ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮಾರುಕಟ್ಟೆಗೆ ಹೂಡಿಕೆ ಮಾಡಿದ್ದ ಆರೋಪಿಗಳು, 30ಕ್ಕೂ ಹೆಚ್ಚು ಖಾತೆಗಳನ್ನು ಜಪ್ತಿಗೈದ ಎಸ್ಐಟಿ

11-07-26 11:48 am       HK News Staffer   ದೇಶ - ವಿದೇಶ

ರಾಮ ಮಂದಿರದ ದೇಣಿಗೆ ಕಳ್ಳತನದ ಒಂದು ಭಾಗವನ್ನು ಆರೋಪಿಗಳು ಷೇರು ಮಾರುಕಟ್ಟೆ ಹಾಗೂ ಇತರ ಕಡೆಗಳಲ್ಲಿ ಹೂಡಿಕೆ ಮಾಡಿರುವುದು ಎಸ್ಐಟಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹಣದ ಮೂಲವನ್ನು ಮರೆ ಮಾಚುವುದಕ್ಕಾಗಿ ಸಂಬಂಧಿಕರು, ಆಪ್ತರ ಹೆಸರಲ್ಲಿ ಹೂಡಿಕೆ ಮಾಡಿದ್ದರು. ಪೊಲೀಸರು ಆರೋಪಿಗಳು ಮತ್ತು ಅವರ ಸಂಬಂಧಿಕರಿಗೆ ಸೇರಿದ 30ಕ್ಕೂ ಹೆಚ್ಚು ಖಾತೆಗಳನ್ನು ಜಪ್ತಿ ಮಾಡಿದ್ದಾರೆ.

ಲಕ್ನೋ, ಜುಲೈ 11: ರಾಮ ಮಂದಿರದ ದೇಣಿಗೆ ಕಳ್ಳತನದ ಒಂದು ಭಾಗವನ್ನು ಆರೋಪಿಗಳು ಷೇರು ಮಾರುಕಟ್ಟೆ ಹಾಗೂ ಇತರ ಕಡೆಗಳಲ್ಲಿ ಹೂಡಿಕೆ ಮಾಡಿರುವುದು ಎಸ್ಐಟಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹಣದ ಮೂಲವನ್ನು ಮರೆ ಮಾಚುವುದಕ್ಕಾಗಿ ಸಂಬಂಧಿಕರು, ಆಪ್ತರ ಹೆಸರಲ್ಲಿ ಹೂಡಿಕೆ ಮಾಡಿದ್ದರು. ಪೊಲೀಸರು ಆರೋಪಿಗಳು ಮತ್ತು ಅವರ ಸಂಬಂಧಿಕರಿಗೆ ಸೇರಿದ 30ಕ್ಕೂ ಹೆಚ್ಚು ಖಾತೆಗಳನ್ನು ಜಪ್ತಿ ಮಾಡಿದ್ದಾರೆ. 

ಅಯೋಧ್ಯೆ ಪೊಲೀಸರು ಆರೋಪಿಗಳ ಮನೆಗಳಲ್ಲಿ ಶೋಧ ನಡೆಸಿದ್ದು, ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ. ಆರೋಪಿ ಅನುಕಲ್ಪ್ ಮಿಶ್ರಾನನ್ನು ಆತನ ಮನೆಗೆ ಕರೆದೊಯ್ದು ಶೋಧ ನಡೆಸಿ, ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ, ಇನ್ನೊಬ್ಬ ಆರೋಪಿ ಅವಿನಾಶ್ ಶುಕ್ಲಾ ಜೊತೆಗೆ ಕಳವಾದ ದೇಣಿಗೆ ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಅಲ್ಲದೆ, ಬಡ್ಡಿಗೆ ಹಣ ನೀಡುವುದರ ಜೊತೆಗೆ, ಸಂಬಂಧಿಕರು ಹಾಗೂ ಆಪ್ತರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿ, ಬಳಿಕ ಅದನ್ನು ತಮ್ಮ ಖಾತೆಗಳಿಗೆ ಮರಳಿ ವರ್ಗಾಯಿಸುತ್ತಿದ್ದರು ಎಂದು ತಪ್ಪೊಪ್ಪಿಕೊಂಡಿದ್ದಾನೆ. 

