ನಿವೃತ್ತ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ; ‘ಸಂಧ್ಯಾ ಕಿರಣ’ ಆರೋಗ್ಯ ಯೋಜನೆ, 60ರಿಂದ 70 ವರ್ಷದವರಿಗೆ ಭರ್ಜರಿ ಸೌಲಭ್ಯ!

08-08-26 12:17 pm       HK News Staffer   ಕರಾವಳಿ

ವಯೋಸಹಜ ಅನಾರೋಗ್ಯ ಹಾಗೂ ಹೆಚ್ಚುತ್ತಿರುವ ವೈದ್ಯಕೀಯ ವೆಚ್ಚದಿಂದ ಬಳಲುತ್ತಿರುವ ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮಹತ್ವದ ಯೋಜನೆಯೊಂದನ್ನು ಜಾರಿಗೆ ತರಲು ಮುಂದಾಗಿದೆ. ನಿವೃತ್ತ ನೌಕರರು ಹಾಗೂ ಅವರ ಕುಟುಂಬ ಸದಸ್ಯರಿಗೆ ಆರೋಗ್ಯ ಭದ್ರತೆ ಕಲ್ಪಿಸುವ ‘ಸಂಧ್ಯಾ ಕಿರಣ’ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಮಂಗಳೂರು , ಆ. 8: ವಯೋಸಹಜ ಅನಾರೋಗ್ಯ ಹಾಗೂ ಹೆಚ್ಚುತ್ತಿರುವ ವೈದ್ಯಕೀಯ ವೆಚ್ಚದಿಂದ ಬಳಲುತ್ತಿರುವ ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಮಹತ್ವದ ಯೋಜನೆಯೊಂದನ್ನು ಜಾರಿಗೆ ತರಲು ಮುಂದಾಗಿದೆ. ನಿವೃತ್ತ ನೌಕರರು ಹಾಗೂ ಅವರ ಕುಟುಂಬ ಸದಸ್ಯರಿಗೆ ಆರೋಗ್ಯ ಭದ್ರತೆ ಕಲ್ಪಿಸುವ ‘ಸಂಧ್ಯಾ ಕಿರಣ’ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ಸೇವೆಯಲ್ಲಿರುವ ಸರ್ಕಾರಿ ನೌಕರರಿಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ’ ಯೋಜನೆಯಡಿ ಆರೋಗ್ಯ ಸೌಲಭ್ಯ ದೊರೆಯುತ್ತಿದೆ. ಆದರೆ, 60 ವರ್ಷ ತುಂಬಿ ನಿವೃತ್ತರಾದ ಬಳಿಕ ಸಮರ್ಪಕ ಆರೋಗ್ಯ ಭದ್ರತೆ ಇಲ್ಲದಿರುವುದನ್ನು ಗಮನಿಸಿ ‘ಸಂಧ್ಯಾ ಕಿರಣ’ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಮಾಸಿಕ ಪಿಂಚಣಿಯ ಶೇ.1.25 ಪಾವತಿಸಿದರೆ ಸೌಲಭ್ಯ;

60ರಿಂದ 70 ವರ್ಷದೊಳಗಿನ ನಿವೃತ್ತ ಸರ್ಕಾರಿ ನೌಕರರು ತಮ್ಮ ಮಾಸಿಕ ಪಿಂಚಣಿಯ ಶೇ.1.25ರಷ್ಟು ಮೊತ್ತವನ್ನು ಪಾವತಿಸಿ ಯೋಜನೆಯ ಆರೋಗ್ಯ ಸೌಲಭ್ಯ ಪಡೆಯಬಹುದಾಗಿದೆ. ನಿವೃತ್ತ ನೌಕರ ಮೃತಪಟ್ಟ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರಿಗೆ 70 ವರ್ಷ ತುಂಬುವವರೆಗೆ ಯೋಜನೆಯ ಸೌಲಭ್ಯ ಮುಂದುವರಿಯಲಿದೆ. ಇದಕ್ಕಾಗಿ ಕುಟುಂಬ ಪಿಂಚಣಿಯಿಂದ ಶೇ.0.75ರಷ್ಟು ಮೊತ್ತವನ್ನು ಪಾವತಿಸಲು ಅವಕಾಶ ಕಲ್ಪಿಸಲಾಗುತ್ತದೆ.

