ಎಂದಿನಂತೆ ಮಂಗಳೂರು ದಸರಾ ; ಮೆರವಣಿಗೆ ವೈಭವ ಇರಲ್ಲ ; ಜನಾರ್ದನ ಪೂಜಾರಿ 

09-09-20 06:49 pm       Mangalore Reporter   ಕರಾವಳಿ

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನೇತೃತ್ವದಲ್ಲಿ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಆಡಳಿತ ಮಂಡಳಿಯ ಸಭೆ ನಡೆದಿದ್ದು ದಸರಾ ಉತ್ಸವ ನಡೆಸಲು ನಿರ್ಧರಿಸಲಾಗಿದೆ. 

ಮಂಗಳೂರು, ಸೆ. 9: ಜಗದ್ವಿಖ್ಯಾತ ಮಂಗಳೂರು ದಸರಾಕ್ಕೆ ತನ್ನದೇ ಆದ ಇತಿಹಾಸವಿದ್ದು, ಅದನ್ನು ಸರಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಈ ಬಾರಿಯೂ ಸಂಪ್ರದಾಯದಂತೆ ನಡೆಸಲು ನಿರ್ಧರಿಸಲಾಗಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ತಿಳಿಸಿದ್ದಾರೆ. 

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನೇತೃತ್ವದಲ್ಲಿ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಆಡಳಿತ ಮಂಡಳಿಯ ಸಭೆ ನಡೆದಿದ್ದು ದಸರಾ ಉತ್ಸವ ನಡೆಸಲು ನಿರ್ಧರಿಸಲಾಗಿದೆ. 

ಮಂಗಳೂರು ದಸರಾ ಉತ್ಸವದಲ್ಲಿ ಧಾರ್ಮಿಕ ನಂಬಿಕೆಯ ಜತೆ ಕರಾವಳಿಯ ಆರ್ಥಿಕ ಪುನಶ್ಚೇತನವೂ ಅಡಗಿದೆ. ದಸರಾ ಸಂದರ್ಭ ಕೊರೊನಾ ದೇಶದಿಂದ ಮುಕ್ತಗೊಳ್ಳುವ ನಿಟ್ಟಿನಲ್ಲಿ ವಿಶೇಷ ಪ್ರಾರ್ಥನೆಯನ್ನು ನಡೆಸಲಾಗುವುದು. ಆದುದರಿಂದ ಯಾವುದೇ ಕಾರಣಕ್ಕೂ ಮಂಗಳೂರು ದಸರಾ ಮಹೋತ್ಸವವನ್ನು ನಿಲ್ಲಿಸಬಾರದು, ಎಂದಿನಂತೆ ವೈಭವದಿಂದ ನಡೆಸಬೇಕು  ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ. ಇದು ಭಕ್ತರು, ಉದ್ಯಮಿಗಳು, ವ್ಯಾಪಾರಿಗಳು, ಹಿತೈಷಿಗಳ ವಲಯಗಳ ಅಭಿಪ್ರಾಯವೂ ಆಗಿದೆ ಎಂದು ಜನಾರ್ದನ ಪೂಜಾರಿ ತಿಳಿಸಿದ್ದಾರೆ.

ದಸರಾ ಮಹೋತ್ಸವದಲ್ಲಿ ಎಂದಿನಂತೆ ದರ್ಬಾರು ಮಂಟಪದಲ್ಲಿ ಮಹಾಗಣಪತಿ, ಶಾರದೆ, ನವದುರ್ಗೆಯರ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದೆ. ಉಳಿದಂತೆ ದಸರಾ ಮಹೋತ್ಸವ ಸಂದರ್ಭ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳು ಸಾಮಾಜಿಕ ಅಂತರ ಕಾಪಾಡಿಕೊಂಡು ಆರೋಗ್ಯದ ಬಗ್ಗೆ ಎಚ್ಚರ ವಹಿಸುವ ನಿಟ್ಟಿನಲ್ಲಿ ಕ್ಷೇತ್ರದ ಆಡಳಿತ ಸಮಿತಿ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಇದಕ್ಕೆ ಭಕ್ತರ ಸಹಕಾರವೂ ಮುಖ್ಯವಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

ಮೆರವಣಿಗೆ ಇರುವುದಿಲ್ಲ

ಮಂಗಳೂರು ದಸರಾದಲ್ಲಿ ಈ ಬಾರಿ ಟ್ಯಾಬ್ಲೋ, ದೇವರ ವಿಗ್ರಹಗಳ ಮೆರವಣಿಗೆ ಇರುವುದಿಲ್ಲ. ಕ್ಷೇತ್ರವನ್ನು ಸಂಪೂರ್ಣ ವಿದ್ಯುದ್ದೀಪಗಳಿಂದ ಅಲಂಕರಿಸಲಾಗುವುದು. ಆದರೆ ನಗರದಲ್ಲಿ ಯಾವುದೇ ಅಲಂಕಾರ ನಡೆಸದಿರಲು ನಿರ್ಧರಿಸಲಾಗಿದೆ.

ಮೂರ್ತಿ ರಚನೆ ಆರಂಭ 

ದಸರಾ ಮಹೋತ್ಸವದಲ್ಲಿ ಪೂಜಿಸಲ್ಪಡುವ ಮೂರ್ತಿಗಳ ರಚನಾ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಸುಮಾರು 10ಕ್ಕೂ ಅಧಿಕ ಕಲಾವಿದರು ಇದರಲ್ಲಿ ತೊಡಗಿಸಿದ್ದಾರೆ. ನವರಾತ್ರಿ ಆರಂಭದಂದೇ ಗಣಪತಿ, ಶಾರದೆ ಸಹಿತ ಎಲ್ಲ ಮೂರ್ತಿಗಳು ಪ್ರತಿಷ್ಠಾಪನೆಗೊಳ್ಳಲಿದೆ. ಕೊರೊನಾ ಸೋಂಕಿನ ಮಧ್ಯೆಯೂ ಮಂಗಳೂರು ದಸರಾ ಮಹೋತ್ಸವ ಯಶಸ್ವಿಯಾಗಿ ನಡೆಯಬೇಕಾದರೆ ಕ್ಷೇತ್ರದ ಆಡಳಿತ ಮಂಡಳಿಯ ಜತೆ ಸಹಕಾರ ದೊಡ್ಡದು ಎಂದು ಜನಾರ್ದನ ಪೂಜಾರಿ ತಿಳಿಸಿದ್ದಾರೆ.