ಅಸೆಂಬ್ಲಿ ಚುನಾವಣೆಗೆ ತಯಾರಿ ; ಅನಧಿಕೃತ ಜಾಹೀರಾತು ಫಲಕ, ಬ್ಯಾನರ್, ಬಂಟಿಂಗ್ಸ್ ತೆರವಿಗೆ ಜಿಲ್ಲಾಧಿಕಾರಿ ಸೂಚನೆ, ಅನುಮತಿ ಇಲ್ಲದೆ ಔತಣಕೂಟಕ್ಕೆ ನಿಷೇಧ 

15-03-23 03:12 pm       Mangalore Correspondent   ಕರಾವಳಿ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಎದುರಾಗಿರುವ ನಡುವಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಚುನಾವಣೆ ತಯಾರಿ ಆರಂಭಿಸಿದ್ದಾರೆ. ಮಂಗಳೂರು ಸೇರಿ ಜಿಲ್ಲೆಯ ವಿವಿಧೆಡೆ ಹಾಕಿರುವ ಅನಧಿಕೃತ ಜಾಹೀರಾತು ಫಲಕಗಳನ್ನು ಕೂಡಲೇ ತೆರವುಗೊಳಿಸಲು ಸೂಚಿಸಿದ್ದಾರೆ.

ಮಂಗಳೂರು, ಮಾ.15 : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಎದುರಾಗಿರುವ ನಡುವಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಚುನಾವಣೆ ತಯಾರಿ ಆರಂಭಿಸಿದ್ದಾರೆ. ಮಂಗಳೂರು ಸೇರಿ ಜಿಲ್ಲೆಯ ವಿವಿಧೆಡೆ ಹಾಕಿರುವ ಅನಧಿಕೃತ ಜಾಹೀರಾತು ಫಲಕಗಳನ್ನು ಕೂಡಲೇ ತೆರವುಗೊಳಿಸಲು ಸೂಚಿಸಿದ್ದಾರೆ. ಅಲ್ಲದೆ, ಸಾರ್ವಜನಿಕರ ಸಭೆ, ಸಮಾರಂಭಗಳ ಮೇಲೆ ನಿಗಾ ಇರಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಮಂಗಳೂರು ನಗರ ಮತ್ತು ಇನ್ನಿತರ ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಹಾಕಿರುವ ಬ್ಯಾನರ್‌- ಬಂಟಿಂಗ್ಸ್‌, ಫ್ಲೆಕ್ಸ್‌, ಗೋಡೆ ಬರಹ ಮತ್ತು ಇತರ ಜಾಹೀರಾತುಗಳನ್ನು ತೆರವುಗೊಳಿಸಿ ಪ್ರತೀ ದಿನ ವರದಿ ಸಲ್ಲಿಸಬೇಕು ಎಂದು ಸೂಚಿಸಿರುವ ಜಿಲ್ಲಾಧಿಕಾರಿ, ನಗರ ಮತ್ತು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳು ಅಥವಾ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ರಾಜಕೀಯ ವ್ಯಕ್ತಿಗಳು ಸಾರ್ವಜನಿಕ ಔತಣಕೂಟ ಏರ್ಪಡಿಸುವಂತಿಲ್ಲ. ಒಂದು ವೇಳೆ ಉಲ್ಲಂಘಿಸಿದಲ್ಲಿ ಸ್ಥಳೀಯ ಪ್ರಾಧಿಕಾರಗಳು, ಪೊಲೀಸ್‌ ಇಲಾಖೆ, ಅಬಕಾರಿ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, ಐಪಿಸಿ ಕಲಂ 171 ರಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಯಾವುದೇ ಸಭಾ ಕಾರ್ಯಕ್ರಮಕ್ಕೆ ಅನುಮತಿ ನೀಡುವಾಗ ಸಭೆ ಮುಕ್ತಾಯವಾದ ಅನಂತರ ಬ್ಯಾನರ್‌ -ಬಂಟಿಂಗ್‌ ತೆರವುಗೊಳಿಸಲು ಸೂಚಿಸಬೇಕು. ಕಾನೂನು ಸುವ್ಯವಸ್ಥೆ, ಸಾಮಾಜಿಕ ಅಶಾಂತಿ ಹಾಗೂ ಶಬ್ದಮಾಲಿನ್ಯ ಉಂಟುಮಾಡುವ ಯಾವುದೇ ಚಟುವಟಿಕೆ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಕೊಂಡು ಜಿಲ್ಲಾಡಳಿತಕ್ಕೆ ವರದಿ ನೀಡಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಇದಕ್ಕೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿದಿನ ಉಸ್ತುವಾರಿ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಬೇಕು. ಈ ಕುರಿತ ವರದಿ ಪ್ರತಿದಿನ ಮತ್ತು ಒಟ್ಟಾರೆ ಮಾಹಿತಿ ಪ್ರತೀ ಶನಿವಾರ ಜಿ.ಪಂ. ಸಿಇಒ ಅವರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Mangalore Model code enforced, no permission for political hoardings banner, political hoardings removed ater DC order.