ಮಹತ್ವದ ವಿಚಾರವೆಂದರೆ, ಯೋಜನೆಗೆ ಈಗಾಗಲೇ ರಾಜ್ಯ ಸಚಿವ ಸಂಪುಟದ ಅನುಮೋದನೆ ದೊರೆತಿದ್ದು, ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ 3,000 ಹುದ್ದೆಗಳ ಭರ್ತಿಗೆ ಸಿದ್ಧತೆ

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿನ ಸಿಬ್ಬಂದಿ ಕೊರತೆ ನೀಗಿಸಲು ಆರೋಗ್ಯ ಇಲಾಖೆ ನೇಮಕಾತಿ ಪ್ರಕ್ರಿಯೆ ಚುರುಕುಗೊಳಿಸಿದೆ. ಈಗಾಗಲೇ 200 ಎಂ.ಬಿ.ಬಿ.ಎಸ್. ವೈದ್ಯರು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ. ವೈದ್ಯರು, ನರ್ಸ್‌ಗಳು ಹಾಗೂ ಪ್ರಯೋಗಾಲಯ ತಂತ್ರಜ್ಞರು ಸೇರಿದಂತೆ ಸುಮಾರು 1,000 ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

ಇದರ ಜೊತೆಗೆ ಹೊಸದಾಗಿ 3,000 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಅನುಮೋದನೆ ನೀಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಾಗೂ ವಿಶೇಷ ನೇಮಕಾತಿ ನಿಯಮಗಳ ಮೂಲಕ ಶೀಘ್ರದಲ್ಲೇ ಅಧಿಸೂಚನೆ ಹೊರಬೀಳುವ ಸಾಧ್ಯತೆಯಿದೆ.

ಎಪಿಎಲ್‌ ಕಾರ್ಡ್‌ದಾರರಿಗೂ ಉಚಿತ ಚಿಕಿತ್ಸೆ?

‘ಆಯುಷ್ಮಾನ್ ಕರ್ನಾಟಕ’ ಯೋಜನೆಯನ್ನು ಮತ್ತಷ್ಟು ವಿಸ್ತರಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ. ಪ್ರಸ್ತುತ ಬಿಪಿಎಲ್‌ ಕಾರ್ಡ್‌ದಾರರಿಗೆ ದೊರೆಯುತ್ತಿರುವ ಉಚಿತ ಚಿಕಿತ್ಸಾ ಸೌಲಭ್ಯವನ್ನು ಎಪಿಎಲ್‌ ಕಾರ್ಡ್‌ದಾರರಿಗೂ ವಿಸ್ತರಿಸುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಎಪಿಎಲ್‌ ಕಾರ್ಡ್‌ದಾರರು ಖಾಸಗಿ ಆಸ್ಪತ್ರೆಗಳ ಬದಲಾಗಿ ಸರ್ಕಾರಿ ಆಸ್ಪತ್ರೆಯ ಜನರಲ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯಲು ಬಯಸಿದರೆ, ಬಿಪಿಎಲ್‌ ಫಲಾನುಭವಿಗಳ ಮಾದರಿಯಲ್ಲಿ ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ ಸಾಧ್ಯತೆಯನ್ನು ಸರ್ಕಾರ ಪರಿಶೀಲಿಸುತ್ತಿದೆ.

70 ವರ್ಷ ಮೇಲ್ಪಟ್ಟವರಿಗೂ ಉಚಿತ ಚಿಕಿತ್ಸೆ;

ಕೇಂದ್ರ ಸರ್ಕಾರ ಘೋಷಿಸಿರುವ 70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸಾ ಯೋಜನೆಯ ಅನುಷ್ಠಾನದ ಕುರಿತು ರಾಜ್ಯ ಸರ್ಕಾರ ಕೇಂದ್ರದಿಂದ ಸ್ಪಷ್ಟತೆ ಕೋರಲು ಮುಂದಾಗಿದೆ.

ಅನುದಾನ ಹಂಚಿಕೆ ಹಾಗೂ ಯೋಜನೆ ಜಾರಿ ಕುರಿತು ಕೇಂದ್ರದಿಂದ ಸ್ಪಷ್ಟ ಮಾರ್ಗಸೂಚಿ ಬಂದಿಲ್ಲ. ಈ ಕುರಿತು ಪ್ರಧಾನಮಂತ್ರಿ ಹಾಗೂ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದು ಮಾಹಿತಿ ಪಡೆಯಲಾಗುವುದು. ಕೇಂದ್ರದಿಂದ ಅಧಿಕೃತ ಮಾರ್ಗಸೂಚಿ ಹಾಗೂ ಅನುದಾನದ ಸ್ಪಷ್ಟತೆ ದೊರೆತ ತಕ್ಷಣ ರಾಜ್ಯದಲ್ಲೂ 70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸಾ ಸೌಲಭ್ಯ ಜಾರಿಗೊಳಿಸಲಾಗುವುದು ಎಂದು ಯು.ಟಿ. ಖಾದರ್ ಭರವಸೆ ನೀಡಿದ್ದಾರೆ.