ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿಲ್ಲಲ್ಲ ; ಕೇಂದ್ರ ಸರ್ಕಾರಕ್ಕೆ ಸಿಜೆಪಿ ಮೂರು ಷರತ್ತು, ಲಾಠಿ ಏಟಿಗೆ ನೂರಕ್ಕೂ ಹೆಚ್ಚು ಮಂದಿಗೆ ಗಾಯ

21-07-26 06:23 pm       HK News Staffer   ದೇಶ - ವಿದೇಶ

ನೀಟ್ ಪರೀಕ್ಷಾ ಅಕ್ರಮ ಹಾಗೂ ಸರಣಿ ಪರೀಕ್ಷಾ ಲೋಪಗಳನ್ನು ಖಂಡಿಸಿ, ಕಾಕ್ರೋಚ್ ಜನತಾ ಪಾರ್ಟಿ ಮತ್ತು ಹಿರಿಯ ಶಿಕ್ಷಣ ತಜ್ಞ, ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ನವದೆಹಲಿ, ಜುಲೈ 21: ನೀಟ್ ಪರೀಕ್ಷಾ ಅಕ್ರಮ ಹಾಗೂ ಸರಣಿ ಪರೀಕ್ಷಾ ಲೋಪಗಳನ್ನು ಖಂಡಿಸಿ, ಕಾಕ್ರೋಚ್ ಜನತಾ ಪಾರ್ಟಿ ಮತ್ತು ಹಿರಿಯ ಶಿಕ್ಷಣ ತಜ್ಞ, ಸಾಮಾಜಿಕ ಹೋರಾಟಗಾರ ಸೋನಮ್ ವಾಂಗ್ಚುಕ್ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಇದೇ ವೇಳೆ, ಪ್ರತಿಭಟನಕಾರರು ಮೂರು ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿರಿಸಿದ್ದಾರೆ‌. ಪರೀಕ್ಷಾ ಅಕ್ರಮಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪೊಲೀಸ್ ವಶದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಸೋನಮ್ ವಾಂಗ್ಚುಕ್ ಅವರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು. ನೀಟ್ ಅಕ್ರಮದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಎಂಬ ಬೇಡಿಕೆ ಇರಿಸಿದ್ದಾರೆ. 

ಮುಂಗಾರು ಅಧಿವೇಶನ ಜುಲೈ 20ರಿಂದ ಆರಂಭಗೊಂಡಿದ್ದು ಮೊದಲ ದಿನವೇ 50,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಯುವಕರು ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಮತ್ತು ಭದ್ರತಾ ಪಡೆಗಳು ತೀವ್ರ ಲಾಠಿಪ್ರಹಾರ ಹಾಗೂ ಅಶ್ರುವಾಯು ಪ್ರಯೋಗಿಸಿದ್ದು ಸಂಘರ್ಷದಲ್ಲಿ 100ಕ್ಕೂ ಹೆಚ್ಚು ಪ್ರತಿಭಟನಾಕಾರರು ಮತ್ತು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಇದೇ ವೇಳೆ, ಸಿಜೆಪಿ ಪ್ರತಿನಿಧಿಗಳಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದಾರೆ. ಮಾತುಕತೆ ಸೌಹಾರ್ದಯುತವಾಗಿದ್ದರೂ, ಸರ್ಕಾರದಿಂದ ಯಾವುದೇ ಖಚಿತ ಭರವಸೆ ಸಿಕ್ಕಿಲ್ಲವೆಂದು ಸಿಜೆಪಿ ನಾಯಕರು ತಿಳಿಸಿದ್ದಾರೆ.

ಪ್ರತಿಭಟನೆ ಮುಂದುವರಿಕೆ 

"ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಮತ್ತು ವಿದ್ಯಾರ್ಥಿಗಳ ಧ್ವನಿಯನ್ನು ಸಂಸತ್ತಿನಲ್ಲಿ ಎತ್ತುವವರೆಗೆ ನಮ್ಮ ಶಾಂತಿಯುತ ಸುದೀರ್ಘ ಹೋರಾಟ ಹಾಗೂ ಉಪವಾಸ ಸತ್ಯಾಗ್ರಹ ನಿಲ್ಲುವುದಿಲ್ಲ" ಎಂದು ಸೋನಮ್ ವಾಂಗ್ಚುಕ್ ಹಾಗೂ CJP ನಾಯಕರು ಸ್ಪಷ್ಟಪಡಿಸಿದ್ದಾರೆ. ನೀಟ್ ಪೇಪರ್ ಲೀಕ್ ಆದ ಮೇ ತಿಂಗಳಲ್ಲಿ ಪರೀಕ್ಷೆಗೆ ತಯಾರಿ ನಡೆಸಿದ್ದ 21 ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಸದ್ಯ ಸಿಜೆಪಿ ಪ್ರತಿಭಟನೆ 24ನೇ ದಿನಕ್ಕೆ ಕಾಲಿಟ್ಟಿದ್ದು ಅವರ ಮೇಲೆ ಪೊಲೀಸ್ ಬಲಪ್ರಯೋಗ ಮಾಡಿರುವುದಕ್ಕೆ ಭಾರೀ ಖಂಡನೆ ವ್ಯಕ್ತವಾಗಿದೆ.