CM siddaramaiah, DK shivakumar, Mangalore mp candidate Padmaraj: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಪ್ರಚಾರಕ್ಕೆ ಬರಲಿದ್ದಾರೆ ಸಿಎಂ, ಡಿಸಿಎಂ ; ಪುತ್ತೂರಿನಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ, ಏ.3ರಂದು ನಾಮಪತ್ರ 

26-03-24 03:54 pm       Mangalore Correspondent   ಕರಾವಳಿ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.

ಮಂಗಳೂರು, ಮಾ.26: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ. 

ಜಿಲ್ಲಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ. ಚುನಾವಣಾ ಕಚೇರಿಯೂ ಉದ್ಘಾಟನೆಗೊಂಡಿದೆ. ಮುಂದೆ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು. ಪ್ರಚಾರ ಕಾರ್ಯಕ್ಕೆ ಇನ್ನಷ್ಟು ಶಕ್ತಿ ತುಂಬಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ. ಇದರ ಜೊತೆಗೆ  ರಾಷ್ಟ್ರೀಯ ಮುಖಂಡರೂ ಆಗಮಿಸಲಿದ್ದಾರೆ ಎಂದರು.

ಏಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ 

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಪರವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು. ಏ.11ರಂದು ಸುಳ್ಯ, 12ರಂದು ಮುಲ್ಕಿ, 13ರಂದು ಪುತ್ತೂರು, 14ರಂದು ಮಂಗಳೂರು ದಕ್ಷಿಣ, 15ರಂದು ಉಳ್ಳಾಲ, 16ರಂದು ಮಂಗಳೂರು ಉತ್ತರ, 17ರಂದು ಬೆಳ್ತಂಗಡಿ, 18ರಂದು ಬಂಟ್ವಾಳಕ್ಕೆ ಅಭ್ಯರ್ಥಿ ಸಹಿತ ಆಗಮಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ಪುತ್ತೂರಿಗೆ ಆಗಮಿಸಲಿದ್ದು ಅಲ್ಲಿಯೇ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಆಯೋಜಿಸಲಾಗುವುದು ಎಂದರು. 

ಏ.19ರಿಂದ ಎರಡನೇ ಸುತ್ತಿನ ಪ್ರಚಾರ ಕಾರ್ಯ ನಡೆಯಲಿದೆ. ಮಾ.24ಕ್ಕೆ ಪ್ರಚಾರ ಕಾರ್ಯ ಅಂತ್ಯವಾಗಲಿದ್ದು, 26ರಂದು ಚುನಾವಣೆ ನಡೆಯಲಿದೆ ಎಂದು ವಿವರಿಸಿದರು.

ಹೊಸ ಮುಖಕ್ಕೆ ಅವಕಾಶ ನೀಡಿದ್ದಾರೆ 

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಹೊಸ ಮುಖಕ್ಕೆ ಅವಕಾಶ ನೀಡಬೇಕು ಎನ್ನುವುದು ಕಾರ್ಯಕರ್ತರ ಅಭಿಲಾಷೆಯಾಗಿತ್ತು. ಅದರಂತೆ ರಾಜಕೀಯದ ಜೊತೆಗೆ ಸಾಮಾಜಿಕ, ಧಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿರುವ ಪದ್ಮರಾಜ್ ಆರ್. ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಸಮರ್ಥ ಹಾಗೂ ಉತ್ತಮ ಅಭ್ಯರ್ಥಿಯನ್ನು ನೇಮಕ ಮಾಡಿರುವ ಕಾರಣಕ್ಕೆ ಕಾಂಗ್ರೆಸ್ ವರಿಷ್ಠರಿಗೆ ಅಭಿನಂದನೆ ಸಲ್ಲಿಸಿದರು. 

