ಮಂಗಳೂರು ವಿವಿಯಲ್ಲಿ ತುಳು ಎಂಎ ಪ್ರವೇಶ ಶುಲ್ಕ ಹೆಚ್ಚಳ ; ವಿದ್ಯಾರ್ಥಿಗಳ ಹೊರೆ ಇಳಿಸುವಂತೆ ರಾಜ್ಯದ ಉನ್ನತ ಶಿಕ್ಷಣ ಸಚಿವರಿಗೆ ಸಂಸದ ಕ್ಯಾ.ಬೃಜೇಶ್ ಚೌಟ ಪತ್ರ 

23-10-24 06:26 pm       Mangalore Correspondent   ಕರಾವಳಿ

ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಎಂಎ ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. 

ಮಂಗಳೂರು, ಅ.23: ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಎಂಎ ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. 

ಈ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಅವರಿಗೆ ಪತ್ರ ಬರೆದಿರುವ ಕ್ಯಾ. ಚೌಟ ಅವರು, ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ ವಿಭಾಗದ 2024-25ನೇ ಸಾಲಿನ ಪ್ರವೇಶ ಶುಲ್ಕವನ್ನು 22,410 ರೂ.ಗೆ ಏರಿಸುವ ಮೂಲಕ ತುಳು ಭಾಷೆ ಅಧ್ಯಯನ ಮಾಡ ಬಯಸುವವರಿಗೆ ಆರ್ಥಿಕ ಹೊರೆಯುಂಟು ಮಾಡಲಾಗಿದೆ. ಆರಂಭದಲ್ಲಿ ತುಳು ಎಂಎ ಕೋರ್ಸ್‌ಗೆ 15 ಸಾವಿರ ರೂ. ಪ್ರವೇಶ ಶುಲ್ಕ ಇತ್ತು. ಆದರೆ, ಇದೀಗ ಮೂರು ವರ್ಷದ ಬಳಿಕ 22,410 ರೂ.ಗೆ ಶುಲ್ಕ ಏರಿಕೆ ಮಾಡಿರುವುದರಿಂದ ತುಳು ಎಂಎ ಅಧ್ಯಯನಕ್ಕೆ ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ತುಳು ಭಾಷೆಗೆ ಅಧಿಕೃತ ಭಾಷೆ ಮಾನ್ಯತೆ ಪಡೆಯುವುದಕ್ಕೆ ಪ್ರಯತ್ನಗಳು ನಡೆಯುತ್ತಿರಬೇಕಾದರೆ, ರಾಜ್ಯ ಸರ್ಕಾರವು ತುಳು ಭಾಷೆ ಉತ್ತೇಜನಕ್ಕೆ ಸಹಕಾರಿಯಾಗಿರುವ ಎಂಎ ಅಧ್ಯಯನ ಕೋರ್ಸ್‌ ಪ್ರವೇಶ ಶುಲ್ಕ ಹೆಚ್ಚಿಸಿರುವುದು ಸರಿಯಲ್ಲ. ಸ್ಥಳೀಯ ಭಾಷೆಗೆ ನೆರವು ನೀಡುವ ನಿಟ್ಟಿನಲ್ಲಿ ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡಬೇಕೆಂಬ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ 2020-21ನೇ ಸಾಲಿನಿಂದ 4 ಸಾವಿರ ರೂ. ಕಡಿತಗೊಳಿಸಲಾಗಿತ್ತು. ಆದರೆ, 3 ವರ್ಷದ ಬಳಿಕ ವಿವಿಯು ಪ್ರವೇಶ ಶುಲ್ಕ ಹೆಚ್ಚಿಸುವ ಮೂಲಕ ತುಳು ಭಾಷೆ ಅಧ್ಯಯನಾಸಕ್ತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದೆ. ಹೀಗಾಗಿ, ಕೂಡಲೇ ಶುಲ್ಕ ರಿಯಾಯಿತಿ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಕ್ಯಾ. ಚೌಟ ಮನವಿ ಮಾಡಿದ್ದಾರೆ. 

ತುಳು ಎಂಎ ವಿಭಾಗಕ್ಕೆ ಕನಿಷ್ಠ 15 ವಿದ್ಯಾರ್ಥಿಗಳು ಪ್ರವೇಶ ಪಡೆದರೆ ಮಾತ್ರ ವಿವಿಯು ತುಳು ಸ್ನಾತಕೋತ್ತರ ವಿಭಾಗವನ್ನು ಮುಂದುವರಿಸುವುದಕ್ಕೆ ಸಾಧ್ಯ. ಇಂಥಹ ಪರಿಸ್ಥಿತಿಯಲ್ಲಿ ಶುಲ್ಕವನ್ನು ಏಕಾಏಕಿ ಹೆಚ್ಚಳ ಮಾಡಿದರೆ ತುಳು ಎಂಎ ಅಧ್ಯಯನಕ್ಕೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆಯೂ ಕುಸಿಯುವ ಆತಂಕವಿದೆ. ಹೀಗಿರುವಾಗ, ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ ಪದವಿ ತರಗತಿಗಳು ಯಶಸ್ವಿಯಾಗಿ ಮುಂದುವರಿಯಬೇಕಾದರೆ, ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕವನ್ನು ಈ ಮೊದಲಿನಂತೆ ಕಡಿತಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಸಚಿವ ಡಾ.ಎಂ.ಸಿ ಸುಧಾಕರ್‌ ಅವರಿಗೆ ಬರೆದಿರುವ ಪತ್ರದಲ್ಲಿ ಕ್ಯಾ. ಚೌಟ ಅವರು ಒತ್ತಾಯಿಸಿದ್ದಾರೆ.

ಶುಲ್ಕ ಕಡಿತಕ್ಕೆ ವಿವಿ ಕುಲಪತಿಗೂ ಮನವಿ 

ಮಂಗಳೂರು ವಿವಿ ಕುಲಪತಿಯಾಗಿರುವ ಪ್ರೊ. ಪಿ.ಎಲ್. ಧರ್ಮ ಅವರು ಕೂಡ ತುಳು ಎಂಎ ಅಧ್ಯಯನ ಕೋರ್ಸ್‌ ಪ್ರವೇಶ ಶುಲ್ಕವನ್ನು ಕಡಿತಗೊಳಿಸುವುದಕ್ಕೆ ಸಂಬಂಧಪಟ್ಟ ಇಲಾಖೆ ಮೂಲಕ ಸರ್ಕಾರದ ಮಟ್ಟದಲ್ಲಿ ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸಬೇಕು. ಆ ಮೂಲಕ, ತುಳು ಭಾಷೆ ಕಲಿಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಜೊತೆಗೆ ತುಳು ಭಾಷೆಯ ಪ್ರೋತ್ಸಾಹಕ್ಕೆ ಕೈಜೋಡಿಸಬೇಕೆಂದು ಸಂಸದ ಕ್ಯಾ. ಚೌಟ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.

Mangalore Tulu MA admission fee increase in Mangalore University, MP Brijesh Chowta writes to higher education minister.