ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ನಿರಾಕರಣೆ ; ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ ಎಂದು ಅರ್ಜಿದಾರರಿಗೆ ಸಿಜೆಐ ಸಲಹೆ

25-05-26 05:29 pm       HK News Staffer   ದೇಶ - ವಿದೇಶ

ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದ್ದು ಅಂತಹ ಅಗತ್ಯ ಏನೂ ಇಲ್ಲ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ, ವಿ.ಎಂ ಪಂಚೋಲಿ ಅವರಿದ್ದ ಪೀಠವು ಅರ್ಜಿಯನ್ನು ವಿಚಾರಣೆ ನಡೆಸಿತು.

ನವದೆಹಲಿ, ಮೇ 25: ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆ ನಡೆಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದ್ದು ಅಂತಹ ಅಗತ್ಯ ಏನೂ ಇಲ್ಲ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ, ವಿ.ಎಂ ಪಂಚೋಲಿ ಅವರಿದ್ದ ಪೀಠವು ಅರ್ಜಿಯನ್ನು ವಿಚಾರಣೆ ನಡೆಸಿತು. 

'ಅರ್ಜಿದಾರರು ವಿಷಯವನ್ನು ಭಾವನಾತ್ಮಕವಾಗಿ ತೆಗೆದುಕೊಳ್ಳುತ್ತಿರುವಂತೆ ಕಾಣುತ್ತಿದೆ, ಇದನ್ನು 'ತುಂಬಾ ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ' ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಸಲಹೆ ಮಾಡಿದ್ದಾರೆ. ಪ್ರಕರಣದಲ್ಲಿ ಅಂತಹ ಗಂಭೀರ ತುರ್ತು ಏನಿಲ್ಲ. ನಾವು ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಸದ್ಯಕ್ಕೆ ಯಾವುದೇ ಗಂಭೀರ ತುರ್ತು ಪರಿಸ್ಥಿತಿ ಕಾಣುತ್ತಿಲ್ಲ. ಅರ್ಜಿಯನ್ನು ನಂತರ ಪರಿಗಣಿಸುತ್ತೇವೆ ಎಂದು ನ್ಯಾಯಾಲಯ ತಿಳಿಸಿದೆ. 

ಅರ್ಜಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಮತ್ತು ಅದರ ಚಟುವಟಿಕೆಗಳ ಕುರಿತಾಗಿ ಸಿಬಿಐ ತನಿಖೆ ನಡೆಸಬೇಕೆಂದು ಕೋರಲಾಗಿತ್ತು. ಮೇ 15ರಂದು ಅರ್ಜಿಯೊಂದರ ವಿಚಾರಣೆ ಸಂದರ್ಭದಲ್ಲಿ ಸಿಜೆಐ ಸೂರ್ಯಕಾಂತ್ ಅವರು ನಿರುದ್ಯೋಗಿಗಳನ್ನು 'ಜಿರಳೆ'ಗಳಿಗೆ ಹೋಲಿಸಿರುವುದು ವಿವಾದಕ್ಕೆ ಕಾರಣವಾಗಿತ್ತು. 

ಉದ್ಯೋಗ ಸಿಗದ ಕೆಲವು ಯುವಕರು ಜಿರಳೆಗಳಂತೆ ವ್ಯವಸ್ಥೆಯ ಮೇಲೆ ದಾಳಿ ಮಾಡಲು ಆರಂಭಿಸುತ್ತಾರೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದರು. ಇದರ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯವಸ್ಥೆಯ ವಿಡಂಬನೆಗಾಗಿ ಕಾಕ್ರೋಚ್ ಜನತಾ ಪಾರ್ಟಿ ಹುಟ್ಟಿಕೊಂಡಿದ್ದು ಭಾರೀ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಸಿಜೆಐ ತಾವು ನಕಲಿ ಪದವೀಧರರನ್ನು ಉದ್ದೇಶಿಸಿ ಈ ಹೇಳಿಕೆ ನೀಡಿದ್ದು ಎಂದು ಸ್ಪಷ್ಟನೆ ನೀಡಿದ್ದರು.