ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಶಿವಮೊಗ್ಗದ ವ್ಯಕ್ತಿ ಧರ್ಮಸ್ಥಳದಲ್ಲಿ ಪತ್ತೆ

08-10-21 01:33 pm       Mangalore Reporter   ಕರಾವಳಿ

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ, ಅ.8 : ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ  ಸಿಬ್ಬಂದಿ ಆಗಿದ್ದ ವ್ಯಕ್ತಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.‌

ಮೇಲಧಿಕಾರಿಗಳ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಚೀಟಿಯಲ್ಲಿ ಬರೆದಿಟ್ಟು ಗಿರಿರಾಜ್ ಎಂಬವರು ಸೆ.28 ರಂದು ನಾಪತ್ತೆಯಾಗಿದ್ದರು. ಚೀಟಿ ನೋಡಿ ಆಘಾತಗೊಂಡಿದ್ದ ಪತ್ನಿ ಪೊಲೀಸರಿಗೆ ದೂರು ನೀಡಿದ್ದರು. ಒಂದು ವಾರದಿಂದ ನಾಪತ್ತೆಯಾಗಿದ್ದರಿಂದ ಗಿರಿರಾಜ್ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. 

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಿರಿರಾಜ್ ಪ್ರಥಮ ದರ್ಜೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದರು. 10 ದಿನಗಳ ಬಳಿಕ ಗಿರಿರಾಜ್​ ಅಸ್ವಸ್ಥ ಸ್ಥಿತಿಯಲ್ಲಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ. ಸ್ಥಳೀಯರು ಪರಿಚಯ ಕೇಳಿದಾಗ, ಗಿರಿರಾಜ್ ಎಂದು ಹೇಳಿದ್ದು ಸಂಶಯಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. 

ಈ ಬಗ್ಗೆ ಶಿವಮೊಗ್ಗ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಡೆತ್ ನೋಟ್ ಬರೆದಿಟ್ಟಿದ್ದ ಬಗ್ಗೆ ತನಿಖೆ ನಡೆಸಲಿದ್ದಾರೆ.

A missing Shivamogga Man found in Dharmasthala in a uncouncious state.