ಪ್ರಸಾದವೆಂದು ಎಂಜಲು ತಿನ್ನಿಸಿದರು ವಿನಯ್ ಗುರೂಜಿ ; ಶಾಸಕ ರಘು ಆಚಾರ್ ಆರೋಪ

19-08-20 09:22 pm       Headline Karnataka News Network   ಕರ್ನಾಟಕ

ಕಾಂಗ್ರೆಸ್ಸಿನ ವಿಧಾನ ಪರಿಷತ್ ಸದಸ್ಯ ರಘು ಆಚಾರ್, ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಪ್ರಸಾದವೆಂದು ಎಂಜಲು ತಿನ್ನಿಸಿದರು ಎಂದು ಆಚಾರ್ ಆರೋಪ ಮಾಡಿದ್ದಾರೆ.

ಶಿವಮೊಗ್ಗ , ಆಗಸ್ಟ್‌ 19: ಕಾಂಗ್ರೆಸ್ಸಿನ ವಿಧಾನ ಪರಿಷತ್ ಸದಸ್ಯ ರಘು ಆಚಾರ್, ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಪ್ರಸಾದವೆಂದು ಎಂಜಲು ತಿನ್ನಿಸಿದರು ಎಂದು ಆಚಾರ್ ಆರೋಪ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ರಘು ಆಚಾರ್ ಬರೆದುಕೊಂಡಿರುವ ಪೋಸ್ಟಿನ ಯಥಾವತ್ ಕಾಪಿ ಹೀಗಿದೆ: "ಇಷ್ಟಕ್ಕೂ ಇಂತಹದೊಂದು ಬಹಿರಂಗ ಭಿನ್ನಹ ಬರೆಯಲು ಪ್ರಚೋದಿಸಿದ್ದು ಸೋಮವಾರ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿಮ್ಮ ಹಾಗೂ ನಿಮ್ಮ ಶಿಷ್ಯರ ನಡವಳಿಕೆ. ಭೂತ ಭವಿಷ್ಯ ಬಲ್ಲ ನಿಮಗೆ ಗೊತ್ತಿರುವಂತೆಯೇ ಇಡೀ ಜಗತ್ತನ್ನು ಇಂದು ಕೊರೊನಾ ಎಂಬ ಮಹಾಮಾರಿ ಬೆಂಬಿಡದೆ ಕಾಡುತ್ತಿದೆ". "ಇಂತಹ ಮಹಾಮಾರಿಯಿಂದ ವೈಯಕ್ತಿಕವಾಗಿ ನಮ್ಮನ್ನು ಹಾಗೂ ನಮ್ಮ ಸುತ್ತಮುತ್ತಲೂ ಇರುವವರನ್ನು ರಕ್ಷಿಸಲು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ನಮ್ಮ ದೇಶದ ಸರ್ಕಾರಗಳು ಕೆಲವೊಂದು ಸಾರ್ವಜನಿಕ ನಡವಳಿಕೆಯನ್ನು ನಿಯಮದಂತೆ ವಿಧಿಸಿವೆ".



ನೀವು ಮಾಸ್ಕ್ ತೊಡದೆ ಎಲ್ಲರೊಂದಿಗೆ ಆತ್ಮೀಯವಾಗಿ ವರ್ತಿಸುತ್ತಿದ್ದೀರಿ. ಆಶೀರ್ವಾದ ಮಾಡುತ್ತಿದ್ದೀರಿ. ಇನ್ನು ಮದುವೆಯ ಊಟ ಮಾಡಿದ ನಂತರ ತಾವು ತಿಂದುಂಡು ಬಿಟ್ಟ ಆಹಾರವನ್ನು ನಿಮ್ಮ ಶಿಷ್ಯರೂ ಎಲ್ಲರಿಗೂ ಪ್ರಸಾದ ಎಂದು ವಿತರಿಸಿ ಬಲವಂತವಾಗಿ ಎಂಜಲು ತಿನ್ನುವಂತೆ ಮಾಡಿದರು.

ಗೌರವ, ನಂಬಿಕೆ, ಭಕ್ತಿ ಇವೆಲ್ಲ ಇರಲಿ, ಇರಬೇಕು. ಒಪ್ಪುತ್ತೇನೆ. ಆದರೆ ಕೊರೊನಾನಾದಂತಹ ಮಾರಕ ಸನ್ನಿವೇಶದಲ್ಲಿ ಇಂತಹದೊಂದು ನಡವಳಿಕೆಯನ್ನು ನಿಮ್ಮ ಹಾಗೂ ನಿಮ್ಮ ಶಿಷ್ಯರಿಂದ ಕಂಡು ನನಗೆ ನಂಬಿಕೆಯೇ ಬರಲಿಲ್ಲ. ನಿಮ್ಮ ಶಿಷ್ಯರ ನಡವಳಿಕೆ ನಿಮ್ಮ ಗಮನಕ್ಕೆ ಬರದೆ ಈ ಅಚಾತುರ್ಯ ನಡೆಯುತ್ತಿರಬಹುದು ಎಂದು ಭಾವಿಸಿ ಈ ಬಗ್ಗೆ ವಿಚಾರಿಸಿದೆ.



ದಯಮಾಡಿ ಈ ವರ್ತನೆಯನ್ನು ಬದಲಾಯಿಸಿಕೊಳ್ಳಿ. ತನ್ಮೂಲಕ ನೀವು ಕೊಟ್ಟಿದ್ದನ್ನು ಪ್ರಸಾದ ಎಂದು ಭಾವಿಸುವ ಜನರ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಇನ್ನಾದರೂ ನಿಲ್ಲಿಸುವಂತೆ ಕೋರುತ್ತೇನೆ. ಇಂತಿ ತಮ್ಮ ವಿಶ್ವಾಸಿ, ರಘು ಆಚಾರ್, ಸದಸ್ಯರು, ಕರ್ನಾಟಕ ವಿಧಾನ ಪರಿಷತ್ತು.