ಆರೋಪಿಗಳಾದ ಲವ್‌ಕುಶ್ ಮಿಶ್ರಾ ಹಾಗೂ ಕರುಣೇಶ್ ಪಾಂಡೆ ಅವರನ್ನು ಸಹ ಅವರ ಮನೆಗಳಿಗೆ ಕರೆದೊಯ್ದು ಶೋಧ ನಡೆಸಿದ್ದಾರೆ. ಮೂವರು ಆರೋಪಿಗಳನ್ನೂ 40 ಗಂಟೆಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ಅವರ ಕುಟುಂಬ ಸದಸ್ಯರನ್ನೂ ವಿಚಾರಣೆ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಹಣದ ಜಾಡು ಪತ್ತೆಹಚ್ಚಲು ನೆರವಾಗುವ ಇಲೆಕ್ಟ್ರಾನಿಕ್ ಸಾಧನಗಳು, ಹೂಡಿಕೆ ದಾಖಲೆಗಳು ಹಾಗೂ ಇತರ ಹಣಕಾಸು ಸಂಬಂಧಿತ ಸಾಕ್ಷ್ಯಗಳನ್ನು ಶೋಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಆರೋಪಿಗಳು ಹಾಗೂ ಅವರ ಸಂಬಂಧಿಕರ ಹೆಸರಿನ 30ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳಲ್ಲಿ ಘೋಷಿತ ಆದಾಯಕ್ಕೆ ಹೊಂದಿಕೆಯಾಗದ ವಹಿವಾಟುಗಳು ಪತ್ತೆಯಾಗಿದ್ದು ಅವುಗಳನ್ನು ಸ್ಥಗಿತಗೊಳಿಸಲಾಗಿದೆ. ಆರೋಪಿಗಳ ಬಳಿಯಿಂದ ನಕಲಿ ದೇಣಿಗೆ ರಸೀದಿಗಳನ್ನೂ ಪೊಲೀಸರು ವಶಪಡಿಸಿದ್ದಾರೆ. ಅಲ್ಲದೆ, ಆರೋಪಿಗಳ ಬ್ಯಾಂಕ್ ವಹಿವಾಟುಗಳನ್ನು ಷೇರು ಮಾರುಕಟ್ಟೆ ಹೂಡಿಕೆಗಳು, ಆಸ್ತಿ ಖರೀದಿಗಳು ಹಾಗೂ ವಶಪಡಿಸಿಕೊಂಡ ನಗದುಗಳೊಂದಿಗೆ ಹೋಲಿಕೆ ಮಾಡಿ ಪರಿಶೀಲಿಸುತ್ತಿದ್ದಾರೆ. 

ಆರೋಪಿಗಳು ದೇವಸ್ಥಾನದ ದೇಣಿಗೆ ಎಣಿಕೆ ವ್ಯವಸ್ಥೆಯಲ್ಲಿದ್ದ ಲೋಪಗಳನ್ನು ದುರುಪಯೋಗಪಡಿಸಿದ್ದರು. ಕಾಣಿಕೆ ಕಳವು ಪತ್ತೆಯಾಗದಂತೆ ನೋಡಿಕೊಳ್ಳಲು ಎಣಿಕೆ ವೇಳೆ ಸಣ್ಣ ಪ್ರಮಾಣದಲ್ಲಿ ನಗದು ಹಣವನ್ನು ತೆಗೆಯುತ್ತಿದ್ದರು. ಹಣವನ್ನು ತಕ್ಷಣವೇ ಖರ್ಚು ಮಾಡುವ ಬದಲು, ಅದನ್ನು ಹಣಕಾಸು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಭ ಗಳಿಸುವ ಎಚ್ಚರಿಕೆಯ ವಿಧಾನವನ್ನು ಆರೋಪಿಗಳು ಅನುಸರಿಸಿದ್ದರು ಎಂದು ತನಿಖಾಧಿಕಾರಿಗಳು ಅಂದಾಜಿಸಿದ್ದಾರೆ.