ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ ಆರೋಪ: ಭಟ್ಕಳದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್

17-09-26 09:41 am       HK News Staffer   ಕರಾವಳಿ

ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೇಳಿಬಂದಿದೆ. ಬುಧವಾರ ರಾತ್ರಿ ಗುಳ್ಮಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಕಲ್ಲು ತೂರಾಟದಿಂದ ಕಟ್ಟಡದ ಎರಡು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ದೂರು ನೀಡಲಾಗಿದೆ.

ಕಾರವಾರ, ಸೆಪ್ಟೆಂಬರ್ 17: ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೇಳಿಬಂದಿದೆ. ಬುಧವಾರ ರಾತ್ರಿ ಗುಳ್ಮಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಕಲ್ಲು ತೂರಾಟದಿಂದ ಕಟ್ಟಡದ ಎರಡು ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ದೂರು ನೀಡಲಾಗಿದೆ.

ಭಟ್ಕಳದ ತಲಾಂದದಿಂದ ಸಾರ್ವಜನಿಕ ಗಣೇಶ ವಿಸರ್ಜನಾ ಮೆರವಣಿಗೆ ಆರಂಭವಾಗಿತ್ತು. ಮೆರವಣಿಗೆ ಗುಳ್ಮಿ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದ ವೇಳೆ, ರಸ್ತೆಯ ಪಕ್ಕದಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ನೆಲಮಹಡಿಯಲ್ಲಿರುವ ತಾಜುಸುನ್ನಾ ಅರೇಬಿಕ್ ಮದರಸಾ ಮೇಲೆ ಅಪರಿಚಿತರು ಕಲ್ಲು ತೂರಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ಸ್ಥಳೀಯರು

ಘಟನೆ ಸಂಬಂಧ ಸ್ಥಳೀಯ ಅಬ್ದುಲ್ ಅಲಿಂ ಅವರು ಭಟ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಲ್ಲು ತೂರಾಟದಿಂದ ಕಟ್ಟಡದ ಎರಡು ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆಗೆ ಕಾರಣರಾದವರನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಮುಸ್ಲಿಮರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು.

ಸ್ಥಳಕ್ಕೆ ಎಸ್ಪಿ ಭೇಟಿ: ಆರೋಪಿಗಳ ಬಂಧನದ ಭರವಸೆ

ವಿಷಯ ತಿಳಿದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃತ್ಯ ಎಸಗಿದವರನ್ನು ಪತ್ತೆಹಚ್ಚಿ ಬಂಧಿಸುವುದಾಗಿ ಎಸ್ಪಿ ಭರವಸೆ ನೀಡಿದ ಬಳಿಕ ಸ್ಥಳೀಯರು ಪೊಲೀಸ್ ಠಾಣೆಯಿಂದ ತೆರಳಿದರು.

ಭಟ್ಕಳದಲ್ಲಿ ಬಿಗಿ ಬಂದೋಬಸ್ತ್: ಹೆಚ್ಚುವರಿ ಪೊಲೀಸರ ನಿಯೋಜನೆ

ಘಟನೆ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ. ಕಲ್ಲು ತೂರಾಟದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಗಣೇಶ ವಿಸರ್ಜನಾ ಮೆರವಣಿಗೆ ಸಾಗಿದ ಮಾರ್ಗದಲ್ಲಿನ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಲಭ್ಯವಿರುವ ಇತರ ಮಾಹಿತಿಗಳನ್ನು ಪರಿಶೀಲಿಸಿ ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳುತ್ತಿದ್ದಾರೆ.