ಖ್ಯಾತ ಕವಿ ಎನ್.ಎಸ್‌ ಲಕ್ಷ್ಮೀನಾರಾಯಣ ಭಟ್ ವಿಧಿವಶ

06-03-21 12:15 pm       Bangalore Correspondent   ಕರ್ನಾಟಕ

ನಾಡಿನ ಖ್ಯಾತ ಕವಿ, ಹಿರಿಯ ಸಾಹಿತಿ ಎನ್.ಎಸ್ ಲಕ್ಷ್ಮೀನಾರಾಯಣ ಭಟ್ ಇಂದು ಮುಂಜಾನೆ ನಿಧನರಾಗಿದ್ದಾರೆ. 

ಬೆಂಗಳೂರು, ಮಾ.6 : ನಾಡಿನ ಖ್ಯಾತ ಕವಿ, ಹಿರಿಯ ಸಾಹಿತಿ, ಎನ್​ಎಸ್​ಎಲ್ ಎಂದೇ ಖ್ಯಾತರಾಗಿದ್ದ, ಎನ್.ಎಸ್ ಲಕ್ಷ್ಮೀನಾರಾಯಣ ಭಟ್ ಇಂದು ಮುಂಜಾನೆ ನಿಧನರಾಗಿದ್ದಾರೆ. 

ಅವರಿಗೆ 85 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬನಶಂಕರಿಯ ನಿವಾಸದಲ್ಲಿ ಮುಂಜಾನೆ 4.45 ಕ್ಕೆ ಕೊನೆಯುಸಿರೆಳೆದಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯವರಾಗಿದ್ದ ಎನ್​ಎಸ್​ಎಲ್ ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿದ್ದರು. ಸಾಹಿತ್ಯದ ಬಹುತೇಕ ಎಲ್ಲಾ ಪ್ರಕಾರಗಳಲ್ಲೂ ಕೃಷಿ ಮಾಡಿದ್ದ ಇವರು 1974 ರಲ್ಲೇ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು. ಅಲ್ಲದೇ ಎಲಿಯಟ್, ಷೇಕ್ಸ್‌ಪಿಯರ್ ಕಾವ್ಯವನ್ನು ಕನ್ನಡಕ್ಕೆ ಅನುವಾದಿಸಿದ್ದರು.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂತಾಪ

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

"ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು, ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಮುಂತಾದ ಹಲವರು ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿ ವ್ಯಾಪಕ ಮನ್ನಣೆ ಪಡೆದಿದ್ದಾರೆ. ಅವರ ಜನಪ್ರಿಯ ಭಾವಗೀತೆಗಳಿಂದ ಕನ್ನಡಿಗರ ಮನೆ ಮಾತಾಗಿದ್ದರು.''

"ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ'' ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Dr N. S. Lakshminarayan Bhatta passes away at 85. born 1926 is a Kannada poet from Shivamogga district. He was awarded the Karnataka Sahitya Akademi in 1974.