ಆರೋಗ್ಯ ಸಚಿವ ಶ್ರೀರಾಮುಲು ವೈರಸ್ ನಿಂದ ಗುಣಮುಖ

26-08-20 11:46 pm       Bangalore Correspondent   ಕರ್ನಾಟಕ

ಆರೋಗ್ಯ ಸಚಿವ ಬಿ. ಶ್ರೀರಾಮುಲು ವೈರಸ್ ನಿಂದ ಸಂಪೂರ್ಣ ಗುಣಮುಖರಾಗಿದ್ದು ಸಾರ್ವಜನಿಕ ಸೇವೆಗೆ ಮರಳಲಿದ್ದಾರೆ. 10 ದಿನ ಹೋಂ ಕ್ವಾರಂಟೈನ್ ನಲ್ಲಿದ್ದರು.

ಬೆಂಗಳೂರು: ಆರೋಗ್ಯ ಸಚಿವ ಬಿ. ಶ್ರೀರಾಮುಲು ಸಂಪೂರ್ಣ ಗುಣಮುಖರಾಗಿದ್ದು, ನಾಳೆಯಿಂದ ಸಾರ್ವಜನಿಕ ಸೇವೆಗೆ ಮರಳಲಿದ್ದಾರೆ. ಆಗಸ್ಟ್ 16ರಂದು ಬೌರಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಸಚಿವರು 10 ದಿನ ಹೋಂ ಕ್ವಾರಂಟೈನ್ ನಲ್ಲಿದ್ದರು.

ಇದೀಗ ಗುಣಮುಖರಾಗಿರುವ ಬಗ್ಗೆ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಆತ್ಮೀಯರೆ ನಿಮ್ಮೆಲ್ಲರ ಶುಭ ಹಾರೈಕೆಯಿಂದ ಕೋವಿಡ್ ಸೋಂಕಿನ ಪರೀಕ್ಷೆ ನೆಗೆಟಿವ್ ಬಂದಿದೆ. ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದು, ನಾಳೆಯಿಂದಲೇ ಸಾರ್ವಜನಿಕ ಸೇವೆಗೆ ಮರುಳುತ್ತೇನೆ. ಶೀಘ್ರ ಗುಣಮುಖನಾಗಲು ನನಗೆ ಅತ್ಯುತ್ತಮ ಚಿಕಿತ್ಸೆ ನೀಡಿದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗೆ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ, ಸಹಕಾರ ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರಿಗೂ ಮತ್ತು ಸಂಪುಟದ ಸಹೋದ್ಯೋಗಿಗಳಿಗೂ ಹಾಗೂ ನನ್ನ ಆರೋಗ್ಯಕ್ಕಾಗಿ ಶುಭ ಹಾರೈಸಿದ ಬಂಧುಗಳು, ಸ್ನೇಹಿತರು, ಹಿತೈಷಿಗಳು ಮತ್ತು ಅಭಿಮಾನಿಗಳಿಗೆ ಮತ್ತೊಮ್ಮೆ ಹೃದಯದಪೂರ್ವಕ ಧನ್ಯವಾದಗಳನ್ನು ಸಚಿವರು ತಿಳಿಸಿದ್ದಾರೆ.

ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಸಚಿವರು ಆಗಸ್ಟ್ 9ರಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.