ಸಿಡಿ ಪ್ರಕರಣದ ತನಿಖೆಗೆ ಹೈಕೋರ್ಟ್ ಜಡ್ಜ್ ನೇಮಿಸಿ, ಆರೋಪಿಯನ್ನು ಬಂಧಿಸಿ : ಹರೀಶ್ ಕುಮಾರ್ ಆಗ್ರಹ

29-03-21 05:07 pm       Mangalore Correspondent   ಕರಾವಳಿ

ಸಿಡಿ ಪ್ರಕರಣದಲ್ಲಿ ಸಂತ್ರಸ್ತ ಯುವತಿಗೆ ರಕ್ಷಣೆ ಒದಗಿಸಬೇಕು, ಆರೋಪಿ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸಬೇಕು ಎಂದು ಹರೀಶ್ ಕುಮಾರ್ ಒತ್ತಾಯಿಸಿದ್ದಾರೆ.

ಮಂಗಳೂರು, ಮಾ.29: ಸಿಡಿ ಪ್ರಕರಣದಲ್ಲಿ ಸಂತ್ರಸ್ತ ಯುವತಿಗೆ ರಕ್ಷಣೆ ಒದಗಿಸಬೇಕು, ಆರೋಪಿ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸಬೇಕು ಅಲ್ಲದೆ, ಪ್ರಕರಣದ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ಬೆಳಕಿಗೆ ತಿಂಗಳಾದರೂ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿಯನ್ನು ಪೊಲೀಸರು ಬಂಧಿಸಿಲ್ಲ. ಆತ ಹಾದಿ ಬೀದಿಯಲ್ಲಿ ಮಾತನಾಡುವ ಜತೆಗೆ ಸಾರ್ವಜನಿಕವಾಗಿ ಓಡಾಡಿಕೊಂಡಿದ್ದಾರೆ. ಎಸ್ಐಟಿ ಯನ್ನು ತಮ್ಮ ಕೈಗೊಂಬೆ ಮಾಡಿಕೊಂಡು ಸಾಕ್ಷ್ಯ ನಾಶ ಮಾಡುವ ಅನುಮಾನ ಇದೆ ಎಂದು ಆರೋಪಿಸಿದರು. 

ಪ್ರಕರಣದ ಆರಂಭದಲ್ಲಿ ಮಹಿಳಾ ಆಯೋಗದ ಅಧ್ಯಕ್ಷರಿಂದಲೂ ಸಂತ್ರಸ್ತೆಗೆ ರಕ್ಷಣೆ ನೀಡುವ ಭರವಸೆ ನೀಡಲಾಗಿತ್ತು. ಆದರೆ, ಅಂತಹ ಯಾವುದೇ ನೆರವು ಯುವತಿಗೆ ದೊರಕಿಲ್ಲ. ಬದಲಿಗೆ ಆಕೆಯನ್ನೇ ಆರೋಪಿಯಾಗಿಸುತ್ತಿದ್ದಾರೆ ಎಂದು ಅವರು ಹೇಳಿದರು. 

ಬೆಳಗಾವಿಯ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳ ಉಪ ಚುನಾವಣೆ ಇರುವ ಹಿನ್ನೆಲೆಯಲ್ಲಿ ಪ್ರಸಕ್ತ ವಿದ್ಯಮಾನಗಳ ನಡುವೆ ಬಿಜೆಪಿ ಮತ್ತು ರಾಜ್ಯ ಸರಕಾರದ ನಾಯಕರು ಹತಾಶೆಗೊಂಡಿದ್ದಾರೆ. ಚುನಾವಣೆಯಲ್ಲಿ ಸಿಡಿ ಪ್ರಕರಣದಿಂದ ಹಿನ್ನಡೆಯಾಗುವುದನ್ನು ಮನಗಂಡು ತಮ್ಮ ಬೆಂಬಲಿಗರ ಮೂಲಕ ಕೆಪಿಸಿಸಿ ಅಧ್ಯಕ್ಷರ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಡಿಕೆ ಶಿವಕುಮಾರ್ ಪ್ರಯಾಣಿಸುವ ಕಾರಿನ ಮೇಲೆ ಕಲ್ಲು ತೂರಾಟ, ಪೊಲೀಸ್ ಬೆಂಗಾವಲು ವಾಹನದ ಮೇಲೆ ಚಪ್ಪಲಿ ಎಸೆಯುವ ಪ್ರಕರಣ ನಡೆಸುತ್ತಿದ್ದಾರೆ. ಈ ರೀತಿಯ ಬೆಳವಣಿಗೆಯನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದವರು ಹೇಳಿದರು.
ಸದಾಶಿವ ಉಳ್ಳಾಲ್, ಟಿ.ಕೆ. ಸುಧೀರ್, ನೀರಜ್‌ಪಾಲ್, ಮುರಳೀದರ ರೈ, ಸುರೇಂದ್ರ ಕಾಂಬ್ಳಿ, ಲಾರೆನ್ಸ್ ಡಿಸೋಜಾ, ವಿಶ್ವಾಸ್ ಕುಮಾರ್ ದಾಸ್ ಉಪಸ್ಥಿತರಿದ್ದರು.

Appoint High court judge for clear investigation in sex CD scandal of Ramesh Jarkiholi stated Harish Kumar in Mangalore during the press meet held at congress office.