ಗ್ಯಾಸ್ ಟ್ಯಾಂಕರ್ - ಡೀಸೆಲ್ ಟ್ಯಾಂಕರ್ ಡಿಕ್ಕಿ ; ತಪ್ಪಿದ ಅನಾಹುತ

27-02-21 10:23 am       Mangalore Correspondent   ಕರಾವಳಿ

ರಾಷ್ಟ್ರೀಯ ಹೆದ್ದಾರಿ 62ರ ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಡಿಕ್ಕಿ ಸಂಭವಿಸಿದೆ.

ಉಪ್ಪಿನಂಗಡಿ, ಫೆ.27 : ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 62ರ ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಡಿಕ್ಕಿ ಸಂಭವಿಸಿದ್ದು, ಗ್ಯಾಸ್ ಸೋರಿಕೆಯಾಗದ ಕಾರಣ ದೊಡ್ಡ ಅನಾಹುತ ತಪ್ಪಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಹಾಗೂ ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಲಿ ಡೀಸೆಲ್ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಹೊಸಮಜಲು ಮಸೀದಿ ಸಮೀಪ ಬೆಳಗಿನ ಜಾವ 5:30ರ ಸುಮಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ. 

ಡೀಸೆಲ್ ಟ್ಯಾಂಕರ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕರಿಬ್ಬರೂ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನೆಲ್ಯಾಡಿ ಹೊರ ಠಾಣೆ ಪೊಲೀಸರು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತ ನಡೆದ ಸ್ಥಳದ ಪಕ್ಕದಲ್ಲಿ ಖಾಸಗಿ ಆಸ್ಪತ್ರೆ, ಮಸೀದಿ ಸೇರಿದಂತೆ ಹಲವಾರು ಮನೆಗಳಿದ್ದು, ಅದೃಷ್ಟವಶಾತ್ ಗ್ಯಾಸ್ ಸೋರಿಕೆಯಾಗದ ಕಾರಣ ದೊಡ್ಡ ದುರಂತ ತಪ್ಪಿದೆ.

Gas tanker and diesel tanker got involved in an accident at Nellyadi in Kadaba, Mangalore which affected the movement of vehicles.