ಗೆಲ್ಲುವ ಅಭ್ಯರ್ಥಿ ಪದ್ಮರಾಜ್ 

ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ ಮಾತನಾಡಿ, ಹೊಸಮುಖದ ಅಗತ್ಯ ಪಕ್ಷಕ್ಕಿತ್ತು. ಇದೀಗ ಈ ಕೊರತೆ ನೀಗಿದ್ದು, ಗೆಲ್ಲುವ ಅಭ್ಯರ್ಥಿಯನ್ನೇ ಪಕ್ಷ ಆಯ್ಕೆ ಮಾಡಿದೆ. ಇದು ಬಿಜೆಪಿ ಭದ್ರಕೋಟೆ ಅಂತ ಅಂದ್ಕೊಳ್ಳಬೇಕಿಲ್ಲ. ನಾನು ಜಿಲ್ಲಾಧ್ಯಕ್ಷನಾಗಿದ್ದ ವೇಳೆ ಎಂಟರಲ್ಲಿ ಏಳು ಸೀಟನ್ನು ಕಾಂಗ್ರೆಸ್ ಗೆದ್ದಿದೆ. ನಾವು ಕಾಂಗ್ರೆಸಿನ ಇತಿಹಾಸವನ್ನು ಮತ್ತೊಮ್ಮೆ ಪುನರ್ ಸ್ಥಾಪಿಸುವಂತೆ ನಾವು ಮಾಡುತ್ತೇವೆ, ಜಿಲ್ಲೆಯ ಸಮಗ್ರ ಅಭಿವೃದ್ಧಿಯಲ್ಲಿ ಸಿಂಹಪಾಲು ನೀಡಿರುವ ಕಾಂಗ್ರೆಸ್ ನೀಡಿದಂತಹ ಭರವಸೆಯನ್ನು ಈಡೇರಿಸಿದೆ‌. ಗ್ಯಾರೆಂಟಿ ಯೋಜನೆಯೂ ಯಶಸ್ಸು ಕಂಡಿದೆ ಎಂದರು.

ಗೆಲುವಿಗಾಗಿ ಹೋರಾಟ ; ಅಭಯಚಂದ್ರ ಜೈನ್ 

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಹೊಸ ಮುಖಕ್ಕೆ ಅವಕಾಶ ನೀಡುವ ಮೂಲಕ ಪಕ್ಷ ಕಾರ್ಯಕರ್ತರ ಬೇಡಿಕೆಗೆ ಮಣೆ ಹಾಕಿದೆ. ಅಭ್ಯರ್ಥಿ ಪದ್ಮರಾಜ್ ಅವರ ಗೆಲುವಿಗಾಗಿ ಹೋರಾಡುತ್ತೇವೆ ಎಂದರು.

ಪದ್ಮರಾಜ್ ಗೆಲ್ಲುತ್ತಾರೆ ; ಪೂಜಾರಿ ಭವಿಷ್ಯ 

ಇದಕ್ಕೂ ಮುನ್ನ ಕಾಂಗ್ರೆಸ್ ಲೋಕಸಭೆ ಚುನಾವಣೆ ಕಚೇರಿಯನ್ನು ಲಾಲ್ ಬಾಗ್ ನಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು. ಸೇರಿದ್ದ ನೂರಾರು ಮಂದಿ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿದರು. ಬಳಿಕ ಪದ್ಮರಾಜ್ ಜೊತೆಗೆ ಕುದ್ರೋಳಿ ದೇವಸ್ಥಾನಕ್ಕೆ ತೆರಳಿದ ಜನಾರ್ದನ ಪೂಜಾರಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಈ ಸಲ ಉತ್ತಮ‌ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಪದ್ಮರಾಜ್ ಗೆಲ್ಲುತ್ತಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮುಡಾ ಅಧ್ಯಕ್ಷ ಸದಾಶಿವ ಉಲ್ಲಾಳ್, ಪ್ರಮುಖರಾದ ಯು.ಕೆ. ಮೋನು, ಶಾಹುಲ್ ಹಮೀದ್ ಉಪಸ್ಥಿತರಿದ್ದರು.

CM siddaramaiah, DK shivakumar to campaign for Mangalore Congress mp candidate Padmaraj in Puttur for the upcoming loksabha elections said Harish Kumar at a press meet held at congress office. The congress convention will be held on April 3rd.