Leopard Mangalore, MLA Vedavyas Kamath: ಕದ್ರಿ, ಶಕ್ತಿನಗರ ಭಾಗದಲ್ಲಿ ಚಿರತೆ ಪ್ರತ್ಯಕ್ಷ ; ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ವೇದವ್ಯಾಸ ಕಾಮತ್ ಸಭೆ, ಹಗಲು- ರಾತ್ರಿ ಗಸ್ತಿಗೆ ಸಿಬಂದಿ ನಿಯೋಜನೆ 

27-02-26 08:40 pm       HK News Desk   ಕರಾವಳಿ

ನಗರದ ಕದ್ರಿ, ಶಕ್ತಿನಗರ ಭಾಗದಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಮಂಗಳೂರು, ಫೆ.27: ನಗರದ ಕದ್ರಿ, ಶಕ್ತಿನಗರ ಭಾಗದಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಕದ್ರಿ ಕೈಬಟ್ಟಲ್, ಶಕ್ತಿನಗರದ ಕೋರ್ಡೆಲ್‌ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದ್ದು, ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯಿಂದ ಬೋನುಗಳನ್ನು ಇಡಲಾಗಿದೆ. ಈ ಎರಡೂ ಭಾಗಗಳಲ್ಲಿ ಕಾಣಿಸಿಕೊಂಡ ಚಿರತೆ ಒಂದೇ ಆಗಿರುವ ಸಾಧ್ಯತೆಯೂ ಇದೆ. ಚಿರತೆ ಸಂಚಾರ ಮಾಡಿರುವ ಪ್ರದೇಶದಲ್ಲಿ ಹಗಲು ರಾತ್ರಿ ಗಸ್ತು ತಿರುಗಲು ಅರಣ್ಯ ಇಲಾಖೆ ಸಿಬ್ಬಂದಿಯ ತಂಡವನ್ನು ನಿಯೋಜಿಸಿದ್ದೇವೆ. ಸದ್ಯ ಚಿರತೆ ಇಲ್ಲೇ ಉಳಿದಿರದೇ, ಕಾಡು ಪ್ರದೇಶಕ್ಕೆ ಮರಳಿರುವ ಬಗ್ಗೆ ಅಂದಾಜಿಸಲಾಗಿದೆ. ಹಾಗಿದ್ದೂ ಸಾರ್ವಜನಿಕರು ಚಿರತೆ ಸಹಿತ ಯಾವುದೇ ಅಪಾಯಕಾರಿ ಕಾಡು ಪ್ರಾಣಿಗಳು ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆಯ ಟೋಲ್ ಫ್ರೀ ಸಂಖ್ಯೆ 1926 ಗೆ ಮಾಹಿತಿ ನೀಡಿ ಸಹಕರಿಸಿದರೆ ಇನ್ನಷ್ಟು ತ್ವರಿತ ಮತ್ತು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಸಹಾಯವಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ ಅವರು ಶಾಸಕರ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದರು. 

ಕಾಡು ಪ್ರಾಣಿಗಳು ಆಹಾರ ಅರಸಿಕೊಂಡು ನಾಡಿಗೆ ಬರುತ್ತಿರುವುದು ಸೂಕ್ಷ್ಮ ವಿಚಾರವಾಗಿದ್ದು, ಸಾರ್ವಜನಿಕರ ಸುರಕ್ಷತೆಯ ಜೊತೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೂ ಸಹ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಶಾಸಕರು ಸೂಚನೆ ನೀಡಿದರು.