾಗೂ ರಾಜಕೀಯ ಒತ್ತಡಕ್ಕೆ ಕೊನೆಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಮಣಿದಿದೆ. ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಾಗೇಂದ್ರ ರಾಜೀನಾಮೆ ಪತ್ರ ನೀಡಿರುವುದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಈ ಮೂಲಕ ಹಲವು ದಿನಗಳಿಂದ ರಾಜೀನಾಮೆ ನೀಡುವುದಿಲ್ಲ ಎಂದು ಹೇಳುತ್ತಿದ್ದ ನಾಗೇಂದ್ರ ಕೊನೆಗೂ ಪದತ್ಯಾಗ ಮಾಡಿದ್ದಾರೆ.

ರಾಜ್ಯಪಾಲರ ಅಂಗೀಕಾರವಷ್ಟೇ ಬಾಕಿ

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದು, ಇದೀಗ ರಾಜ್ಯಪಾಲರ ಅಂಗೀಕಾರವಷ್ಟೇ ಬಾಕಿ ಇದೆ. ಮುಖ್ಯಮಂತ್ರಿಗಳ ಮೂಲಕ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಕಳುಹಿಸಿ, ಅಧಿಕೃತ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ. ಈ ಬೆಳವಣಿಗೆಗೂ ಮುನ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದ್ದರು. ಪಕ್ಷ ಮತ್ತು ಸರ್ಕಾರದ ಹಿತದೃಷ್ಟಿಯಿಂದ ನಾಗೇಂದ್ರ ಅವರ ರಾಜೀನಾಮೆ ಪಡೆಯುವುದು ಸೂಕ್ತ ಎಂಬ ಸಂದೇಶ ಹೈಕಮಾಂಡ್‌ನಿಂದ ಬಂದಿತ್ತು ಎನ್ನಲಾಗಿತ್ತು. ಅಧಿವೇಶನದಾದ್ಯಂತ ಪ್ರತಿಪಕ್ಷಗಳ ಪ್ರತಿಭಟನೆ ಹಾಗೂ ರಾಯಚೂರಿನಿಂದ ಬಳ್ಳಾರಿ ವರೆಗೆ ಪಾದಯಾತ್ರೆ ನಡೆಸುವ ಬಿಜೆಪಿ ನಿರ್ಧಾರವೂ ಸರ್ಕಾರದ ಮೇಲೆ ಒತ್ತಡ ಹೆಚ್ಚಿಸಿತ್ತು.

ರಾಜೀನಾಮೆ ಹಿಂದೆ ಮೂರು ಪ್ರಮುಖ ಲೆಕ್ಕಾಚಾರ?

ನಾಗೇಂದ್ರ ಅವರನ್ನು ಸಂಪುಟದಿಂದ ಹೊರಗಿಡುವ ಹಿಂದೆ ಕಾಂಗ್ರೆಸ್ ವರಿಷ್ಠರು ಪ್ರಮುಖವಾಗಿ ಮೂರು ಅಂಶಗಳನ್ನು ಪರಿಗಣಿಸಿದ್ದಾರೆ ಎನ್ನಲಾಗಿದೆ. ನಾಗೇಂದ್ರ ಸಚಿವರಾಗಿ ಮುಂದುವರಿದರೆ ಬಿಜೆಪಿ ಪ್ರಕರಣವನ್ನು ಸರ್ಕಾರದ ವಿರುದ್ಧ ಪ್ರಮುಖ ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುವ ಸಾಧ್ಯತೆ ಇತ್ತು. ಮತ್ತೊಂದೆಡೆ, ಪ್ರಕರಣದಲ್ಲಿ ಸಿಬಿಐ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಕೋರಿರುವ ಬೆಳವಣಿಗೆ ಕಾನೂನು ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿತ್ತು. ಜೊತೆಗೆ, ಹಗರಣದ ಕಳಂಕ ಸರ್ಕಾರದ ಮೇಲೂ ಬೀಳದಂತೆ ಡ್ಯಾಮೇಜ್ ಕಂಟ್ರೋಲ್ ಮಾಡುವ ಪ್ರಯತ್ನವೂ ಇದರ ಹಿಂದೆ ಇದೆ ಎನ್ನಲಾಗಿದೆ.

ಏನಿದು ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ?

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಸೇರಿದ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾದ ಪ್ರಕರಣ 2024ರಲ್ಲಿ ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ನಿಗಮದ ಲೆಕ್ಕ ಅಧೀಕ್ಷಕರಾಗಿದ್ದ ಚಂದ್ರಶೇಖರನ್ ಪಿ. ಅವರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಅವರು ಬರೆದಿದ್ದ ಡೆತ್‌ನೋಟ್‌ನಲ್ಲಿ ನಿಗಮದ ಹಣವನ್ನು ಅನಧಿಕೃತವಾಗಿ ವರ್ಗಾವಣೆ ಮಾಡಿರುವ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದರು.

ತನಿಖೆಯ ವೇಳೆ ನಿಗಮದ ಹಣದಲ್ಲಿ ಸುಮಾರು ₹89.63 ಕೋಟಿ ಹಣವನ್ನು ನಕಲಿ ದಾಖಲೆಗಳು ಮತ್ತು ಸಹಿಗಳ ಮೂಲಕ ಹೈದರಾಬಾದ್ ಮೂಲದ ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಬಳಿಕ ಹಣವನ್ನು ವಿವಿಧ ರಾಜ್ಯಗಳಲ್ಲಿನ ಖಾತೆಗಳಿಗೆ ವರ್ಗಾಯಿಸಿರುವುದು ತನಿಖಾ ಸಂಸ್ಥೆಗಳ ಗಮನಕ್ಕೆ ಬಂದಿತ್ತು. ಈ ಹಣದ ಒಂದು ಭಾಗವನ್ನು ಚುನಾವಣಾ ವೆಚ್ಚ ಹಾಗೂ ಐಷಾರಾಮಿ ಕಾರುಗಳ ಖರೀದಿಗೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿತ್ತು. ಪ್ರಕರಣದಲ್ಲಿ ನಾಗೇಂದ್ರ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆದಿದ್ದು, 2024ರ ಜುಲೈನಲ್ಲಿ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು. ಆಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನಾಗೇಂದ್ರ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಇದೀಗ ಮತ್ತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರಾಜಕೀಯವಾಗಿ ಮಹತ್ವದ ಬೆಳವಣಿಗೆಯಾಗಿದ್ದು, ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಮುಂದಿನ ತನಿಖೆ ಹಾಗೂ ಕಾನೂನು ಪ್ರಕ್ರಿಯೆ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಇದೇ ವಿಚಾರದ ಕುರಿತು ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿರುವಾಗಲೇ ನಾಗೇಂದ್ರ ರಾಜಿನಾಮೆ ನೀಡಿರುವುದು ಪಕ್ಷದ ಹೈಕಮಾಂಡ್ ಸೂಚನೆ ನೀಡಿಯೆದ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.‌