ಜಾತಿ ರಾಜಕಾರಣ ಬಿಜೆಪಿಯ ಚುನಾವಣಾ ಗಿಮಿಕ್ ; ಹರೀಶ್ ಕುಮಾರ್

20-11-20 04:53 pm       Mangalore Correspondent   ಕರಾವಳಿ

ಯಾವುದೇ ಚುನಾವಣೆ ಸಮೀಪಿಸುತ್ತಿರುವಾಗಲೇ ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ಗಿಮಿಕ್ ಆರಂಭಿಸುತ್ತದೆ ಎಂದು ಹರೀಶ್ ಕುಮಾರ್ ಹೇಳಿದ್ದಾರೆ.

ಮಂಗಳೂರು, ನ.20 : ಜಾತಿ ರಾಜಕಾರಣ ಮಾಡುವುದು ಬಿಜೆಪಿಯ ಚುನಾವಣಾ ಗಿಮಿಕ್. ಚುನಾವಣೆ ಬಂದಾಗ ಬಿಜೆಪಿಯವರು ಇಂಥ ಗಿಮಿಕ್ ಮಾಡಿಕೊಂಡು ಬಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯರೂ ಆಗಿರುವ ದ.ಕ. ಜನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಚುನಾವಣೆ ಸಮೀಪಿಸುತ್ತಿರುವಾಗಲೇ ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ಗಿಮಿಕ್ ಆರಂಭಿಸುತ್ತದೆ. ಈಗಾಗಲೇ ವಿವಿಧ ಜಾತಿಗಳಿಗೆ ಪ್ರಾಧಿಕಾರ ಅಥವಾ ನಿಗಮ ರಚಿಸಲಾಗಿದೆ. ಸುಮಾರು 20ಕ್ಕೂ ಅಧಿಕ ಪ್ರಾಧಿಕಾರಗಳಿಗೆ ಅಧ್ಯಕ್ಷರೇ ಇಲ್ಲ. ನಾರಾಯಣಗುರು ಜಯಂತಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಅದೇ ರೀತಿ ಪುತ್ತೂರು ಪಡುಮಲೆಯಲ್ಲಿ ಕೋಟಿ ಚೆನ್ನಯ ಜನ್ಮಸ್ಥಾನ ಪುನರುಜ್ಜೀವನಕ್ಕೆ ಹಣಕಾಸು ನೆರವು ನೀಡಿದ್ದು ಆಗಿನ ಶಾಸಕಿ ಶಕುಂತಳಾ ಶೆಟ್ಟಿ, ಔಷಧವನ ಸ್ಥಾಪನೆಗೂ ಮಾಜಿ ಸಚಿವ ರಮಾನಾಥ ರೈ ನೆರವು ನೀಡಿದ್ದರು ಎಂದು ಹೇಳಿದರು.

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇರಿಸುವ ಬಗ್ಗೆ ಸ್ಥಳೀಯ ಮಳವೂರು ಗ್ರಾಮ ಪಂಚಾಯತ್‌ನಲ್ಲಿ ನಾಲ್ಕು ವರ್ಷ ಗಳ ಹಿಂದೆ ನಿರ್ಣಯಿಸಿ, ಅದನ್ನು ಜಿಲ್ಲಾ ಪಂಚಾಯಿತಿಗೆ ಕಳುಹಿಸಿಕೊಡಲಾಗಿತ್ತು. ಅಲ್ಲಿಂದ ರಾಜ್ಯ ಸರ್ಕಾರಕ್ಕೆ ತೀರ್ಮಾನವನ್ನು ಕಳುಹಿಸಲಾಗಿತ್ತು. ಆದರೆ ರಾಜ್ಯ ಸರಕಾರಕ್ಕೆ ಕೋಟಿ ಚೆನ್ನಯ ಹೆಸರಿಡುವ ಮನಸ್ಸಿಲ್ಲ. ಅದಕ್ಕೆ ಪ್ರಸ್ತಾವನೆಯನ್ನು ಹಿಂದಕ್ಕೆ ಕಳುಹಿಸಿದೆ ಎಂದು ಹರೀಶ್ ಕುಮಾರ್ ದೂರಿದರು. 

ವಿಮಾನ ನಿಲ್ದಾಣಗಳ ಹೆಸರು ನಾಮಕರಣಕ್ಕೆ ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಉತ್ತರಿಸಿದ್ದಾರೆ. ಹಾಗಿರುವಾಗ ರಾಜ್ಯ ಕ್ಯಾಬಿನೆಟ್‌ನಲ್ಲಿ ಒಪ್ಪಿಗೆ ಸೂಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಬೇಕು. ಇಲ್ಲವೇ ಸಂಸದರು ಲೋಕಸಭೆಯಲ್ಲಿ ಪ್ರಸ್ತಾಪಿಸಬೇಕು. ಇಂತಹ ಯಾವುದೇ ಕೆಲಸವನ್ನು ಮಾಡದೆ ಬಿಜೆಪಿ ಮಾಡದೆ ಜಾತಿ ಹೆಸರಿನಲ್ಲಿ ರಾಜಕೀಯ ನಡೆಸುತ್ತಿದೆ ಎಂದು ಹರೀಶ್ ಕುಮಾರ್ ಆರೋಪಿಸಿದರು.

ಮಂಗಳೂರು ವಿಮಾನ ನಿಲ್ದಾಣದ ಗುತ್ತಿಗೆ ಅವಧಿಯನ್ನು 30 ವರ್ಷಕ್ಕೆ ನೀಡುವುದು ಕ್ರಮ. ಆದರೆ ಇಲ್ಲಿ 50 ವರ್ಷದ ವರೆಗೆ ಗುತ್ತಿಗೆ ನೀಡಲಾಗಿದೆ. ಇದು ನಿಯಮಬಾಹಿರ. ಇದರ ಹಿಂದೆ ಕೇಂದ್ರ ಸರ್ಕಾರದ ಹಿಡನ್ ಅಜೆಂಡಾ ಇದೆ ಎಂದರು ಹರೀಶ್ ಕುಮಾರ್. 

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮುಖಂಡರಾದ ಅಬ್ದುಲ್ ರವೂಫ್, ಶಶಿಧರ ಹೆಗ್ಡೆ, ಟಿ.ಕೆ.ಸುಧೀರ್, ಎ.ಸಿ.ವಿನಯರಾಜ್, ಅನಿಲ್ ಕುಮಾರ್, ನೀರಜ್‌ಪಾಲ್, ನಝೀರ್ ಬಜಾಲ್ ಇದ್ದರು.

BJP is exemplary in caste politics. BJP has formed development corporations of all castes slammed district Congress president Harish Kumar in Mangalore.