ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜಿನಾಮೆ, ಮಹಾಭಿಯೋಗಕ್ಕೂ ಮುನ್ನ ಹುದ್ದೆ ತೊರೆದ ನ್ಯಾಯಾಧೀಶ

10-04-26 01:26 pm       HK News Desk   ದೇಶ - ವಿದೇಶ

ಮನೆಯಲ್ಲಿ ಬೆಂಕಿ ಬಿದ್ದು ಅಪಾರ ಪ್ರಮಾಣದ ನಗದು ಪತ್ತೆಯಾದ ಪ್ರಕರಣದಲ್ಲಿ ಸುದ್ದಿಯಾಗಿದ್ದ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಷ್ಟ್ರಪತಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ.

ನವದೆಹಲಿ, ಎಪ್ರಿಲ್ 10: ಮನೆಯಲ್ಲಿ ಬೆಂಕಿ ಬಿದ್ದು ಅಪಾರ ಪ್ರಮಾಣದ ನಗದು ಪತ್ತೆಯಾದ ಪ್ರಕರಣದಲ್ಲಿ ಸುದ್ದಿಯಾಗಿದ್ದ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಷ್ಟ್ರಪತಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ. 

ದೆಹಲಿ ಹೈಕೋರ್ಟ್‌ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗ ಅವರ ಅಧಿಕೃತ ನಿವಾಸದಲ್ಲಿ ಬೆಂಕಿ ಅವಘಡ ಉಂಟಾಗಿ ಅಪಾರ ಪ್ರಮಾಣದ ನಗದು ಅರೆಬರೆ ಸುಟ್ಟು ಹೋಗಿತ್ತು. ನಗದು ಪತ್ತೆಯಾದ ಆರೋಪ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಎಂಬ ನೆಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಬಳಿಕ ಅವರನ್ನು 2025ರ ಏಪ್ರಿಲ್‌ನಲ್ಲಿ ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್‌ಗೆ ವರ್ಗಾಯಿಸಲಾಗಿತ್ತು. ಅಲ್ಲದೆ, ಸುಪ್ರೀಂ ಕೋರ್ಟ್ ಆಂತರಿಕ ತನಿಖೆಗೆ ಆದೇಶ ಮಾಡಿತ್ತು. ಯಶವಂತ್ ವರ್ಮಾ ಪ್ರಸ್ತುತ ಆಂತರಿಕ ವಿಚಾರಣೆಯನ್ನು ಎದುರಿಸುತ್ತಿದ್ದಾರೆ. 

2025ರ ಮಾರ್ಚ್‌ನಲ್ಲಿ ದೆಹಲಿಯ ಅವರ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಸುಟ್ಟ ಮತ್ತು ಅರ್ಧ ಸುಟ್ಟ ಸ್ಥಿತಿಯಲ್ಲಿದ್ದ ಭಾರೀ ಪ್ರಮಾಣದ ಹಣದ ಕಂತೆಗಳು ಪತ್ತೆಯಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಮಹಾಭಿಯೋಗ ಮೂಲಕ ಸೇವೆಯಿಂದ ತೆಗೆದು ಹಾಕಬೇಕೆಂದು ಆಗ್ರಹ ಕೇಳಿಬಂದಿತ್ತು. ಇದರಂತೆ, ವಜಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪ್ರತ್ಯೇಕ ತನಿಖಾ ಸಮಿತಿ ರಚಿಸಿದ್ದರು. ಆದರೆ ಈ ರೀತಿಯ ತನಿಖೆಯನ್ನು ಪ್ರಶ್ನಿಸಿ ನ್ಯಾಯಮೂರ್ತಿ ವರ್ಮಾ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರ್ಮಾ ಮನವಿಯನ್ನು ತಿರಸ್ಕರಿಸಿ ತನಿಖೆಗೆ ತಡೆ ನೀಡಲು ನಿರಾಕರಿಸಿತ್ತು.